ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್!
ಬೆಂಗಳೂರು, ಡಿಸೆಂಬರ್ 26 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಯಾವಾಗ?. 15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಸ್ತುತ 17 ಸಚಿವರು ಯಡಿಯೂರಪ್ಪ ಸಂಪುಟದಲ್ಲಿದ್ದಾರೆ.
15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದೆ. ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಸಂಪುಟ ಸೇರುವುದು ಯಾವಾಗ? ಎಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಬಿಜೆಪಿ ಹೈಕಮಾಂಡ್ ಜನವರಿಯಲ್ಲಿ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸುಳಿವು ಕೊಟ್ಟಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ, ಗ್ರಹಣ, ಧರ್ನುಮಾಸ ಮುಂತಾದ ಕಾರಣಗಳಿಂದಾಗಿ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುತ್ತಿದೆ. ಮತ್ತೊಂದು ಕಡೆ ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆಯೂ ಚರ್ಚೆಗಳು ಜೋರಾಗಿದೆ.
ಜನವರಿಯಲ್ಲಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿ ಉಪ ಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಸಚಿವ ಸ್ಥಾನ ನೀಡುವುದು ಖಾತ್ರಿಯಾಗಿದೆ. ಯಾರಿಗೆ ಸಚಿವ ಸ್ಥಾನ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಜನವರಿ 16ಕ್ಕೆ ಸಂಪುಟ ವಿಸ್ತರಣೆ
ಕಂದಾಯ ಸಚಿವ ಆರ್. ಅಶೋಕ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ್ದು, "ನುಡಿದಂತೆ ನಡೆಯಲಿದ್ದೇವೆ. ಧರ್ನುಮಾಸದ ಕಾರಣ ಸಂಪುಟ ವಿಸ್ತರಣೆ ತಡವಾಗಿದೆ. ಜನವರಿ 16ರಂದು ಸಂಪುಟ ವಿಸ್ತರಣೆ ಮಾಡಿ ಖಾತೆಗಳನ್ನು ಹಂಚಿಕೆ ಮಾಡುತ್ತೇವೆ" ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಹುದ್ದೆ?
ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುನ್ನ ಉಪ ಮುಖ್ಯಮಂತ್ರಿ ಹುದ್ದೆಯ ಕಗ್ಗಂಟು ಬಗೆಹರಿಯಬೇಕು. ರಮೇಶ್ ಜಾರಕಿಹೊಳಿ, ಬಿ. ಶ್ರೀರಾಮುಲು ಉಪ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿ ಈಗಾಗಲೇ ಮೂವರು ಉಪ ಮುಖ್ಯಮಂತ್ರಿಗಳಿದ್ದಾರೆ. ಆದ್ದರಿಂದ, ಹೈಕಮಾಂಡ್ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲೇಬೇಕು.

12 ಶಾಸಕರಲ್ಲಿ ಯಾರಿಗೆ ಸಚಿವ ಸ್ಥಾನ?
ಉಪ ಚುನಾವಣೆಯಲ್ಲಿ 12 ಶಾಸಕರು ಗೆದ್ದಿದ್ದಾರೆ. ಇವರಲ್ಲಿ ಯಾರು-ಯಾರು ಸಂಪುಟ ಸೇರಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಚುನಾವಣೆಯಲ್ಲಿ ಸೋತ ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ಗೆ ಸಹ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಇದೆ. ಸಂಪುಟ ವಿಸ್ತರಣೆ ಹೇಳಿದಷ್ಟು ಸುಲಭವಾಗಿಲ್ಲ ಎಂಬುದು ಬಿಜೆಪಿ ನಾಯಕರಿಗೂ ತಿಳಿದಿದೆ.

ಮೂಲ ಬಿಜೆಪಿಗರಿಂದಲೂ ಒತ್ತಡ
ಉಪ ಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವುದು ಒಂದು ಕಡೆ. ಬಿಜೆಪಿಯ ಮೂಲ ಶಾಸಕರು ಸಹ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಎಂ. ಪಿ. ರೇಣುಕಾಚಾರ್ಯ, ಉಮೇಶ್ ಕತ್ತಿ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದ್ದರಿಂದ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ.












Click it and Unblock the Notifications