ನಾಳೆ ಸಂಪುಟ ವಿಸ್ತರಣೆ: ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ಕೊಟ್ಟ ಸಿಎಂ
ಬೆಂಗಳೂರು, ಜ. 12: ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದ್ದು, ನಾಳೆ ನಾಳೆ ಸಂಜೆ 4 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಸಂಪುಟ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾಳೆ (ಜ.13) ಸಂಜೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ನಾನೇ ನಿಮಗೆ ನೂತನ ಸಚಿವರ ಪಟ್ಟಿ ಕೊಡುತ್ತೇನೆ. ಅನಗತ್ಯವಾಗಿ ಯಾರ ಹೆಸರುಗಳನ್ನು ಹಾಕಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.
ಕಳೆದ ಭಾನುವಾರ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದರು. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದರು. ಅದೇ ದಿನ ಸಂಜೆ ಬೆಂಗಳೂರಿಗೆ ಮರಳಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ನೀಡಿದ್ದರು. ಏಳು ಜನರಿಗೆ ಸಚಿವ ಸ್ಥಾನ ನೀಡಲು ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ಕೊಟ್ಟಿದ್ದರು. ಅದಾದ ಬಳಿಕ ಮಂತ್ರಿ ಪದವಿಗಾಗಿ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಸಂಪುಟ ವಿಸ್ತರಣೋ ಅಥವಾ ಪುನರಚನೆಯೋ ಎನ್ನುವ ಬಗ್ಗೆ ಇನ್ನೂ ಖಚಿತವಾಗಿಲ್ಲ.
ರಾಜ್ಯಪಾಲರೊಂದಿಗೆ ಯಡಿಯೂರಪ್ಪ ಚರ್ಚೆ: ಇಂದು (ಜ.12) ರಾಜಭವನದಲ್ಲಿ ನಡೆದ ವಿವೇಕಾನಂದ ಭವನ ಉದ್ಘಾಟನಾ ಕಾರ್ಯಕ್ರಮದ ನಂತರ ರಾಜ್ಯಪಾಲ ವಜೂಬಾಯಿ ವಾಲಾ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿರುವ ಯಡಿಯೂರಪ್ಪ ಅವರು, ನಾಳೆ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಸಮಯಾವಕಾಶವನ್ನು ಕೇಳಿದ್ದಾರೆ. ಇದೇ ಸಂದರ್ಭದಲ್ಲಿ ನೂತನ ಸಚಿವರ ಪಟ್ಟಿಯನ್ನೂ ರಾಜ್ಯಪಾಲರಿಗೆ ಸಿಎಂ ಯಡಿಯೂರಪ್ಪ ಅವರು ಕೊಟ್ಟಿದ್ದಾರೆ ಎನ್ನಲಾಗಿದೆ.