ಬಿಜೆಪಿ ಸರ್ಕಾರದ ಭವಿಷ್ಯ; ದೇವರ ಮೊರೆ ಹೋದ ಯಡಿಯೂರಪ್ಪ
Recommended Video
ಬೆಂಗಳೂರು, ಡಿಸೆಂಬರ್ 8 : ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳಿವು-ಉಳಿವು 15 ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಮೇಲೆ ತೀರ್ಮಾನವಾಗಲಿದೆ. ಸೋಮವಾರ ಫಲಿತಾಂಶ ಪ್ರಕಟವಾಗಲಿದ್ದು, ಅದಕ್ಕೂ ಮೊದಲು ಯಡಿಯೂರಪ್ಪ ದೇವರ ಮೊರೆ ಹೋಗಲಿದ್ದಾರೆ.
ಹೌದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಉಪ ಚುನಾವಣೆಯಲ್ಲಿ ಕನಿಷ್ಠ 6 ಸ್ಥಾನಗಳಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಯಡಿಯೂರಪ್ಪ ಅವರಿಗೆ ಇದೆ.
2019ರ ಲೋಕಸಭಾ ಚುನಾವಣೆ ಫಲಿತಾಂಶದ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಚುನಾವಣಾ ಕಣಕ್ಕಿಳಿದಿದ್ದರು.
15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಫಲಿತಾಂಶದ ಚಿತ್ರಣ ಲಭ್ಯವಾಗಲಿವೆ.

ಸರ್ಕಾರದ ಭವಿಷ್ಯ ನಿರ್ಧಾರ
ಉಪ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. 15 ಕ್ಷೇತ್ರಗಳ ಫಲಿತಾಂಶದ ಸ್ಪಷ್ಟ ಚಿತ್ರಣ ಮಧ್ಯಾಹ್ನದ ಹೊತ್ತಿಗೆ ತಿಳಿಯಲಿದೆ. ನಂತರ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳಲಿವೆ. ಕನಿಷ್ಠ 6 ಸ್ಥಾನಗಳನ್ನು ಗೆಲ್ಲಲು ಯಡಿಯೂರಪ್ಪ ವಿಫಲವಾದಲ್ಲಿ ಮತ್ತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಕಸರತ್ತು ಆರಂಭವಾಗಲಿದೆ ಎಂಬ ಸುದ್ದಿಗಳು ಹಬ್ಬಿವೆ.

ಬಿಜೆಪಿಗೆ ಶಾಕ್ ಕೊಟ್ಟಿದ್ದ ಕೈ ಹೈಕಮಾಂಡ್
ಕಳೆದ ವರ್ಷ ವಿಧಾನಸಭೆ ಚುನಾವಣೆ ಫಲಿತಾಂಶ ಸ್ಪಷ್ಟವಾಗುತ್ತಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಜೆಡಿಎಸ್ ವರಿಷ್ಠ ದೇವೇಗೌಡರನ್ನ ಸಂಪರ್ಕಿಸಿದ್ದರು. ಆಮೇಲೆ ಬಿಜೆಪಿಗೆ ಸರ್ಕಾರ ರಚನೆ ಅವಕಾಶವನ್ನು ರಾಜ್ಯಪಾಲರು ಕೊಟ್ಟರೂ ಬಹುಮತ ಸಾಬೀತು ಮಾಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರು. ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಈ ಮೂಲಕ ಬಿಜೆಪಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ಕೊಟ್ಟಿತ್ತು.

ಕಾದು ನೋಡುತ್ತಿರುವ ಕೈ-ತೆನೆ ನಾಯಕರು
2018ರ ವಿಧಾನಸಭೆ ಚುನಾವಣೆ ಫಲಿತಾಂಶದಂತೆ ಈಗಲೂ ಉಪ ಚುನಾವಣೆ ಫಲಿತಾಂಶ ಬರಲಿದೆ ಎಂದು ಕಾಂಗ್ರೆಸ್-ಜೆಡಿಎಸ್ ನಾಯಕರು ಲೆಕ್ಕಾಚಾರ ಹಾಕಿದ್ದಾರೆ. ಕನಿಷ್ಠ 6 ಸೀಟು ಗೆಲ್ಲುವಲ್ಲಿ ಬಿಜೆಪಿ ವಿಫಲವಾದರೆ ಮತ್ತೆ ಮೈತ್ರ ಸರ್ಕಾರ ರಚನೆ ಪ್ರಯತ್ನ ಆರಂಭಿಸಲು ಉಭಯ ಪಕ್ಷಗಳ ನಾಯಕರು ಮೊದಲ ಹಂತದ ಮಾತುಕತೆಗಳನ್ನು ಮುಗಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಹೊರಗಿಟ್ಟು ಮೈತ್ರಿ?
ಜೆಡಿಎಸ್ ವರಿಷ್ಯ ದೇವೇಗೌಡರನ್ನು ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧಿಸುತ್ತಾರೆ. ಆದ್ದರಿಂದ, ಸಿದ್ದರಾಮಯ್ಯ ಹೊರಗಿಟ್ಟು ಮೈತ್ರಿಕೂಟ ರಚನೆ ಕಸರತ್ತು ನಡೆಯುವ ಸಾಧ್ಯತೆ ಇದೆ. ಆದರೆ, ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಲಿದೆಯೇ?. ಸಿದ್ದರಾಮಯ್ಯ ಸುಮ್ಮನೆ ಇರಲಿದ್ದಾರೆಯೇ? ಎಂಬ ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ನಡೆದಿವೆ.












Click it and Unblock the Notifications