ಬಿಜೆಪಿ ಸರ್ಕಾರ ರಚನೆ ಮಾಡುವ ಹೊಣೆ ಯಡಿಯೂರಪ್ಪ ಹೆಗಲಿಗೆ
Recommended Video
ಬೆಂಗಳೂರು, ಸೆಪ್ಟೆಂಬರ್ 20 : ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆ ಆಗಲಿದೆಯೇ?. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆಯೇ?. ಬಿಜೆಪಿ ಸರ್ಕಾರ ರಚನೆ ಮಾಡುವ ಸಂಪೂರ್ಣ ಜವಾಬ್ದಾರಿಯನ್ನು ಶಾಸಕರು ಯಡಿಯೂರಪ್ಪ ಅವರಿಗೆ ನೀಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ವಿಶೇಷ ಸಭೆ ಬಳಿಕ ಬಿ.ಎಸ್.ಯಡಿಯೂರಪ್ಪ ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿದರು. ಈ ಸಮಯದಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ಕುರಿತು ಚರ್ಚೆಗಳು ನಡೆದಿವೆ.
ಯಡಿಯೂರಪ್ಪನವರೇ ಅಧಿಕಾರ ನನ್ನ ಬಳಿ ಇದೆ: ಕುಮಾರಸ್ವಾಮಿ ನೇರ ಎಚ್ಚರಿಕೆ
'ಈಗ ಆಪರೇಷನ್ ಕಮಲಕ್ಕೆ ಕೈ ಹಾಕುವುದು ಬೇಡ, ಇದರ ಪರಿಣಾಮ ಲೋಕಸಭೆ ಚುನಾವಣೆಯ ಮೇಲೆ ಉಂಟಾಗಲಿದೆ' ಎಂದು ಕೆಲವು ಶಾಸಕರು ಅಭಿಪ್ರಾಯಪಟ್ಟರು. ಅಂತಿಮವಾಗಿ ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಯ ಸಂಪೂರ್ಣ ಜವಾಬ್ದಾರಿಯನ್ನು ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬದಲಾಯಿಸಿ, ಅಮಿತ್ ಶಾಗೆ ಪತ್ರ
'ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುವುದಿಲ್ಲ. ಸರ್ಕಾರ ಪತನಗೊಂಡರೆ ಮುಂದೇನು ಮಾಡಬಹುದು? ಎಂದು ಕಾನೂನು ತಜ್ಞರು, ಪಕ್ಷದ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ' ಎಂದು ಯಡಿಯೂರಪ್ಪ ಸಭೆಯಲ್ಲಿ ಹೇಳಿದ್ದಾರೆ.
ಕರ್ನಾಟಕ ಬಿಜೆಪಿ ವಿಶೇಷ ಸಭೆಯಲ್ಲಿ ನಡೆದ ಚರ್ಚೆಗಳೇನು?
ಶಾಸಕರ ಸಭೆಯಲ್ಲಿ ನಡೆದ ಚರ್ಚೆ ಏನು?
ಶಾಸಕರ ಸಭೆಯಲ್ಲಿ ಕಾಂಗ್ರೆಸ್ ಕಿತ್ತಾಟದಿಂದ ನಮಗೆ ಈಗಲೂ ಲಾಭವಾಗಲಿದೆ. ಕಾಂಗ್ರೆಸ್ನ ಅತೃಪ್ತ ಲಿಂಗಾಯತ ಶಾಸಕರ ಜೊತೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಸಂಖ್ಯೆ 14 ದಾಟಲು ಕಾಯುತ್ತಿದ್ದೇನೆ ಎಂದು ಚರ್ಚೆ ನಡೆಯಿತು.
ಆದರೆ, ಆಪರೇಷನ್ ಕಮಲಕ್ಕೆ ಕೈ ಹಾಕುವುದು ಬೇಡ ಎಂದು ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಲೋಕಸಭೆ ಚುನಾವಣೆಯತ್ತ ಗಮನ ಹರಿಸುವುದು ಉತ್ತಮ ಎಂದು ಶಾಸಕರು ಒತ್ತಾಯಿಸಿದರು.
ಅರವಿಂದ ಲಿಂಬಾವಳಿ ಹೇಳಿಕೆ
ಸಭೆಯ ಬಳಿಕ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರು, 'ಇವತ್ತಿನ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರವನ್ನು ಉರುಳಿಸುವುದಿಲ್ಲ. ಒಂದು ವೇಳೆ ಸರ್ಕಾರ ಬಿದ್ದು ಹೋದರೆ ಸರ್ಕಾರ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಯಡಿಯೂರಪ್ಪ ಅವರಿಗೆ ನೀಡಲಾಗಿದೆ' ಎಂದರು.
ಕುಮಾರಸ್ವಾಮಿ ಪ್ರಯತ್ನ ಮಾಡುತ್ತಿದ್ದಾರೆ
ಎಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಜೊತೆ ಬಿಜೆಪಿಯ ಶಾಸಕರು ಇದ್ದಾರೆ ಎಂದು ಹೇಳುತ್ತಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳಲು ಅವರು ಬಿಜೆಪಿ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಅವರು ಯಾವ ಮಟ್ಟಕಾದರೂ ಇಳಿಯುತ್ತಾರೆ ಎಂದು ಶಾಸಕರ ಸಭೆಯಲ್ಲಿ ಚರ್ಚೆ ನಡೆಯಿತು.
ಪರಿಷತ್ ಚುನಾವಣೆ ಬಗ್ಗೆ ಚರ್ಚೆ
ಅಕ್ಟೋಬರ್ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್ಗೆ 3 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಚರ್ಚೆ ನಡೆಯಿತು. ಕಾಂಗ್ರೆಸ್ ಜೆಡಿಎಸ್ನ ಹಲವು ಶಾಸಕರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಇದರ ಲಾಭವನ್ನು ಪಡೆದು ಕನಿಷ್ಠ ಒಂದು ಸ್ಥಾನದಲ್ಲಿ ಆದರೂ ಗೆಲುವು ಸಾಧಿಸಬೇಕು ಎಂದು ಚರ್ಚೆ ನಡೆಯಿತು.