ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಬಗ್ಗೆ ಸುಳಿವು ಕೊಟ್ಟ ಸಿಎಂ
ಬೆಂಗಳೂರು, ಜೂನ್ 05: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿರೀಕ್ಷಿತ ಮಟ್ಟದಲ್ಲಿ ಇಳಿಕೆ ಕಂಡುಬರದ ಕಾರಣ ಜೂನ್ 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್ಡೌನ್ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದ್ದಾರೆ.

ಲಾಕ್ಡೌನ್ ಪ್ಯಾಕೇಜ್ ಕುರಿತು ಮಾತನಾಡಿರುವ ಅವರು, "ಲಾಕ್ಡೌನ್ ಕಾರಣವಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದೆವು. ಇಂದು ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಹಣ ಬಿಡುಗಡೆ ಮಾಡಿದ್ದೇವೆ. ಒಟ್ಟು 25 ಲಕ್ಷ ಕಾರ್ಮಿಕರಿಗೆ ಹಣ ಬಿಡುಗಡೆಯಾಗಿದೆ. 4 ಲಕ್ಷ ಜನರಿಗೆ ಇಂದು 10 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಅಸಂಘಟಿತ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಆ್ಪ್ ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
"ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೂ ವೈರಾಣು ಹರಡುವಿಕೆ ತಡೆಯಬೇಕಿದೆ. ಆರೋಗ್ಯ ಪರಿಣಿತರ ಸಲಹೆ ಪಾಲಿಸಬೇಕಿದೆ. ಆದ್ದರಿಂದ ಜೂನ್ 14ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗುತ್ತದೆ" ಎಂದು ಜೂನ್ 3ರಂದು ಸಿಎಂ ಘೋಷಣೆ ಮಾಡಿದ್ದರು. ಜೊತೆಗೆ 2ನೇ ಹಂತದಲ್ಲಿ 500 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಿದ್ದರು.












Click it and Unblock the Notifications