ಕೊರೊನಾ ಆತಂಕ: ಪ್ರವಾಸೋದ್ಯಮ ಕುರಿತು ಸಿಎಂ ಸಭೆ!
ಬೆಂಗಳೂರು, ಅ. 08: ಕೊರೊನಾ ವೈರಸ್ ಇಡೀ ಜಗತ್ತಿಗೆ ಸಂಕಷ್ಟ ತಂದಿಟ್ಟಿದೆ. ಕೋವಿಡ್ ಆತಂಕದಿಂದ ಜನರು ಮನೆ ಸೇರಿದ್ದಾರೆ. ಅಷ್ಟೇ ಅಲ್ಲ, ಪ್ರವಾಸಿ ತಾಣಗಳು ಭಿಕೋ ಎನ್ನುತ್ತಿವೆ. ಹೀಗಾಗಿ ಕೊರೊನಾದ ನೇರ ಪರಿಣಾಮ ಪ್ರವಾಸೋದ್ಯಮ ಅವಲಂಬಿಸಿ ಜೀವನ ಮಾಡುವವರ ಮೇಲಾಗಿದೆ. ಪ್ರವಾಸಿ ತಾಣಗಳ ಗೈಡ್ಗಳು, ಟ್ರಾವೆಲ್ ಎಜೆನ್ಸಿ ಹಾಗೂ ಹೊಡೆಲ್ಗಳ ಸ್ಥಿತಿಯಂತೂ ಅತ್ಯಂತ ಕಷ್ಟಕರವಾಗಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹತ್ವದ ಸಭೆಯನ್ನು ಮಾಡಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದಿಗೆ ಅನುಮತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಇಂದು ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದ್ದಾರೆ.
ಪ್ರವಾಸಿಗರಿಂದ ಸೋಂಕು ಹರಡದಂತೆ ಮಾರ್ಗಸೂಚಿ: ಸುಧಾಕರ್
ರಾಜ್ಯದಲ್ಲಿ ಈಗಾಗಲೇ ಗುರುತಿಸಲಾಗಿರುವ ಪ್ರವಾಸೋದ್ಯಮ ಕೇಂದ್ರಗಳ ಸಮಗ್ರ ಅಭಿವೃಧ್ಧಿಗೆ ಇರುವ ತೊಡಕುಗಳನ್ನು ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿಗಳು ಅನುಮತಿ ನೀಡಿದರು. ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಯೊಂದಿಗೆ ಪ್ರಸ್ತಾವನೆ ಯನ್ನು ಮಂಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದರು.
ಅಧಿಕಾರಿಗಳ ನಿಯೋಜನೆ
ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಜಿಲ್ಲೆಗಳನ್ನು ಗುರುತಿಸಿ ಅಧಿಕಾರಿಗಳನ್ನು ನಿಯೋಜಿಸುವಂತೆ ಪ್ರವಾಸೋದ್ಯಮ ಸಚಿವ ಸಚಿವ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಭೆಯಲ್ಲಿ ಕೋರಿದ್ದಾರೆ. ಜಿಲ್ಲೆಗಳಲ್ಲಿ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯವಾಗಿದೆ ಎಂಬ ಅಂಶವನ್ನು ಅವರು ಸಭೆಯಲ್ಲಿ ಸಿಎಂ ಗಮನಕ್ಕೆ ತಂದಿದ್ದಾರೆ.
ಕೆಎಎಸ್ ಅಧಿಕಾರಿಗಳನ್ನು ನೇಮಿಸಿ
ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿರುವ ಜಿಲ್ಲೆಗಳಲ್ಲಿ ಕೆ.ಎ.ಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರವನ್ನು ನೀಡಬಹುದು. ಪ್ರವಾಸೋದ್ಯಮಕ್ಕೆ ಉತ್ತೇಜನ ಇಲಾಖೆಯ ಮುಖ್ಯ ಧ್ಯೇಯವಾಗಬೇಕಿದ್ದು, ಅಭಿವೃದ್ಧಿ ತಾಣಗಳ ಗುರುತಿಸುವಿಕೆ, ನಿರ್ವಹಣೆ, ಸಂರಕ್ಷಣೆ ಆದ್ಯತೆಯಾಗಬೇಕು ಎಂದು ಸಿ.ಟಿ. ರವಿ ಅವರು ಸಭೆಯಲ್ಲಿ ಸೂಚಿಸಿದರು.
ಯೋಜನೆಯನ್ನು ಪರಿಪೂರ್ಣವಾಗಿ ಕೈಗೊಂಡು ಮುಗಿಸಬೇಕು, ಆಗ ಮಾತ್ರ ರಾಜ್ಯದ ಪ್ರವಾಸೋದ್ಯಮದಲ್ಲಿ ಅಭಿವೃದ್ದಿಯಲ್ಲಿ ಹೊಸ ಶಕೆಯನ್ನು ನಿರೀಕ್ಷಿಸಬಹುದು ಎಂದರು.
ಜೋಗ ಜಲಪಾತ ಅಭಿವೃದ್ಧಿ
ಜೋಗ ಜಲಪಾತ 120 ಕೋಟಿ ರೂ.ಗಳ ಯೋಜನೆ ಕೆ.ಪಿ.ಸಿ.ಎಲ್ ಮೂಲಕ ಅನುಷ್ಠಾನಕ್ಕೆ ತರಲಾಗುವುದು. ಈ ಮಾಹೆಯ ಅಂತ್ಯದೊಳಗೆ ಯೋಜನೆಯ ವೆಚ್ಚವನ್ನು ಅಂತಿಮಗೊಳಿಸಲಾಗುವುದು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸಭೆಗೆ ಮಾಹಿತಿ ನೀಡಿದರು.
ಕೆಮ್ಮಣ್ಣುಗುಂಡಿ ಮತ್ತು ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿಯ ಹೊಣೆಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವಂತೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಸಲಹೆ ನೀಡಿದರು.
ಬದಾಮಿ ಅಭಿವೃದ್ಧಿ
ಬಾದಾಮಿ ಅಭಿವೃದ್ಧಿ ಆದ್ಯತೆಯ ಬಗ್ಗೆಯೂ ಸಭೆಯಲ್ಲಿ ಸವಿವರ ಚರ್ಚೆ ನಡೆಯಿತು. ಅಂತರರಾಷ್ಟ್ರೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಈ ತಾಣದಲ್ಲಿ ವಿಶ್ವಮಟ್ಟದ ಸೌಲಭ್ಯಗಳನ್ನು ಕಲ್ಪಿಸಲು ಎ.ಪಿ.ಎಂ.ಸಿ ಭೂಮಿಯನ್ನು ಕೆ.ಎಸ್.ಟಿ.ಡಿ.ಸಿ ಗೆ ಹಸ್ತಾಂತರ ಮಾಡಿ ವಾಹನ ನಿಲ್ದಾಣ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬಹುದು ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಶ್ರೀರಂಗಪಟ್ಟಣ ಹಾಗೂ ಮೈಸೂರು ಹಾಥ್ ಅಭಿವೃದ್ಧಿಗೆ ಸಂಬಂಧಿಸಿದಂತೆಯೂ ಸಬೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷರಾದ ಶೃತಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Recommended Video