ಅಮಿತ್ ಶಾ, ಯಡಿಯೂರಪ್ಪ ಮಾತುಕತೆ ವಿವರ ಬಹಿರಂಗ!
ಬೆಂಗಳೂರು, ಜುಲೈ 19; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗಿದ್ದಾರೆ. ಪ್ರಧಾನಿ ಮೋದಿ, ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರನ್ನು ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಜೊತೆ ಯಡಿಯೂರಪ್ಪ ಮಾತನಾಡಿದ್ದೇನು? ಎಂಬುದು ಕುತೂಹಲದ ವಿಚಾರವಾಗಿದೆ. ಈ ಕುರಿತು ಸ್ವತಃ ಯಡಿಯೂರಪ್ಪ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
"ಅಮಿತ್ ಶಾ ಜೊತೆ ಮುಂದಿನ ಲೋಕಸಭೆ ಚುನಾವಣೆ, ಉತ್ತರ ಪ್ರದೇಶ ಮತ್ತು ಕರ್ನಾಟಕದ ಮುಂದಿನ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದೇನೆ" ಎಂದು ಯಡಿಯೂರಪ್ಪ ಹೇಳಿದ್ದಾರೆ.
"ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಕಷ್ಟಪಟ್ಟು ಕೆಲಸ ಮಾಡಬೇಕು. ಲೋಕಸಭೆ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ಅಮಿತ್ ಶಾ ಹೇಳಿದ್ದಾರೆ" ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ದೆಹಲಿ ಪ್ರವಾಸ ಕೈಗೊಂಡಿದ್ದ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ದೆಹಲಿ ಪ್ರವಾಸ ಕೈಗೊಂಡಿದ್ದರು. ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಜೊತೆಯಲ್ಲಿದ್ದರು. ಅಮಿತ್ ಶಾರನ್ನು ಯಡಿಯೂರಪ್ಪ ಭೇಟಿ ಮಾಡಿದಾಗಲೂ ವಿಜಯೇಂದ್ರ ಜೊತೆಯಲ್ಲಿದ್ದರು. ಈ ಭೇಟಿ ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಎರಡೂ ರಾಜ್ಯದಲ್ಲಿ ಉತ್ತಮ ಭವಿಷ್ಯವಿದೆ
"ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ. ನಾವು ಶೇ 100ರಷ್ಟು ಎರಡು ರಾಜ್ಯದಲ್ಲಿಯೂ ಗೆಲ್ಲುತ್ತೇವೆ" ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ಯಡಿಯೂರಪ್ಪ ಎಎನ್ಐ ಜೊತೆ ಮಾತನಾಡಿದ್ದಾರೆ.

ಜವಾಬ್ದಾರಿ ತೆಗೆದುಕೊಳ್ಳಲು ಸಲಹೆ
"ಕರ್ನಾಟಕದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ" ಎಂದು ಯಡಿಯೂರಪ್ಪ ಮಾಧ್ಯಮಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುವಾಗಲೇ ಅಮಿತ್ ಶಾ ಭೇಟಿ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು.
Recommended Video

ಹೈಕಮಾಂಡ್ ಹೇಳಿದ ದಿನ ರಾಜೀನಾಮೆ
ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, "ಪಕ್ಷದ ಹೈಕಮಾಂಡ್ ಹೇಳಿದ ದಿನ ನಾನು ರಾಜೀನಾಮೆ ನೀಡುತ್ತೇನೆ. ಮುಂದಿನ ತಿಂಗಳು ನಾನು ಪುನಃ ದೆಹಲಿಗೆ ಬರುತ್ತೇನೆ" ಎಂದು ಯಡಿಯೂರಪ್ಪ ಹೇಳಿದ್ದಾರೆ.












Click it and Unblock the Notifications