ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ
ಬೆಂಗಳೂರು, ನವೆಂಬರ್ 19 : ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗುರುವಾರ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ. ಇಂಥಹದೊಂದು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಎಂ. ಬಿ. ಮರಂಕಲ್ ಅವರನ್ನು ಆ ಹುದ್ದೆಯಿಂದ ಕೆಲವು ದಿನಗಳ ಹಿಂದೆ ತೆರವುಗೊಳಿಸಲಾಗಿತ್ತು. ಈಗ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

"ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು" ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ಮಹಾದೇವ ಪ್ರಕಾಶ್ ಅವರನ್ನು ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. 'ಭಾನುವಾರ' ಎಂಬ ಮಾಸಿಕ ಪತ್ರಿಕೆಯನ್ನು ಮಹದಾದೇವ ಪ್ರಕಾಶ್ ನಡೆಸುತ್ತಿದ್ದು, ಸುದ್ದಿ ಮಾಧ್ಯಮದ ಚರ್ಚೆಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದರು.












Click it and Unblock the Notifications