ಅತಿವೃಷ್ಟಿ-ನೆರೆ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ!
ಬೆಂಗಳೂರು, ಜು. 23: ಬಿ.ಎಸ್. ಯಡಿಯೂರಪ್ಪ ಅವರು ಎರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಾಗಲೂ ರಾಜ್ಯದಲ್ಲಿ ಅತಿವೃಷ್ಟಿ ಪರಿಸ್ಥಿತಿ ಎದುರಾಗಿತ್ತು. ಇದೀಗ ಜುಲೈ 26ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತಿವೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಮಳೆ ಹಾಗೂ ನೆರೆ ಪರಿಸ್ಥಿತಿ ಎದುರಾಗಿದೆ.
ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. "ಯಾವುದೇ ಕಾರಣಕ್ಕೂ ಅಧಿಕಾರಿಗಳು ರಜೆ ಹಾಕಬಾರದು" ಎಂದು ಸೂಚಿಸಿರುವ ಸಿಎಂ ಯಡಿಯೂರಪ್ಪ ಅವರು, "ಅಧಿಕಾರಿಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜೊತೆಗೆ ಮುಂದಿನ 48 ಗಂಟೆ ಏನು ಆಗಬಹುದು ಎಂಬುದನ್ನು ಊಹೆ ಮಾಡಿ ಕೆಲಸ ಮಾಡಬೇಕು" ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

"ಪ್ರವಾಹ ಪೀಡಿತ ಗ್ರಾಮಗಳ ಗ್ರಾಮಸ್ಥರನ್ನು ಶೀಘ್ರವೇ ತೆರುವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಕಳುಹಿಸಬೇಕು. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಬೇಕು" ಎಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು. ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತಾಗಿ ಕಳುಹಿಸಿ ಎಂದು ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸೂಚಿಸಿದರು.

"ಆದಷ್ಟು ಹೆಚ್ಚು ಕಾಳಜಿ ಕೇಂದ್ರಗಳನ್ನು ತೆರದು ಸರ್ವ ಸನ್ನದ್ಧರಾಗಿರಬೇಕು. ಜೊತೆಗೆ ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ಅಗತ್ಯವಿದ್ದಲ್ಲಿ ಸೇನಾ ಹೆಲಿಕಾಪ್ಟರ್ಗಳನ್ನು ಕಾಯ್ದಿರಿಸಿಕೊಳ್ಳಿ" ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದರು. ಕಂದಾಯ ಸಚಿವ ಆರ್. ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.












Click it and Unblock the Notifications