ಅಪರೂಪದ ಪ್ರಸಂಗ: ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖಾಮುಖಿ!
ಬೆಂಗಳೂರು, ಜ. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬರುತ್ತಿದ್ದಂತೆಯೆ ಸಿದ್ದರಾಮಯ್ಯ ಅವರು ತಮ್ಮ ಭಾಷಣವನ್ನು ನಿಲ್ಲಿಸಿದ ಅಪರೂಪದ ಪ್ರಸಂಗ ಬೆಂಗಳೂರಿನಲ್ಲಿ ನಡೆಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದ ಸ್ಥಳಕ್ಕೆ ಸಿಎಂ ಯಡಿಯೂರಪ್ಪ ಯಾಕೆ ಭೇಟಿ ನೀಡಿದ್ದರು ಎಂಬ ಗೊಂದಲ ಮಾಡಿಕೊಳ್ಳುವುದು ಬೇಡ. ಯಾಕೆಂದರೆ ಸಂಗೊಳ್ಳಿ ರಾಯಣ್ಣ ಅವರ 190ನೇ ಸ್ಮರಣೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ರಾಯಣ್ಣ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವಾಗ ಇಬ್ಬರೂ ನಾಯಕರು ಮುಖಾಮುಖಿಯಾಗಿದ್ದಾರೆ.
Recommended Video
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 190ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು. ಅದೇ ಸಂದರ್ಭದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಸಿಎಂ ಯಡಿಯೂರಪ್ಪ ಅವರೂ ಆಗಮಿಸಿದರು. ಆಗ ಸಿದ್ದರಾಮಯ್ಯ ಅವರು ಭಾಷಣ ನಿಲ್ಲಿಸಿದರು. ಈ ಸಂದರ್ಭದಲ್ಲಿ ಮುಖಾಮುಖಿಯಾದ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಅವರು ಪರಸ್ಪರ ಕೈ ಮುಗಿದು, ಕೈ ಹಿಡಿದು ಗಣರಾಜ್ಯೋತ್ಸವದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಬಳಿಕ ಉಭಯ ಕುಶಲೋಪರಿ ವಿಚಾರಿಸಿಕೊಂಡರು.
ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತೆರಳಿದರು. ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಗೊಳ್ಳಿ ರಾಯಣ್ಣ ಅವರ 190 ನೇ ಸ್ಮರಣೋತ್ಸವದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಹೆಚ್.ಎಂ. ರೇವಣ್ಣ ಮತ್ತಿತರರು ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು.