ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಭೇಟಿ!
ಬೆಂಗಳೂರು, ಮಾರ್ಚ್ 12 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಶಾಮನೂರು ಶಿವಶಂಕರಪ್ಪ ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗಿರುವಾಗ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಭಾನುವಾರ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಭೇಟಿ ಮಾಡಿದ್ದಾರೆ. ಉಭಯ ನಾಯಕರು ಒಟ್ಟಿಗೆ ಊಟ ಸವಿದಿದ್ದಾರೆ. ವೀರಶೈವ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಹಲವು ಚರ್ಚೆಗಳು ನಡೆಯುತ್ತಿರುವಾಗ ಈ ಭೇಟಿ ಕುತೂಲಕ್ಕೆ ಕಾರಣವಾಗಿದೆ.
ಮಾರ್ಚ್ 14ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸರ್ಕಾರ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಿದೆ. ಅದಕ್ಕೂ ಮೊದಲು ಇಬ್ಬರು ನಾಯಕರು ಭೇಟಿಯಾಗಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಶಾಮನೂರು ಶಿವಶಂಕರಪ್ಪ ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.
'ವೀರಶೈವ ಮಹಾಸಭಾ ಯಾವುದೇ ಪಕ್ಷಕ್ಕೂ ಸೇರಿಲ್ಲ. ಮಹಾಸಭೆ ಸ್ವತಂತ್ರ ನಿರ್ಣಯ ತೆಗೆದುಕೊಳ್ಳುತ್ತದೆ. ವೀರಶೈವ ಲಿಂಗಾಯತ ಎರಡೂ ಒಂದೇ ಎನ್ನುವುದು ನಮ್ಮ ಸ್ಪಷ್ಟ ಅಭಿಪ್ರಾಯ' ಎಂದು ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದರು.












Click it and Unblock the Notifications