ಸಿಎಂ ರಾಜೀನಾಮೆಗೆ ಬಿಜೆಪಿ ಧರಣಿ : ಯಡಿಯೂರಪ್ಪ ಹೇಳಿದ್ದೇನು?
Recommended Video
ಬೆಂಗಳೂರು, ಜುಲೈ 10 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಕ್ಷಣದ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಧರಣಿ ನಡೆಸಿದರು.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಾಯಿತು. ಸರ್ಕಾರ ಬಹುಮತ ಕಳೆದುಕೊಂಡಿದೆ, ಕುಮಾರಸ್ವಾಮಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಯಿತು.
ಒಂದು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿದ ಬಿಜೆಪಿ ನಾಯಕರು ಬಳಿಕ ರಾಜಭವನಕ್ಕೆ ಭೇಟಿ ನೀಡಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸಿದರು. ಈ ಮೂಲಕ ರಾಜ್ಯಪಾಲರ ಮೇಲೆ ಒತ್ತಡ ಹೇರಿದರು.
ಇದುವರೆಗೂ ಕಾಂಗ್ರೆಸ್ನ 10, ಜೆಡಿಎಸ್ನ 3 ಶಾಸಕರು ರಾಜೀನಾಮೆ ನೀಡಿದ್ದು ಸರ್ಕಾರ ಅಲ್ಪ ಮತಕ್ಕೆ ಕುಸಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇದುವರೆಗೂ ಯಾವುದೇ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿಲ್ಲ...

ಅಧಿವೇಶನ ನಡೆಸುವ ನೈತಿಕತೆ ಇಲ್ಲ
'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿವೇಶನ ನಡೆಸುವ ನೈತಿಕತೆ ಇಲ್ಲ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಬಿ.ಎಸ್.ಯಡಿಯೂರಪ್ಪ ಅವರು ಆಗ್ರಹಿಸಿದರು.

ಕೂಡಲೇ ರಾಜೀನಾಮೆ ಅಂಗೀಕರಿಸಬೇಕು
ಧರಣಿ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಸ್ಪೀಕರ್ ರಮೇಶ್ ಕುಮಾರ್ ಅವರು ಕೂಡಲೇ ಶಾಸಕರ ರಾಜೀನಾಮೆ ಅಂಗೀಕರಿಸಬೇಕು. ರಾಜೀನಾಮೆ ನೀಡುವ ಶಾಸಕರಿಗೆ ಸೂಕ್ತ ಭದ್ರತೆಯನ್ನು ಪೊಲೀಸರು ನೀಡಬೇಕು' ಎಂದರು.

ನಮಗೆ ಅಪಾರವಾದ ಗೌರವವಿದೆ
'ಸ್ಪೀಕರ್ ಬಗ್ಗೆ ನಮಗೆ ಅಪಾರವಾದ ಗೌರವಿದೆ. ಅವರು ಕೂಡಲೇ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬೇಕು. ನಾವು ಮಧ್ಯಾಹ್ನ ಸ್ಪೀಕರ್ ಭೇಟಿ ಮಾಡಲು ತೀರ್ಮಾನಿಸಿದ್ದೇವೆ' ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇವೆ
'ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಗೂಂಡಾಗಿರಿ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇವೆ. ಅತೃಪ್ತ ಶಾಸಕರು ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂ ಆದೇಶಕ್ಕೆ ಕಾಯದೇ ರಾಜೀನಾಮೆ ಅಂಗೀಕರಿಸಬೇಕು' ಎಂದು ಯಡಿಯೂರಪ್ಪ ಹೇಳಿದರು.












Click it and Unblock the Notifications