ಯುವ ನಿಧಿ ಯೋಜನೆ ಜಾರಿ ಕುರಿತು ಮಹತ್ವದ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್
ಬೆಳಗಾವಿ, ಡಿಸೆಂಬರ್ 13: ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ಘೋಷಣೆಗಳಲ್ಲಿ ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಗ್ಯಾರಂಟಿಗಳನ್ನ ಈಗಾಗಲೇ ಜಾರಿಗೊಳಿಸಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ಯುವ ಸಮುದಾಯವನ್ನ ಗಮನದಲ್ಲಿಟ್ಟುಕೊಂಡು 'ಯುವನಿಧಿ' ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದೆ.
ಹೌದು, ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದು, ನಾವು ಕೊಟ್ಟ ಮಾತಿನಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಯುವನಿಧಿ ಯೋಜನೆ ಜಾರಿ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗುವುದು. ಈ ಯೋಜನೆ ಜಾರಿಗೆ ತಾಂತ್ರಿಕ ವಿಚಾರವಾಗಿ ಚರ್ಚೆ ಮಾಡಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಕೌಶ್ಯಲ್ಯಾಭಿವೃದ್ಧಿ ಸಚಿವರಿಗೆ ನೀಡಿದ್ದೇವೆ. ಅಲ್ಲದೇ ಜನವರಿಯಲ್ಲಿ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ದಿನಾಂಕವನ್ನು ಸಚಿವರು ಪ್ರಕಟಿಸಲಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಬೆಳಗಾವಿ ಅಧಿವೇಶನ ಒಂದು ವಾರ ಮುಂದುವರಿಸಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಚರ್ಚೆ ಮಾಡುವ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಇಲ್ಲಿ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು. ಆದರೆ ಬಿಜೆಪಿಯವರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ನರೇಗಾ ಯೋಜನೆಯಡಿ ಇರುವ 100 ಕೂಲಿ ದಿನಗಳನ್ನು 150ಕ್ಕೆ ಏರಿಸಲು ಕಾನೂನಿನಲ್ಲಿ ಅವಕಾಶ ಇದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಇದನ್ನು ಏರಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಡಿಎ, ಬಿಬಿಎಂಪಿ ಆಸ್ತಿ ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ
ಬಿಡಿಎ, ಬಿಬಿಎಂಪಿ ಆಸ್ತಿಯನ್ನು ಯಾರೇ ಒತ್ತುವರಿ ಮಾಡಿದ್ದರೂ ಮುಲಾಜಿಲ್ಲದೆ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಈ ಬಗ್ಗೆ ಮಂಗಳವಾರ ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಉತ್ತರಿಸಿದರು.
ಬಿಡಿಎ ಅಧೀನದಲ್ಲಿ ಇರುವ ಉದ್ಯಾನಗಳ ಸಂಖ್ಯೆ ಮತ್ತು ಉದ್ಯಾನಗಳ ಒತ್ತುವರಿಯ ಬಗ್ಗೆ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ನಮ್ಮ ಸರ್ಕಾರ ಅಧಿಕಾರವಹಿಸಿಕೊಂಡ ತಕ್ಷಣ ಬೆಂಗಳೂರಿನ ಆಸ್ತಿಗಳನ್ನು ಹೊಸ ತಂತ್ರಜ್ಞಾನದ ಮೂಲಕ ಮ್ಯಾಪಿಂಗ್ ಕೆಲಸ ಮಾಡುತ್ತಿದೆ. ಒಂದಷ್ಟು ಆಸ್ತಿ ವ್ಯಾಜ್ಯಗಳು ನ್ಯಾಯಾಲಯದಲ್ಲಿವೆ. ಸರ್ಕಾರಿ ಆಸ್ತಿಗಳನ್ನು ಉಳಿಸಿ ಸಾರ್ವಜನಿಕರ ಉಪಯೋಗಕ್ಕೆ ಬಳಕೆ ಮಾಡಲಾಗುವುದು ಎಂದರು.
ಒತ್ತುವರಿಯ ಬಗ್ಗೆ ನಿಮ್ಮ ಬಳಿ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ, ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ರಕ್ಷಣೆ ಮಾಡುವ ಸಂದರ್ಭ ಬರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಪ್ರಭಾವಿಗಳ ಹೆಸರು ಹೇಳಿಕೊಂಡು ಪಾರ್ಕ್ ನಿರ್ಮಾಣವಾಗಬೇಕಿದ್ದ ಜಾಗದಲ್ಲಿ ನಮ್ಮ ಸ್ವತ್ತು ಎಂದು ಯಾರೋ ಬೋರ್ಡ್ ಹಾಕಿದ್ದಾರೆ. ಇದೇ ರೀತಿ ಅನೇಕ ಉದ್ಯಾನದ ಜಾಗಗಳು ಒತ್ತುವರಿಯಾಗಿವೆ ಎಂದು ಶಾಸಕರು ಹೇಳಿದಾಗ ಡಿಸಿಎಂ ಅವರು, "ಶಾಸಕ ಮುನಿರತ್ನ ಅವರು ಹೇಳಿರುವ ಕೊಟ್ಟಿಗೆಪಾಳ್ಯ ವಾರ್ಡ್ ನಂಬರ್ 73ರ ಸರ್ವೆ ನಂಬರ್ 19 ಅನ್ನು ಯಾರೋ ಒಬ್ಬರು ತಮಗೆ ಸೇರಿದ್ದು ಎಂದು ಕೆಳ ನ್ಯಾಯಲಯದಲ್ಲಿ ಆದೇಶ ಪಡೆದುಕೊಂಡು ಬಂದಿದ್ದಾರೆ. ಶೀಘ್ರವೇ ಈ ಒತ್ತುವರಿ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪ್ರಮೋದ್ ಲೇಔಟ್ ಸೇರಿದಂತೆ ಇತರೆಡೆ ಪ್ರಭಾವಿಗಳ ಜೊತೆ ಇರುವ ಫೋಟೋ ತೋರಿಸಿ ಭೂಮಿ ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ ಎಂದ ಶಾಸಕ ಮುನಿರತ್ನ ಅವರಿಗೆ "ನಿನಗಿಂತ ಪ್ರಭಾವಿ ಯಾರಿದ್ದಾರಪ್ಪ ಎಂದು ಡಿಸಿಎಂ ಅವರು ಕಾಲೆಳೆದರು.












Click it and Unblock the Notifications