ಮಳೆ ಹಾನಿ ಪರಿಹಾರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ!
ಬೆಂಗಳೂರು, ಜು. 20: ರಾಜ್ಯದಲ್ಲಿ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ.
ರಾಜ್ಯದ ಮಲೆನಾಡು ಸೇರಿದಂತೆ ವಿವಿಧೆಡೆ ಕಳೆದ 8 ದಿನಗಳಿಂದ ಸತತ ಮಳೆಯಾಗುತ್ತಿದ್ದು, ತುರ್ತಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದರು. ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಿ ಎಂದು ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
"ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಡಿಸಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಲ್ಲಿ ಈಗಾಗಲೇ ಲಭ್ಯವಿರುವ ಮೊತ್ತವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡಿ. ನದಿ ಮತ್ತು ಭೂಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲು ಕ್ರಮಕೈಗೊಳ್ಳಬೇಕು. ಭೂಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಬೇಕು" ಎಂದು ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಸೂಚಿಸಿದರು.

ಅದರೊಂದಿಗೆ ಮಳೆಯಿಂದ ಬೆಳೆಗೆ ನಷ್ಟವಾಗಿದ್ದಲ್ಲ ಆ ಬಗ್ಗೆ ಸಮೀಕ್ಷೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು. ಸಮೀಕ್ಷೆ ನಡೆಸಿ ವರದಿ ಕೊಟ್ಟಲ್ಲಿ ಹಾನಿಗೊಳಗಾಗಿರುವ ಬೆಳೆಗೆ ಪರಿಹಾರ ಕೊಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಡಿಸಿಎಂ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ. ಪಾಟೀಲ್ , ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ.ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.












Click it and Unblock the Notifications