BREAKING: ಸಂತೋಷ್ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ!
ಬೆಂಗಳೂರು, ಡಿ. 03: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್.ಆರ್. ಸಂತೋಷ್ ಅವರು ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಂತೋಷ್ ಅವರನ್ನು ಭೇಟಿ ಮಾಡಿ ಯಡಿಯೂರಪ್ಪ ಅವರು ಮಾತುಕತೆ ನಡೆಸಿ ಆರೋಗ್ಯ ವಿಚಾರಿಸಿದ್ದಾರೆ. ಭೇಟಿ ಸಂದರ್ಭದಲ್ಲಿ ಯಾವ ಯಾವ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಿದೆ. ಮಾಜಿ ಸಚಿವರಾದ ಎಚ್. ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪದ ಬಳಿಕ ಯಡಿಯೂರಪ್ಪ-ಸಂತೋಷ್ ಭೇಟಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ರಾಜಕೀಯ ಒತ್ತಡದಿಂದ ಹೀಗೆ ಮಾಡಿರಬಹುದು ಎಂದು ಸಂತೋಷ್ ಅವರ ಪತ್ನಿ ಮಾಧ್ಯಮ ಹೇಳಿಕೆ ನೀಡಿದ್ದರು. ಅದಾದ ಬಳಿಕ ಹುಣಸೂರು ಚುನಾವಣೆಯಲ್ಲಿ ಪಕ್ಷ ಚುನಾವನೆ ಖರ್ಚಿಗೆ ಕಳುಹಿಸಿದ್ದ ದೊಡ್ಡ ಮೊತ್ತದ ಹಣವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಲಪಟಾಯಿಸಿದ್ದಾರೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಅವರು ಆರೋಪಿಸಿದ್ದರು.
Recommended Video
ಎಚ್. ವಿಶ್ವನಾಥ್ ಅವರ ಆರೋಪದ ಬೆನ್ನಲ್ಲಿಯೇ ವಿಜಯಪುರದಲ್ಲಿ ಮಾತನಾಡಿದ್ದ ಬಿಜೆಪಿಯ ಮತ್ತೊಬ್ಬ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ದೊಡ್ಡ ಕಥೆಯಿದೆ. ಅದೆಲ್ಲವೂ ನನಗೆ ಗೊತ್ತು, ಕಾಲ ಬಂದಾಗ ಹೇಳುತ್ತೇನೆ. ಸಿಎಂ ಯಡಿಯೂರಪ್ಪ ಅವರು ಸಚಿವ ಸಂಫುಟ ವಿಸ್ತರಣೆ ಮಾಡಲಿ. ಆ ನಂತರ ಎಲ್ಲವನ್ನೂ ಮಾತನಾಡುತ್ತೇನೆ ಎಂದು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದರು.