Breaking news : ರಹಸ್ಯವಾಗಿ ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ!
Recommended Video

ಬೆಂಗಳೂರು, ಜೂನ್ 25 : ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಹಸ್ಯವಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಸೋಮವಾರ ಯಡಿಯೂರಪ್ಪ ಅವರು ಅಹಮದಾಬಾದ್ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಯಡಿಯೂರಪ್ಪ ಜೊತೆ ಇಬ್ಬರು ಕಾಂಗ್ರೆಸ್ ಶಾಸಕರು ಇದ್ದಾರೆ? ಎಂಬ ಸುದ್ದಿ ಹಬ್ಬಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಯಡಿಯೂರಪ್ಪ ಅವರು ಸೋಮವಾರ ಬೆಳಗ್ಗೆ ಖಾಸಗಿ ಕಾರಿನಲ್ಲಿ ಡಾಲರ್ಸ್ ಕಾಲೋನಿ ನಿವಾಸದಿಂದ ತೆರಳಿದ್ದರು. ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಯಡಿಯೂರಪ್ಪ ಅಮಿತ್ ಶಾ ಭೇಟಿ ಮಾಡಿದ್ದಾರೆ.

ಬಜೆಟ್ ಮಂಡನೆ ಮಾಡುವ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಇದರ ನಡುವೆಯೇ ಯಡಿಯೂರಪ್ಪ ಅಮಿತ್ ಶಾ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
ಕರ್ನಾಟಕದ ಮೈತ್ರಿ ಸರ್ಕಾರದ ಅಸಮಾಧಾನದ ಲಾಭ ಪಡೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಇದರ ಭಾಗವಾಗಿಯೇ ಯಡಿಯೂರಪ್ಪ ಅವರು ಅಮಿತ್ ಶಾ ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಮಾನದ ಮಾಹಿತಿ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕಾಂಗ್ರೆಸ್ ಶಾಸಕರು ಬಿಎಸ್ವೈ ಜೊತೆ : ಬಿ.ಎಸ್.ಯಡಿಯೂರಪ್ಪ ಜೊತೆ ಇಬ್ಬರು ಕಾಂಗ್ರೆಸ್ ಶಾಸಕರು ಇದ್ದಾರೆ? ಎಂಬ ಸುದ್ದಿ ಹಬ್ಬಿದ್ದು ಕುತೂಹಲಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದ ಇಬ್ಬರು ಶಾಸಕರು ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದು, ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಯಡಿಯೂರಪ್ಪ ಭೇಟಿ ಮಾಡಿರುವ ಇಬ್ಬರು ಕಾಂಗ್ರೆಸ್ ಶಾಸಕರು ಯಾರು? ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಕೆಲವು ಕಾಂಗ್ರೆಸ್ ಶಾಸಕರ ಜೊತೆ ದೂರವಾಣಿ ಮೂಲಕ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಆಪರೇಷನ್ ಕಮಲ ಮತ್ತೆ ಆರಂಭವಾಗಿದೆಯೇ? ಎಂಬ ಬಗ್ಗೆ ಅನುಮಾನ ಮೂಡಿಸಿದೆ.
ಯಡಿಯೂರಪ್ಪ ಅಮಿತ್ ಶಾ ಭೇಟಿ ಬಗ್ಗೆ ರಾಜ್ಯದ ಯಾವ ನಾಯಕರು ಬಹಿರಂಗ ಹೇಳಿಕೆಗಳನ್ನು ನೀಡಿಲ್ಲ. ಅಮಿತ್ ಶಾ ಭೇಟಿ ಬಳಿಕ ಯಡಿಯೂರಪ್ಪ ಅವರು ಸಹ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಾರಾಂತ್ಯದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.












Click it and Unblock the Notifications