ಬಿಎಸ್ವೈ ವಾಪಸಾತಿಗೆ ದಿನಾಂಕ ನಿಗದಿಯಷ್ಟೇ ಬಾಕಿ: ಅಶೋಕ್
ನವದೆಹಲಿ, ಡಿ.24: ಬಿಜೆಪಿಯನ್ನು ತೊರೆದು ಕೆಜೆಪಿ ಪಕ್ಷವನ್ನು ಕಟ್ಟಿ, ಕೆಜೆಪಿ ಮತ್ತು ಬಿಜೆಪಿ ಎರಡಕ್ಕೂ ಮುಳುವಾಗಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಶುಭಸ್ಯ ಶೀಘ್ರಂ ಎಂಬಂತೆ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆಗೆ ಬಿದ್ದಿರುವ ರಾಜ್ಯ ಬಿಜೆಪಿ ನಾಯಕರು ಆ ಪ್ರಯತ್ನಕ್ಕೆ ವೇಗ ತುಂಬಲು ಮುಂದಾಗಿದ್ದಾರೆ.
ಡಿಸೆಂಬರ್ 27ರಂದು ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವೇಳೆಗೆ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಕ್ಕೆ ರಾಜ್ಯ ನಾಯಕರು ತೀವ್ರ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಅಶೋಕ್ ಅವರು ಪಕ್ಷದ ವರಿಷ್ಠರ ಜತೆ ಚರ್ಚಿಸುವ ಸಂಬಂಧ ಇಂದು ಮಂಗಳವಾರ ದೆಹಲಿ ತಲುಪಿದ್ದಾರೆ. ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುತ್ತಿದ್ದು, ಇದು ಮುಗಿದ ನಂತರ ಸಂಜೆಯ ವೇಳೆಗೆ ಈ ಇಬ್ಬರೂ ನಾಯಕರು ರಾಜನಾಥ ಸಿಂಗ್ ಹಾಗೂ ಅಡ್ವಾಣಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಿವಮೊಗ್ಗದಲ್ಲಿ ನಿನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್ ಅವರನ್ನು ಬಿಎಸ್ ಯಡಿಯೂರಪ್ಪ ಭೇಟಿ ಮಾಡಿರುವುದು ಭಾರಿ ಮಹತ್ವ ಪಡೆದುಕೊಂಡಿದ್ದು, ಅದರ ಬೆನ್ನಲ್ಲೇ ಶೆಟ್ಟರ್ ಹಾಗೂ ಅಶೋಕ್ ದೆಹಲಿಗೆ ತೆರಳಿ ಇತರೆ ವರಿಷ್ಠರ ಮನವೊಲಿಸುವ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ವಾಪಸಾತಿ ಬಹುತೇಕ ಆಖೈರಾಗಿದೆ. ಆದರೆ ದಿನಾಂಕವಷ್ಟೇ ಆಖೈರಾಗಬೇಕಿದೆ ಎಂದು ಅಶೋಕ್ ದಿಲ್ಲಿಯಲ್ಲಿ ತಿಳಿಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತಂತೆ ನಮ್ಮ ಕೇಂದ್ರ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಂಡು, ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ತಿಳಿಸಿದರು. ಹಿಂದೆ ನಡೆದಿದ್ದೆಲ್ಲಾ ಕೆಟ್ಟ ಕನಸೆಂದು ಮರೆತು ನಮ್ಮ ಬಿಎಸ್ವೈ ಅವರನ್ನು ಮತ್ತೆ ಬಿಜೆಪಿಗೆ ಕರೆ ತರುವ ಪ್ರಯತ್ನ ಸಫಲವಾಗಿದೆ. ಇನ್ನೇನಿದ್ದರೂ ನಮ್ಮ ವರಿಷ್ಠರ ಘೋಷಣೆ ಬಾಕಿ ಇದೆ ಎಂದು ಹೇಳಿದರು.
ಬಿಎಸ್ವೈ ಅವರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಒತ್ತು ಕೊಡುತ್ತಿದ್ದೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಹಿಂದಿನ ಚುನಾವಣೆಗಿಂತಲೂ ಉತ್ತಮ ಪ್ರದರ್ಶನ ನೀಡಿ ಹೆಚ್ಚು ಸ್ಥಾನಗಳನ್ನು ಪಡೆಯುವುದೇ ನಮ್ಮ ಮುಂದಿರುವ ಗುರಿ ಎಂದು ಅಶೋಕ್ ತಿಳಿಸಿದರು.
ಯಡಿಯೂರಪ್ಪ ಅವರು ಬಿಜೆಪಿಗೆ ದೊಡ್ಡ ಶಕ್ತಿ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಇಂದು ಹಿರಿಯ ನಾಯಕರ ಸಮ್ಮುಖದಲ್ಲಿ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ. ಯಡಿಯೂರಪ್ಪ ಅವರು ಬಿಜೆಪಿಗೆ ದೊಡ್ಡ ಶಕ್ತಿಯಿದ್ದಂತೆ ಎಂದು ಬಿಜೆಪಿ ಹಿರಿಯ ಮುಖಂಡ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.












Click it and Unblock the Notifications