ಕೊನೆಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!
ಬೆಂಗಳೂರು, ಅ. 18: ಉತ್ತರ ಕರ್ನಾಟಕ ಭಾಗದ ಜನರ ಹಾಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಕೊನೆಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಣಿದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಪ್ರಮಾಣ ಅರಿಯಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದೇ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲು ತೀರ್ಮಾನಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರು ಪ್ರವಾಹ ಪೀಡಿತ ಪ್ರದೇಶ, ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಭಾರೀ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಾಯಕರು ಚುನಾವಣೆ ಪ್ರಚಾರ ಕೈಬಿಡಿ, ನೆರೆ ಪೀಡಿತ ಪ್ರದೇಶನಗಳತ್ತ ನಡೆಯಿರಿ ಎಂದು ಸರ್ಕಾರದ ಕಿವಿ ಹಿಂಡಿದ್ದರು. ಹೀಗಾಗಿ ಇದೀಗ ಸ್ವತಃ ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆಗೆ ಮುಂದಾಗಿದ್ದಾರೆ.
ನಾಲ್ಕು ಜಿಲ್ಲೆಗಳಲ್ಲಿ ಭಾರಿ ಹಾನಿ
ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. ಜೊತೆಗೆ ಮಹಾರಾಷ್ಟ್ರದ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಭೀಮಾ ಮತ್ತು ಕೃಷ್ಣಾ ನದಿಗಳಿಗೆ ಹರಿದು ಬರುತ್ತಿದೆ. ಅದರಿಂದಾಗಿ ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳ ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ಈ ನಾಲ್ಕು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ ಎಂದು ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಕಲಬುರಗಿ ಪ್ರವಾಹ; ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ
ತಕ್ಷಣದ ಪರಿಹಾರ ಕೈಗೊಳ್ಳಲಾಗಿದೆ
ನೆರೆ ಹಾಗೂ ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಈಗಾಗಲೇ ಸ್ಥಳೀಯ ಜಿಲ್ಲಾಡಳಿತ ನೆರವಿನೊಂದಿಗೆ ತಕ್ಷಣದ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ. ಜೊತೆಗೆ ಪರಿಸ್ಥಿತಿ ನೋಡಿಕೊಂಡು ಪರಿಹಾರ ಕಾರ್ಯ ಕೈಗೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿನ ಹಣವನ್ನು ಬಳಸಿಕೊಳ್ಳುವಂತೆಯೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.
ನನಗೆ ಪ್ರವಾಹ ಸ್ಥಿತಿಯ ವಾಸ್ತವ ಚಿತ್ರಣ ಕೊಡಿ: ಯಡಿಯೂರಪ್ಪ
ಹಾನಿಯ ವಾಸ್ತವಿಕವಾದ ಪ್ರಮಾಣ
ಈ ಅತಿವೃಷ್ಟಿ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿಯ ವಾಸ್ತವಿಕವಾದ ಪ್ರಮಾಣ ಅರಿಯಲು ವೈಮಾನಿಕ ಸಮೀಕ್ಷೆ ಮಾಡುವುದು ಅವಶ್ಯಕವಾಗಿದೆ. ಅಕ್ಟೋಬರ್ 21 ರಂದು ಈ ನಾಲ್ಕೂ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ಮಾಡಲಾಗುವುದು. ನಂತರ ವರದಿಯನ್ನು ಕೇದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಗಣಿ ಜಿಲ್ಲೆಯಲ್ಲಿ ಸತತ ಮಳೆಗೆ 210.76 ಹೆಕ್ಟೇರ್ ಪ್ರದೇಶದ ಬೆಳೆ ನಷ್ಟ
ಡಿಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್
ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ (ಅ.17) ವೀಡಿಯೋ ಸಂವಾದ ನಡೆಸಿದ್ದರು.
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದೆ. ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗಿ ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.