ಬಿ.ಎಸ್.ಯಡಿಯೂರಪ್ಪಗೆ ಹೈಕಮಾಂಡ್ನಿಂದ ಭರ್ಜರಿ ಉಡುಗೊರೆ?
Recommended Video
ಬೆಂಗಳೂರು, ಮೇ 21 : 2019ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳುವ ಸುದ್ದಿಗಳು ಹಬ್ಬಿವೆ. ಬಿಜೆಪಿ ವಲಯದಲ್ಲಿಯೂ ಅಚ್ಚರಿಯ ಸುದ್ದಿಯೊಂದು ಹೊರ ಬಿದ್ದಿದೆ.
ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ 20+ ಸ್ಥಾನಗಳಲ್ಲಿ ಜಯಗಳಿಸಲಿವೆ ಎಂದು ಹೇಳಿವೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು '22 ಸ್ಥಾನಗಳಲ್ಲಿ ಪಕ್ಷ ಜಯಗಳಿಸಲಿದೆ' ಎಂದು ಹಲವು ಬಾರಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಿದರೆ ರಾಜ್ಯದಲ್ಲಿರುವ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದರಲ್ಲೂ ಚಿಂಚೋಳಿ, ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿಯೇ ಜಯಗಳಿಸಲಿದೆ ಎಂಬ ಸುದ್ದಿ ಹಬ್ಬಿದೆ.
ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರ ದೊಡ್ಡದ್ದು. 76 ವರ್ಷದ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಲೋಕಸಭಾ ಕ್ಷೇತ್ರಗಳಿಗೆ ತೆರಳಿ ಪ್ರಚಾರ ಮಾಡಿದ್ದಾರೆ.

ಯಡಿಯೂರಪ್ಪ ಶ್ರಮಕ್ಕೆ ಪ್ರತಿಫಲ
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿಯ ಅನೇಕ ನಾಯಕರು ಹೇಳುತ್ತಿದ್ದಾರೆ. ಯಡಿಯೂರಪ್ಪ ಅವರು ಲೋಕಸಭಾ ಚುಣಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳಿಸಲು ಹಗಲಿರುಳು ಕೆಲಸ ಮಾಡಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪ್ರಚಾರವನ್ನುನಡೆಸಿದ್ದಾರೆ.

ಯಡಿಯೂರಪ್ಪ ರಾಷ್ಟ್ರ ರಾಜಕೀಯಕ್ಕೆ?
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20+ ಸ್ಥಾನಗಳಲ್ಲಿ ಜಯಗಳಿಸಿದರೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕಮಾಂಡ್ ನಾಯಕರು ಭರ್ಜರಿ ಉಡುಗೊರೆ ನೀಡಲಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೊಂಡರೆ ಯಡಿಯೂರಪ್ಪ ಅವರು ಸಚಿವರಾಗಲಿದ್ದಾರೆ. ಪ್ರಮುಖ ಖಾತೆಯ ಜವಾಬ್ದಾರಿಯನ್ನು ಯಡಿಯೂರಪ್ಪ ಅವರಿಗೆ ನೀಡುವ ಕುರಿತು ಚಿಂತನೆ ನಡೆದಿದೆ.

ರಾಜ್ಯಸಭೆಗೆ ಆಯ್ಕೆ
76 ವರ್ಷದ ಬಿ.ಎಸ್.ಯಡಿಯೂರಪ್ಪ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಲು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ರಾಷ್ಟ್ರ ರಾಜಕೀಯಕ್ಕೆ ಕರೆದುಕೊಂಡು ಹೋಗಲಾಗುತ್ತದೆ ಎನ್ನುವುದು ಸುದ್ದಿ.

ಹಿಂದೆಯೇ ಮಂತ್ರಿ ಸ್ಥಾನದ ನಿರೀಕ್ಷೆ ಇತ್ತು
2014ರ ಲೋಕಸಭಾ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆಗ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಯಡಿಯೂರಪ್ಪ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ಬೇಡಿಕೆ ಇತ್ತು. ಈ ಬಾರಿ ಬೇಡಿಕೆಯನ್ನು ಈಡೇರಿಸಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಯಾರು?
76 ವರ್ಷದ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರು, ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರು. ಅವರು ರಾಷ್ಟ್ರ ರಾಜಕಾರಣಕ್ಕೆ ಹೋದರೆ, ರಾಜ್ಯದಲ್ಲಿ ಬಿಜೆಪಿಗೆ ನೂತನ ಸಾರಥಿ ನೇಮಕವಾಗಬೇಕು. ಈ ಕುರಿತು ಈಗಾಗಲೇ ಪಕ್ಷದ ವಲಯದಲ್ಲಿಯೇ ಚರ್ಚೆಗಳು ಆರಂಭವಾಗಿವೆ. ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications