ಮೂಲ ಬಿಜೆಪಿಗರಿಗೆ ಯಡಿಯೂರಪ್ಪರಿಂದ ಸಂಕ್ರಾಂತಿ ಉಡುಗೊರೆ?
ಬೆಂಗಳೂರು, ಜನವರಿ 10 : ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮೂಲ ಬಿಜೆಪಿಗರಿಗೆ ಸಂಕ್ರಾಂತಿ ಉಡುಗೊರೆ ನೀಡಲು ಮುಖ್ಯಮಂತ್ರಿಗಳು ಚಿಂತನೆ ನಡೆಸುತ್ತಿದ್ದಾರೆ.
ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಗೆದ್ದ ಶಾಸಕರು, ಮೂಲ ಬಿಜೆಪಿಯ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಖಾಲಿ ಇರುವ 16 ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ.
ಸಂಪುಟ ವಿಸ್ತರಣೆಗೂ ಮೊದಲು ಯಡಿಯೂರಪ್ಪ ಕೆಲವು ಸಚಿವರಿಂದ ರಾಜೀನಾಮೆ ಪಡೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹೀಗೆ ಖಾಲಿ ಆಗುವ ಸಚಿವ ಸ್ಥಾನವನ್ನು ಪಕ್ಷದ ಹಿರಿಯ ಶಾಸಕರಿಗೆ ನೀಡಲು ತಂತ್ರ ರೂಪಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಯಾಗಿ ಯಡಿಯೂರಪ್ಪ ಸಮಯ ಕೇಳಿದ್ದಾರೆ. ಸಮಯ ಸಿಕ್ಕ ತಕ್ಷಣ ದೆಹಲಿಗೆ ತೆರಳಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಸಲಿದ್ದಾರೆ.

ಯಡಿಯೂರಪ್ಪಗೆ ಸಂಕಟ
15 ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದ ಶಾಸಕರ ಜೊತೆ ಮೂಲ ಬಿಜೆಪಿಯ ಹಿರಿಯ ಶಾಸಕರಿಗೂ ಸಚಿವ ಸ್ಥಾನ ನೀಡಬೇಕು. ಇದು ಯಡಿಯೂರಪ್ಪ ಅವರ ಸಂಕಟಕ್ಕೆ ಕಾರಣವಾಗಿದೆ. ಆದ್ದರಿಂದ, ಮೂವರು ಸಚಿವರ ರಾಜೀನಾಮೆ ಪಡೆದರೆ ಸಂಪುಟ ವಿಸ್ತರಣೆ ಸಮಯದಲ್ಲಿ ಮೂಲ ಶಾಸಕರಿಗೆ ಅವಕಾಶ ನೀಡಬಹುದು ಎಂಬುದು ಲೆಕ್ಕಾಚಾರವಾಗಿದೆ.

ರಮೇಶ್ ಜಾರಕಿಹೊಳಿ ಸಭೆ
ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನೂತನ ಶಾಸಕರ ಸಭೆ ಬುಧವಾರ ಬೆಂಗಳೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಂದ ಶಾಸಕರು ಒಗ್ಗಟ್ಟಾಗಿ ಇರಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಯಡಿಯೂರಪ್ಪ ತಮಗೆ ನೀಡಿದ ಭರವಸೆಯಂತೆ ನಡೆದುಕೊಳ್ಳಲು ಒತ್ತಡ ಹಾಕಲು ಶಾಸಕರು ತೀರ್ಮಾನಿಸಿದ್ದಾರೆ.

ಸಭೆ ಕರೆದಿರುವ ಯಡಿಯೂರಪ್ಪ
ಶನಿವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪಕ್ಷದ ಹಿರಿಯ ನಾಯಕರ ಸಭೆಯನ್ನು ಕರೆದಿದ್ದಾರೆ. ಹಿರಿಯ ಶಾಸಕರು ಸಹ ಇದರಲ್ಲಿ ಪಾಲ್ಗೊಳ್ಳಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ. ಯಾವ ಸಚಿವರ ರಾಜೀನಾಮೆ ಪಡೆಯಬಹುದು ಎಂದು ಈಗಾಗಲೇ ಬಿಜೆಪಿಯಲ್ಲಿ ಲೆಕ್ಕಾಚಾರಗಳು ಆರಂಭವಾಗಿವೆ.

ಸಚಿವ ಸ್ಥಾನದ ಆಕಾಂಕ್ಷಿಗಳು
ಯಡಿಯೂರಪ್ಪ ಸಂಪುಟ ಸೇರಲು ಹಿರಿಯ ಶಾಸಕರಾದ ಉಮೇಶ್ ಕತ್ತಿ, ಎಸ್. ಎ. ರಾಮದಾಸ್, ಎಂ.ಪಿ.ರೇಣುಕಾಚಾರ್ಯ ಮುಂತಾದವರು ಆಕಾಂಕ್ಷಿಗಳಾಗಿದ್ದಾರೆ. ಯಾರಿಗೆ ಸಚಿವ ಸ್ಥಾನ ಸಿಗಲಿದೆ? ಎಂದು ಕಾದು ನೋಡಬೇಕಿದೆ.











Click it and Unblock the Notifications