ಶಿಕಾರಿಪುರದ ಜನತೆಗೆ ತಮ್ಮ ಮುಂದಿನ ನಡೆಯ ಮುನ್ಸೂಚನೆ ಕೊಟ್ಟ ಸಿಎಂ ಯಡಿಯೂರಪ್ಪ!
ಬೆಂಗಳೂರು, ಜು. 24: ಕಳೆದ ಒಂದು ವಾರದಿಂದ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ನಿಗದಿಯಂತೆ ಇಂದು ಸಿಎಂ ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಪ್ರವಾಸಕ್ಕೆ ತೆರಳಿ, ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮಾಡಬೇಕಾಗಿತ್ತು.
ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಹೋಸ್ಟಿಂಗ್ ಮೂಲಕ ನೆರವೇರಿಸಿದರು. ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರಿದ್ದರು. ಜೊತೆಗೆ ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸುವ ಮೂಲಕ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ತಮಗೆ ರಾಜಕೀಯ ಜನ್ಮ ನೀಡಿದ ಶಿಕಾರಿಪುದ ಜನತೆಗೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಶಿಕಾರಿಪುರದ ಜನತೆಯನ್ನು ನೆನೆದು ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟಿರುವ ಸಂದೇಶ ಬಿಜೆಪಿಯಲ್ಲಿ ಸಂಚಲನವನ್ನುಂಟು ಮಾಡಿದರೂ ಆಶ್ಚರ್ಯವಿಲ್ಲ!

ಜನತೆಯ ಋಣ ತೀರಿಸುವ ಪ್ರಯತ್ನ ಮಾಡಿದ್ದೇನೆ
ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗೃಹ ಕಚೇರಿ ಕೃಷ್ಟಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, "ಕಳೆದ ಎರಡು ವರ್ಷಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಗರಿಷ್ಟ ಪ್ರಯತ್ನ ಮಾಡಿದ ತೃಪ್ತಿ ನನಗಿದೆ. ನನಗೆ ರಾಜಕೀಯ ಜನ್ಮ ನೀಡಿದ ಶಿವಮೊಗ್ಗ ಜಿಲ್ಲೆಯ ಅದರಲ್ಲೂ ಶಿಕಾರಿಪುರ ತಾಲೂಕಿನ ಜನತೆಯ ಋಣವನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ" ಎಂದು ತಮ್ಮ ಮುಂದಿನ ನಡೆಯ ಮುನ್ಸೂಚನೆಯನ್ನು ಕೊಟ್ಟಿದ್ದಾರೆ.
"ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ನೀರುಣಿಸುವ ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯುದ್ದೋಪಾಧಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ" ಎಂದು ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.

ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ ಸಿಎಂ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ 'ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ' ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಸಾಗರ ತಾಲೂಕಿನ ಜನರ ಬಹುದಿನದ ಬೇಡಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಈಡೇರಿಸಿದ್ದಾರೆ.
ಜೊತೆಗೆ, "ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ ಏರ್ಬಸ್ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ಎಪ್ರಿಲ್ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ವಿಮಾನ ನಿಲ್ದಾಣ ಆರಂಭದಿಂದ ಶಿವಮೊಗ್ಗ ಮಾತ್ರವಲ್ಲ ಸುತ್ತಲಿನ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗುವ ನಿರೀಕ್ಷೆಯಿದೆ" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಸರ್ವ ಋತು ಜೋಗ ಜಲಪಾತ!
"ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಅವಕಾಶಗಳ ಸದುಪಯೋಗಕ್ಕೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ. ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಯನ್ನು ಸ್ಮರಣೀಯವಾಗಿಸಲು 185 ಕೋಟಿ ರೂ. ವೆಚ್ಚದಲ್ಲಿ ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರವಾಸಿಗರನ್ನು ವರ್ಷವಿಡೀ ಆಕರ್ಷಿಸಲು ಕೆ.ಪಿ.ಟಿ.ಸಿ.ಎಲ್. ಸಹಕಾರದೊಂದಿಗೆ ಶನಿವಾರ ಹಾಗೂ ಭಾನುವಾರ ಧುಮ್ಮಿಕ್ಕುವ ಸರ್ವ ಋತು ಜೋಗ ರೂಪಿಸಲಾಗುತ್ತಿದೆ" ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
"ಮಲೆನಾಡು, ಕರಾವಳಿ, ಬಯಲುಸೀಮೆಯ ಏಳು ಜಿಲ್ಲೆಗಳ ವ್ಯಾಪ್ತಿಗೆ ಸೀಮಿತಗೊಂಡು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೆಲಸ ಮಾಡುತ್ತಿದ್ದು ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಜ್ಞಾನ ಹೊಂದಿರುವ ರಾಜ್ಯದ ಏಕೈಕ ಸಮಗ್ರ ಹಾಗೂ ವಿಶಿಷ್ಟ ವಿಶ್ವವಿದ್ಯಾಲಯವಾಗಿದೆ. ಇದೀಗ 155 ಕೋಟಿ ರೂ. ಇದೀಗ ನೂತನ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ ವಿಶ್ವವಿದ್ಯಾಲಯಕ್ಕೆ 787 ಎಕರೆ ವಿಶಾಲವಾದ ಜಮೀನು ಮಂಜೂರು ಮಾಡಲಾಗಿದೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
Recommended Video

ನಾಳೆ ಬೆಳಗಾವಿಗೆ ಪ್ರವಾಸ
ರಾಜ್ಯ ರಾಜಕೀಯದಲ್ಲಿ ನಡೆದಿರುವ ಸ್ಥಿತ್ಯಂತರ ಎಲ್ಲರಿಗೂ ಹೊತ್ತಿರುವ ವಿಚಾರವೇ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಹಿಂದೆ ಅಧಿಕಾರ ವಹಿಸಿಕೊಂಡಾಗಳು ಅತಿವೃಷ್ಟಿ-ನೆರೆ ಸಂಕಷ್ಟ ಎದುರಾಗಿತ್ತು. ಈಗ ಮತ್ತೊಮ್ಮೆ ಅಂತಹ ಸ್ಥಿತಿ ಎದುರಾಗಿದೆ. ಆ ಕುರಿತು ಯಡಿಯೂರಪ್ಪ ಮಾತನಾಡಿದ್ದಾರೆ.
"ಇದೀಗ ಮತ್ತೆ ರಾಜ್ಯದ ಕೆಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ನಿನ್ನೆಯಷ್ಟೆ ಶಿವಮೊಗ್ಗ ಸೇರಿ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಜನರ ರಕ್ಷಣೆ, ಪರಿಹಾರ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದೇನೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ನಾಳೆ ಬೆಳಗಾವಿಗೆ ತೆರಳಲಿದ್ದೇನೆ" ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಗೆ ಸುಮಾರು 1,074 ಕೋಟಿ ರೂ. ವೆಚ್ಚದ ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ ಮತ್ತು 560 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಬಿ.ಸಿ. ಪಾಟೀಲ್, ಭೈರತಿ ಬಸವರಾಜ್, ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಹಿರಿಯ ಅಧಿಕಾರಿಗಳಾದ ರಾಜಕುಮಾರ್ ಖತ್ರಿ, ಕಪಿಲ್ ಮೋಹನ್, ಸೆಲ್ವಕುಮಾರ್, ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.












Click it and Unblock the Notifications