ಈ ವರ್ಷ ಕನ್ನಡ ರಾಜ್ಯೋತ್ಸವದಂದು ಸಾಧಕರಿಗೆ ಪ್ರಶಸ್ತಿ ಪ್ರದಾನ ಅನಿಶ್ಚಿತ?
ಬೆಂಗಳೂರು, ಅ. 23: ಕೊರೊನಾ ವೈರಸ್ ಸೋಂಕಿನ ಆತಂಕದ ಮಧ್ಯೆ ಈ ಬಾರಿ ರಾಜ್ಯೋತ್ಸವ ಆಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಕೋವಿಡ್ ಮಾರ್ಗಸೂಚಿಗಳ ಅನ್ವಯ ಸರಳವಾಗಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸುವುದು ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಯಿತು. ನಾಡಿನ ಸಾಧಕರಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿಗಳ ಅಂತಿಮ ಆಯ್ಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಡಲಾಗಿದೆ.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ಶುಕ್ರವಾರ ಸಭೆ ನಡೆಸಿದ್ದು, 70 ಜನರ ಪಟ್ಟಿಯನ್ನು ಸಿದ್ದಪಡಿಸಿದೆ ಎಂದು ತಿಳಿದು ಬಂದಿದೆ. ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಅವರು ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ಪಟ್ಟಿ ಪ್ರಕಟಿಸಲಿದ್ದಾರೆ ಎಂಬ ಮಾಹಿತಿಯಿದೆ.

22 ಕ್ಷೇತ್ರಗಳ 110 ಸಾಧಕರ ಪಟ್ಟಿ ಸಿದ್ಧ
ಪ್ರಶಸ್ತಿಗೆ ಸುಮಾರು 22 ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಪರಿಗಣಿಸಲಾಗಿದ್ದು, ರಾಜ್ಯೋತ್ಸವ ಸಲಹಾ ಸಮಿತಿ 110 ಸಾಧಕರ ಪಟ್ಟಿಯನ್ನು ಸಿದ್ದಪಡಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಗೆ ನೀಡಿತ್ತು. ಅವುಗಳನ್ನು ಪರಿಶೀಲಿಸಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

65 ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ
ಹೈಕೋರ್ಟ್ ಆದೇಶದಂತೆ 65 ಜನರಿಗೆ ಮಾತ್ರ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ. ಜೊತೆಗೆ ಕ್ರೀಡಾ ಕ್ಷೇತ್ರವನ್ನು ಹೊರತು ಪಡಿಸಿ ಉಳಿದ ಕ್ಷೇತ್ರಗಳಲ್ಲಿ 60 ವರ್ಷ ವಯೋಮಿತಿ ಮೀರಿದವರಿಗೆ ಮಾತ್ರ ಪ್ರಶಸ್ತಿ ನೀಡುವುದು ಹಾಗೂ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ಕೊಟ್ಟು ಸಾಧಕರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಪರಿಸ್ಥಿತಿ ನೋಡಿಕೊಂಡು ಪ್ರಶಸ್ತಿ ಪ್ರದಾನ
ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರಳ ಸಮಾರಂಭ ಮಾಡಲು ನಿರ್ಧರಿಸಲಾಗಿದ್ದು, ನವೆಂಬರ್ 1 ರಂದು ಪ್ರಶಸ್ತಿ ನೀಡುವ ಬಗ್ಗೆ ಇನ್ನೂ ಅಧಿಕೃತ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಪರಿಸ್ಥಿತಿ ನೋಡಿಕೊಂಡು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
Recommended Video

ಸಚಿವರು, ಅಕಾಡೆಮಿ ಅಧ್ಯಕ್ಷರಿಲ್ಲದ ಸಮಿತಿ
ಪ್ರತಿ ವರ್ಷ ಮುಖ್ಯಮಂತ್ರಿಯವರ ಅಧ್ಯಕ್ಷತೆಯ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರನ್ನು ಸೇರಿಸಲಾಗುತ್ತಿತ್ತು. ಆದರೆ, ಈ ವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಹೊರತುಪಡಿಸಿ ಬೇರೆ ಯಾವುದೇ ಹಿರಿಯ ಸಚಿವರನ್ನು ಈ ಸಮಿತಿಗೆ ಸೇರ್ಪಡೆ ಮಾಡಿಲ್ಲ.
ಅಂತಿಮ ಆಯ್ಕೆ ಸಮಿತಿಯಲ್ಲಿ ಸಲಹಾ ಸಮಿತಿಯಲ್ಲಿದ್ದ ಸದಸ್ಯರ ಜೊತೆಗೆ ಡಾ. ವಾಮನಾಚಾರ್ಯ, ಸಾಹಿತಿ ದೊಡ್ಡರಂಗೇಗೌಡ, ವಾರ್ತಾ ಇಲಾಖೆ ನಿವೃತ್ತ ನಿರ್ದೇಶಕ ಭೃಂಗೀಶ್, ಆಯೇಷಾ ಖಾನಂ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.












Click it and Unblock the Notifications