ಯಡಿಯೂರಪ್ಪ ಕರೆದಿದ್ದ ಶಾಸಕರ ಭೋಜನ ಕೂಟ ರದ್ದು!
ಬೆಂಗಳೂರು, ಜುಲೈ 21; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಆಯೋಜಿಸಿದ್ದ ಭೋಜನಕೂಟ ರದ್ದುಗೊಳಿಸಲಾಗಿದೆ. ಜುಲೈ 25ರಂದು ಭೋಜನ ಕೂಟ ನಡೆಸಲು ತೀರ್ಮಾನಿಸಲಾಗಿತ್ತು.
ಜುಲೈ 26ರಂದು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸುವುದಾಗಿ ಘೋಷಿಸಲಾಗಿತ್ತು. ಆದರೆ ಮಂಗಳವಾರ ಶಾಸಕಾಂಗ ಪಕ್ಷದ ಸಭೆ ರದ್ದುಗೊಳಿಸಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟವನ್ನು ಆಯೋಜಿಸಿರುವುದಾಗಿ ತಿಳಿಸಲಾಗಿತ್ತು.
ಎಲ್ಲಾ ಶಾಸಕರಿಗೆ ಮಂಗಳವಾರ ವಾಟ್ಸಪ್ ಮೂಲಕ ಭೋಜನಕೂಟದ ಬಗ್ಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರು ನಗರದ ಖಾಸಗಿ ಹೋಟೆಲ್ನಲ್ಲಿ ಜುಲೈ 25ರ ಸಂಜೆ 7.30ಕ್ಕೆ ಭೋಜನಕೂಟ ನಡೆಯಲಿದೆ ಎಂದು ಸಂದೇಶ ಕಳಿಸಲಾಗಿತ್ತು.

ಆದರೆ ಮುಖ್ಯಮಂತ್ರಿಗಳ ಸೂಚನೆ ಹಿನ್ನಲೆಯಲ್ಲಿ ಭೋಜನಕೂಟವನ್ನು ರದ್ದುಗೊಳಿಸಲಾಗಿದೆ. ಶಾಸಕಾಂಗ ಪಕ್ಷದ ಸಭೆ, ಬಿಜೆಪಿ ಶಾಸಕರ ಔತಣಕೂಟ ಸಹ ರದ್ದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
— B.S. Yediyurappa (@BSYBJP) July 21, 2021
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಜುಲೈ 26ಕ್ಕೆ ಎರಡು ವರ್ಷ ಪೂರ್ಣವಾಗಲಿದೆ. ಈ ಹಿನ್ನಲೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಆಯೋಜನೆ ಮಾಡಲಾಗಿತ್ತು.
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
ವಿವಿಧ ಮಠಾಧೀಶರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅವರ ಬೆಂಬಲಕ್ಕೆ ನಿಂತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಹಲವಾರು ಬೆಳವಣಿಗೆ ನಡೆಯುತ್ತಿದ್ದರೂ ಹೈಕಮಾಂಡ್ ನಾಯಕರು ಮೌನಕ್ಕೆ ಶರಣಾಗಿದ್ದಾರೆ.
ಜುಲೈ 26ರಂದು ಬೆಳಗ್ಗೆ ಸರ್ಕಾರದ 2 ವರ್ಷದ ಸಾಧನೆಯ ಪುಸ್ತಕವನ್ನು ಯಡಿಯೂರಪ್ಪ ಬಿಡುಗಡೆ ಮಾಡಲಿದ್ದಾರೆ. ಸಂಜೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಈ ಕುರಿತು ಯಾವುದೇ ನಾಯಕರು ಸಹ ಖಚಿತಪಡಿಸಿಲ್ಲ.
ಯಡಿಯೂರಪ್ಪ ಟ್ವೀಟ್; ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ರಾಜ್ಯದ ವಿವಿಧ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಬುಧವಾರ ಸಂಜೆ ಅವರು ಟ್ವೀಟ್ ಮಾಡಿದ್ದಾರೆ.
"ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ" ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.












Click it and Unblock the Notifications