ಟ್ರಂಪ್ ಜೊತೆ ಔತಣಕೂಟಕ್ಕೆ ಯಡಿಯೂರಪ್ಪಗೆ ಆಹ್ವಾನ
ಬೆಂಗಳೂರು, ಫೆಬ್ರವರಿ 24 : ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎರಡು ದಿನದ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಲಾಗಿದೆ.
ಡೊನಾಲ್ಡ್ ಟ್ರಂಪ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಸಂಜೆ ಔತಣಕೂಟ ಆಯೋಜನೆ ಮಾಡಲಾಗಿದೆ. ಇದಕ್ಕೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೂ ಆಹ್ವಾನಿಸಲಾಗಿದೆ.
ಯಡಿಯೂರಪ್ಪ ಸೋಮವಾರ ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. "ಔತಣಕೂಟದಲ್ಲಿ ಪಾಲ್ಗೊಳ್ಳಲು ಆಹ್ವಾನ ಬಂದಿದೆ. ಆದರೆ, ಅದರಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ" ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಎರಡು ದಿನದ ಭೇಟಿಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ಸೋಮವಾರ ಮಧ್ಯಾಹ್ನ 11.45ಕ್ಕೆ ಭಾರತಕ್ಕೆ ಆಗಮಿಸಿದ್ದಾರೆ. ವಿವಿಧ ಕಾರ್ಯಕ್ರದಲ್ಲಿ ಪಾಲ್ಗೊಂಡು ಅವರು ಮಂಗಳವಾರ ರಾತ್ರಿ 10 ಗಂಟೆಗೆ ವಾಪಸ್ ಆಗಲಿದ್ದಾರೆ.

ವಿವಿಧ ಕಾರ್ಯಕ್ರಮಗಳಿವೆ
"ಮಂಗಳವಾರ ವಿವಿಧ ಕಾರ್ಯಕ್ರಮಗಳು ನಿಗದಿಯಾಗಿವೆ. ಬಜೆಟ್ ಸಿದ್ಧತೆ ಬಗ್ಗೆ ಸಭೆಗಳಿವೆ. ಔತಣಕೂಟದಲ್ಲಿ ಪಾಲ್ಗೊಳ್ಳುವ ಕುರಿತು ಇನ್ನೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ" ಎಂದು ಬಿ. ಎಸ್. ಯಡಿಯೂರಪ್ಪ ಹೇಳಿದರು.

ಸಾಮಾನ್ಯ ಸಂಗತಿಯಲ್ಲ
"ವಿಶ್ವದ ಪ್ರಭಾವಿ ದೇಶ ಅಮೆರಿಕದ ಅಧ್ಯಕ್ಷರು ಭಾರತಕ್ಕೆ ಎರಡು ದಿನ ಭೇಟಿ ನೀಡುತ್ತಿರುವುದು ಸಾಮಾನ್ಯ ಸಂಗತಿಯಲ್ಲ. ಯಾವ-ಯಾವ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ? ಎಂದು ಕಾದು ನೋಡೋಣ" ಎಂದು ಯಡಿಯೂರಪ್ಪ ಹೇಳಿದರು.

ನವದೆಹಲಿಗೆ ಆಗಮನ
ಸೋಮವಾರ ಬೆಳಗ್ಗೆ ಡೊನಾಲ್ಡ್ ಟ್ರಂಪ್ ಅಹಮದಾಬಾದ್ಗೆ ಆಗಮಿಸಿದರು. ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ತಾಜ್ ಮಹಲ್ಗೆ ಆಗಮಿಸಿದ್ದಾರೆ. ದೆಹಲಿಯಲ್ಲಿ ಅವರು ವಾಸ್ತವ್ಯ ಹೂಡಲಿದ್ದು, ಮಂಗಳವಾರ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಔತಣ ಕೂಟ
ಮಂಗಳವಾರ ದೆಹಲಿಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡೊನಾಲ್ಡ್ ಟ್ರಂಪ್ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಔತಣಕೂಟ ಆಯೋಜನೆ ಮಾಡಲಾಗಿದ್ದು, ರಾತ್ರಿ 10 ಗಂಟೆಗೆ ಅಮೆರಿಕಕ್ಕೆ ವಾಪಸ್ ಆಗಲಿದ್ದಾರೆ.












Click it and Unblock the Notifications