ಈ ಬಾರಿ ಹಾನಿ ಪ್ರಮಾಣ ಹೆಚ್ಚಾಗಿದೆ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಅ. 22: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಮೂರು ತಿಂಗಳುಗಳ ಅವಧಿಯಲ್ಲಿ ಎರಡನೇ ಬಾರಿ ಪ್ರವಾಹ ಸ್ಥಿತಿ ಎದುರಾಗಿದೆ. ಹೀಗಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿನ್ನೆ (ಅ.21) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ಮಾಡಿ ಬಂದಿದ್ದಾರೆ. ಕಲಬುರಗಿ, ಬೆಳಗಾವಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಸಿಎಂ ಯಡಿಯೂರಪ್ಪ ಅವರು ಮಾಡಿದ್ದು, ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ವಿಧಾನಸೌಧದಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಆ ಭಾಗದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಕಳೆದ ಬಾರಿಗಿಂತಲೂ ಈ ಬಾರಿ ಹಾನಿಯ ಪ್ರಮಾಣ ಹೆಚ್ಚಾಗಿದೆ. ಭಾರಿ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ. ಮನೆ ಕಳೆದುಕೊಂಡವರಿಗೆ ತಕ್ಷಣದ ಪರಿಹಾರವಾಗಿ 10 ಸಾವಿರ ರೂ. ವಿತರಣೆ ಮಾಡಿದ್ದೇವೆ.

ಹಾನಿಯ ಅಂದಾಜಿನ ಬಗ್ಗೆ ಇಂದು ಸಚಿವ ಸಂಪುಟದಲ್ಲಿ ಚರ್ಚಿಸಿ ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಎನ್ ಡಿ ಆರ್ ಎಫ್ ನಿಯಮಾವಳಿ ತಿದ್ದುಪಡಿ ಮಾಡುವ ಬಗ್ಗೆಯೂ ಇಂದು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.












Click it and Unblock the Notifications