ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜೆಡಿಎಸ್ ಮಾಜಿ ಶಾಸಕರ ಮಾತು!
ಬೆಂಗಳೂರು, ಸೆಪ್ಟೆಂಬರ್ 21; ಕೋಲಾರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಈಗಾಗಲೇ ಕಾಂಗ್ರೆಸ್ ಸೇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಈಗ ಜೆಡಿಎಸ್ ಪಕ್ಷದ ಮಾಜಿ ಶಾಸಕರೊಬ್ಬರು ಈ ಕುರಿತು ಮಾತನಾಡಿದ್ದಾರೆ.
ನವಲಗುಂದ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ನಾಯಕ ಎನ್. ಎಚ್. ಕೋನರಡ್ಡಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಬಳಿಕ ಅವರು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಹ ರಾಜೀನಾಮೆ ನೀಡಿದ್ದರು.
ಮುಂಡರಗಿಯಲ್ಲಿ ಮಾತನಾಡಿರುವ ಎನ್. ಎಚ್. ಕೋನರಡ್ಡಿ, "ರಾಜಕಾರಣದಲ್ಲಿ ಯಾವುದನ್ನೂ ಅಲ್ಲಗಳೆಯುವಂತಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ವರಿಷ್ಠರು ಬೆಂಗಳೂರಿಗೆ ಬರುವಂತೆ ಕರೆ ಮಾಡಿದ್ದಾರೆ. ಎರಡು ದಿನದಲ್ಲಿ ಅವರನ್ನು ಭೇಟಿ ಮಾಡುವೆ" ಎಂದು ಹೇಳಿದ್ದಾರೆ.
2018ರ ಚುನಾವಣೆಯಲ್ಲಿ ಎನ್. ಎಚ್. ಕೋನರಡ್ಡಿ 45,197 ಮತಗಳನ್ನು ಪಡೆದು ಬಿಜೆಪಿಯ ಶಂಕರ ಪಾಟೀಲ್ ಮುನೇನಕೊಪ್ಪ ವಿರುದ್ಧ ಸೋಲು ಕಂಡಿದ್ದಾರೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಶಂಕರ ಪಾಟೀಲ್ ಮುನೇನಕೊಪ್ಪ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಇಲಾಖೆ ಸಚಿವರು.

ರಾಜಕೀಯ ವಲಯದಲ್ಲಿ ಹಬ್ಬಿದ ಸುದ್ದಿ
ಜೆಡಿಎಸ್ ನಾಯಕ ಎನ್. ಎಚ್. ಕೋನರಡ್ಡಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ನವಲಗುಂದದಲ್ಲಿ ಬಲವಾಗಿ ಹಬ್ಬಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಯೂ ಇದೆ. "ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ" ಎಂದು ಮಾಧ್ಯಮಗಳ ಜೊತೆ ಮಾತನಾಡುವಾಗ ಕೋನರಡ್ಡಿ ಹೇಳಿದ್ದಾರೆ.

ರಾಜೀನಾಮೆ ಬಳಿಕ ಹಬ್ಬಿದ ಸುದ್ದಿ
ಇತ್ತೀಚೆಗೆ ಮುಗಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. 2013ರ ಚುನಾವಣೆಯಲ್ಲಿ ಪಾಲಿಕೆಯಲ್ಲಿ 9ರಲ್ಲಿ ಜೆಡಿಎಸ್ ಗೆದ್ದಿತ್ತು. ಈ ಬಾರಿ 1 ಸ್ಥಾನ ಗೆದ್ದಿದೆ. ಚುನಾವಣೆ ಬಳಿಕ ನೈತಿಕ ಹೊಣೆ ಹೊತ್ತು ಎನ್. ಎಚ್. ಕೋನರಡ್ಡಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆ ಬಳಿಕ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಬಲವಾಗಿ ಕೇಳಿ ಬರುತ್ತಿವೆ.

ಕಾರ್ಯಕರ್ತರ ಜೊತೆ ಚರ್ಚೆ
ಕಾಂಗ್ರೆಸ್ ಸೇರುವ ಬಗ್ಗೆ ಕೇಳಿ ಬರುತ್ತಿರುವ ಸುದ್ದಿಗೆ ಎನ್. ಎಚ್. ಕೋನರಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. "ಕಾಂಗ್ರೆಸ್ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿರುವುದು ಅಚ್ಚರಿ ಮೂಡಿಸಿದೆ. ವಿಧಾನಸಭೆ ಚುನಾವಣೆಗೆ 18 ತಿಂಗಳು ಬಾಕಿ ಇದೆ. ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ" ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಆತಂಕ
ಎನ್. ಎಚ್. ಕೋನರಡ್ಡಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಕ್ಷೇತ್ರದ ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿಸಿದೆ. ಮಾಜಿ ಶಾಸಕರು ಪಕ್ಷಕ್ಕೆ ಬಂದರೆ ಟಿಕೆಟ್ ಕೈ ತಪ್ಪಲಿದೆ ಎಂಬುದು ಇದಕ್ಕೆ ಕಾರಣವಾಗಿದೆ. ಕಳೆದ ಬಾರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದ ವಿನೋದ ಅಸೂಟಿ ಮುಂದಿನ ಚುನಾವಣೆ ಟಿಕೆಟ್ ಆಕಾಂಕ್ಷಿ. ಇನ್ನು ಕೆಲವು ನಾಯಕರು ಟಿಕೆಟ್ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ. ಎನ್. ಎಚ್. ಕೋನರಡ್ಡಿ ಬಂದರೆ ಯಾರಿಗೆ ಟಿಕೆಟ್? ಎಂಬುದು ಕುತೂಹಲಕ್ಕೆ ಕಾರಣವಾಗಿವೆ.
Recommended Video

ಜೆಡಿಎಸ್ ಸಭೆ, ಅಭ್ಯರ್ಥಿಗಳ ಆಯ್ಕೆ
"ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಸೆಪ್ಟೆಂಬರ್ 26, 27ರಂದು ಜೆಡಿಎಸ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸುವ ಸುಮಾರು 100 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ" ಎಂದು ಎನ್. ಎಚ್. ಕೋನರಡ್ಡಿ ಹೇಳಿದ್ದಾರೆ.












Click it and Unblock the Notifications