Shiggaon: ಶಿಗ್ಗಾವಿಯಲ್ಲಿ ಯಾಸಿರ್ ಖಾನ್ ಗೆಲುವು: ಬಸವರಾಜ ಬೊಮ್ಮಾಯಿ ಹೇಳಿದ್ದೇನು ?
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಇನ್ನು ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಅವರು ಗೆಲ್ಲಲಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರಗಳು ಉಲ್ಟಾಪಲ್ಟಾ ಆಗಿದ್ದು ಭರತ್ ಬೊಮ್ಮಾಯಿ ಸೋತಿದ್ದಾರೆ. ಮಗ ಸೋತಿರುವ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಈ ಬಾರಿ ಶಿಗ್ಗಾವಿ ವಿಧಾನಸಭೆ ಚುನಾವಣೆಯಲ್ಲಿ ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆ ಎಂದು ಭಾರೀ ವಿಶ್ವಾಸವಿತ್ತು.ಆದರೆ, ಭಾರೀ ಆಘಾತವೇ ಎದುರಾಗಿದೆ.
ಭರತ್ ಬೊಮ್ಮಾಯಿ ಅವರ ಸೋಲಿನ ಬಗ್ಗೆ ಇದೀಗ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಉಪ ಚುನಾವಣೆಯಲ್ಲಿ ಶಿಗ್ಗಾವಿ ಸವಣೂರು ಕ್ಷೇತ್ರದ ಜನರು ನೀಡಿರುವ ತೀರ್ಪನ್ನು ನಾವು ಶಿರಬಾಗಿ ಒಪ್ಪಿಕೊಳ್ಳಿತ್ತೇವೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಶಿಗ್ಗಾವಿ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಈ ಹಿಂದಿನಂತೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಮೇಲೆ ಮೊದಲ ಬಾರಿ ಅವರು ಮಾನಾಡಿದ್ದಾರೆ. ಶಿಗ್ಗಾವಿ ಕ್ಷೇತ್ರದ ಜನರು ನಮಗೆ ಕೊಟ್ಟಿರುವ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ ಹಾಗೂ ಸ್ವೀಕಾರಿಸುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ಗೆ ಅಭಿನಂದನೆಗಳು. ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಜನರು ನಮಗೆ ನೀಡಿದ್ದ ಸ್ಪಂದನೆಯನ್ನು ನೋಡಿ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ, ಕಾಂಗ್ರೆಸ್ನಿಂದ ವಿಪರೀತವಾದ ಹಣದ ಹೊಳೆಯೇ ಹರಿದಿದೆ. ಹೀಗಾಗಿ, ಅವರು ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ. ಕಾಂಗ್ರೆಸ್ ಆಡಳಿತ ಪಕ್ಷದ ಎಂದು ಶಾಸಕರನ್ನು ಇಲ್ಲಿನ ಜನ ಆಯ್ಕೆ ಮಾಡಿದ್ದಾರೆ ಎಂದಿದ್ದಾರೆ.
ನಾವು (ಬಿಜೆಪಿ) ಶಿಗ್ಗಾವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಅಭಿವೃದ್ಧಿ ಪರ್ವ ಈ ಹಿಂದಿನಂತೆಯೇ ಮುಂದುವರೆಯಲಿ ಎಂದು ನಾನು ಆಶಿಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆದಾಗಲಿ ಎಂದು ಬಯಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ, ಈ ವಿಧಾನಸಭೆ ಚುನಾವಣೆಯಲ್ಲಿ 10 ಜನ ಸಚಿವರು, 40ಕ್ಕಿಂತ ಹೆಚ್ಚು ಶಾಸಕರು, ಮಾಜಿ ಶಾಸಕರು ಬಂದು ಕ್ಷೇತ್ರದಲ್ಲಿಯೇ ಕುಳಿತು ಪ್ರಚಾರ ಮಾಡಿದ್ದರು. ಸರ್ಕಾರ ವರ್ಸಸ್ ಬೊಮ್ಮಾಯಿ ಎಂದೇ ಇದು ಬಿಂಬಿತವಾಗಿತ್ತು. ಕಾಂಗ್ರೆಸ್ನವರು ಸರ್ಕಾರದ ಯಂತ್ರ ಹಾಗೂ ಹಣದಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಅವರು ದೂರಿದ್ದಾರೆ.

ಶಿಗ್ಗಾವಿಯಲ್ಲಿ ಲೋಕಸಭೆ ಚುನಾವಣೆಯ ನಂತರ ನಾವು ಅದ್ಭುತವಾಗಿ ಕೆಲಸ ಮಾಡಿದ್ದೇವು. ಆದರೆ, ಇಡೀ ಸರ್ಕಾರವೇ ಇಲ್ಲಿಗೆ ಬಂತು. ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಸರ್ಕಾರಕ್ಕೆ ಅನುಕೂಲಕರ ವಾತಾವರಣ ಇರುತ್ತದೆ. ನಾವು ಸಹ ಒಂದು ಕಾಲದಲ್ಲಿ 17 ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೆವು. ಈ ಸರ್ಕಾರದ ಕೆಲಸದ ಮೇಲೆ ಮತ ಬಂದಿದೆ ಎಂದು ಹೇಳುವುದಕ್ಕೆ ಆಗಲ್ಲ. ನಾವು ಈ ಹಿಂದೆ ನಡೆದ ಉಪ ಚುನಾವಣೆಗಳಲ್ಲಿ ಹೆಚ್ಚು ಸ್ಥಾನದಲ್ಲಿ ಗೆಲುವು ಸಾಧಿಸಿದರೂ, ಅದಾದ ಮೇಲೆ ಸರ್ಕಾರ ಕಳೆದುಕೊಂಡಿದ್ದೆವು. ಹೀಗಾಗಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದ ಆಡಳಿತಕ್ಕೆ ಸರ್ಟಿಫಿಕೇಟ್ ಅಂತ ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ ಏನು ಇಲ್ಲ ಅಂತಲೂ ಅವರು ಹೇಳಿದ್ದಾರೆ.
ಇನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆ ಬಹುಮತ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ ಹಾಗೂ ಅಲ್ಲಿನ ಮಹಾಯುತಿಯ ಮೂರು ಪಕ್ಷದ ಒಗ್ಗಟ್ಟಿನಿಂದ ಕಳೆದ ಮೂರು ವರ್ಷದ ಸರ್ಕಾರದ ಅಭಿವೃದ್ಧಿ ಮೇಲೆ ಈಗ ಜಯ ಸಿಕ್ಕಿದೆ. ಲೋಕಸಭಾ ಚುನಾವಣೆ ನಂತರ ಜನ ನರೇಂದ್ರ ಮೋದಿ ಅವರ ಪರ ನಿಂತಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.
ವಿರೋಧ ಪಕ್ಷದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಸೀಟು ಹೆಚ್ಚಿಸಿ ಬೀಗುತ್ತಿದ್ದರು. ಅವರಿಗೆ ಅವರ ಸ್ಥಾನವನ್ನು ಮಹಾರಾಷ್ಟ್ರ ಜನ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.












Click it and Unblock the Notifications