ಪ್ರವಾಹ : ಉತ್ತರ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ
ಬೆಂಗಳೂರು, ಆಗಸ್ಟ್ 05 : ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮೂಲಕ ಪರಿಸ್ಥಿತಿ ಅಧ್ಯಯನ ನಡೆಸಿದರು.
ಸೋಮವಾರ ಬೆಂಗಳೂರಿನಿಂದ ಬಳ್ಳಾರಿಯ ತೋರಣಗಲ್ನಲ್ಲಿರುವ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಆಗಮಿಸಿದರು. ಅಲ್ಲಿಂದ ವೈಮಾನಿಕ ಸಮೀಕ್ಷೆ ಮಾಡಲು ವಿಶೇಷ ಹೆಲಿಕಾಪ್ಟರ್ ಮೂಲಕ ತೆರಳಿದರು.

ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚನೆ ನೀಡಲಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕೊಯ್ನಾ ಡ್ಯಾಂ ಭರ್ತಿಯಾಗಿದೆ. ಇದರಿಂದಾಗಿ ಕೃಷ್ಣಾ ನದಿಗೆ ನೀರನ್ನು ಹೊರಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಕೃಷ್ಣಾ ನದಿ ಪ್ರವಾಹದಿಂದಾಗಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ 20 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ಜಿಲ್ಲಾಧಿಕಾರಿಗಳು ಭಾನುವಾರವೂ ಕೆಲಸ ಮಾಡಬೇಕು ಎಂದು ಯಡಿಯೂರಪ್ಪ ಸೂಚಿಸಿದ್ದರು.
ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗಾಗಿ ಸರ್ಕಾರಿ ಶಾಲೆಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೇವಲ ಗಂಜಿಯನ್ನು ಮಾತ್ರ ನೀಡದೆ ಗುಣಮಟ್ಟದ ಆಹಾರ ನೀಡಬೇಕು ಎಂದು ಯಡಿಯೂರಪ್ಪ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.












Click it and Unblock the Notifications