ನನಗೆ ಪ್ರವಾಹ ಸ್ಥಿತಿಯ ವಾಸ್ತವ ಚಿತ್ರಣ ಕೊಡಿ: ಯಡಿಯೂರಪ್ಪ
ಬೆಂಗಳೂರು, ಅ. 16: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೀಡಿಯೋ ಸಂವಾದ ನಡೆಸಿದರು.
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಅವರು ಸೂಚಿಸಿದರು.
ಬೆಳಗಾವಿಯಲ್ಲಿ ಸುರಿದ ಮಳೆಯಿಂದ ಅಪಾರ ಹಾನಿ: ಜಿಲ್ಲಾಧಿಕಾರಿ ಮಾಹಿತಿ
ಜಿಲ್ಲಾಧಿಕಾರಿಗಳೊಂದಿಗಿನ ಸಂವಾದದಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿದ್ದು, ನನಗೆ ವಾಸ್ತವ ಸ್ಥಿತಿಯ ಚಿತ್ರಣ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ದಾಖಲೆ ಪ್ರಮಾಣದ ಒಳಹರಿವು
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅಕ್ಟೋಬರ್ 10 ರಿಂದ 15 ರವರೆಗೆ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಿಂದ ಭೀಮಾ ಮತ್ತು ಉಪನದಿಗಳಲ್ಲಿ ದಾಖಲೆ ಪ್ರಮಾಣದ ಒಳಹರಿವು ಕಂಡುಬಂದಿದೆ.
ಜನರ ಸ್ಥಳಾಂತರಕ್ಕೆ ಸೂಚನೆ
ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದರು. ಸಂತ್ರಸ್ತರಿಗೆ ಉತ್ತಮ ಆಹಾರ ಪೂರೈಕೆಯಾಗಬೇಕು; ಕೋವಿಡ್ ಪರಿಸ್ಥಿತಿಯಲ್ಲಿ ಕಾಳಜಿ ಕೇಂದ್ರಗಳಲ್ಲಿ ಎಸ್.ಒ.ಪಿ ಪಾಲನೆ ಮಾಡಿ ಎಂದರು. ಯಾವ ದೂರುಗಳು ಈ ಬಗ್ಗೆ ಬರಬಾರದು. ಜಾನುವಾರುಗಳಿಗೂ ರಕ್ಷಣೆ ನೀಡಿ ಮೇವು ಪೂರೈಕೆಯಾಗಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.
ರಾಜ್ಯದಲ್ಲಿ ಮಳೆ ಮುಂದುವರಿಕೆ, ಅಣೆಕಟ್ಟಿನ ನೀರಿನ ಮಟ್ಟ
ಕೋವಿಡ್ 19 ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ಗಳ ಪೂರೈಕೆ ಸೇರಿದಂತೆ ವೈದ್ಯರು ಭೇಟಿ ನೀಡಿ ತಪಾಸಣೆ ಮಾಡುವಂತೆ ವ್ಯವಸ್ಥೆ ಕೈಗೊಳ್ಳಲು ಹಾಗೂ ಕೋವಿಡ್ ಲಕ್ಷಣಗಳಿರುವವರು ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ತಕ್ಷಣ ಸ್ಥಳಾಂತರಿಸಿ ಎಂದರು.
ಎನ್.ಡಿ.ಆರ್.ಎಫ್ ತಂಡಗಳು
ನೆರೆ ಸಂತ್ರಸ್ತರ ರಕ್ಷಣೆಗಾಗಿ ಪುಣೆ ಮತ್ತು ಚೆನ್ನೈ ರಾಜ್ಯಗಳಿಂದ ಎನ್ಡಿಆರ್ಎಫ್ನ ಆರು ಹೆಚ್ಚುವರಿ ತಂಡಗಳು ಸೇರಿದಂತೆ ಒಟ್ಟು 12 ಎನ್.ಡಿ.ಆರ್.ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಕಲಬುರಗಿಗೆ ಮೂರು ತಂಡಗಳು, ಯಾದಗಿರಿಗೆ ಎರಡು ಹಾಗೂ ರಾಯಚೂರಿಗೆ ಒಂದು ತಂಡವನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಎಸ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.
Recommended Video
ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳಿಂದ 14 ದೋಣಿಗಳನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ರಕ್ಷಣಾ ಹೆಲಿಕಾಪ್ಟ ರ್ ಗಳನ್ನು ಕಳುಹಿಸಲಾಗಿದೆ. ಸಂಘ ಸಂಸ್ಥೆಗಳನ್ನು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿ. ಜನರ ನೋವಿಗೆ ತಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.