CM Siddaramaiah: ಯುವನಿಧಿ ಯೋಜನೆ ಯಾವಾಗ ಜಾರಿಯಾಗುತ್ತೆ ಗೊತ್ತಾ? : ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು, ಆಗಸ್ಟ್ 30: ಕಾಂಗ್ರೆಸ್ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಯಾಗಿದ್ದು, ಐದನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯೂ ಡಿಸೆಂಬರ್ ಅಥವಾ ಮುಂದಿನ ಜನವರಿಯಂದು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಗ್ಯಾರಂಟಿ ಜಾರಿಯಿಂದ ಕರ್ನಾಟಕ ದಿವಾಳಿಯಾಗಲಿಲ್ಲ, ಎಲ್ಲಾ ಕಾರ್ಯಕ್ರಮಕ್ಕೂ ಹಣ ಇಟ್ಟು ನಮ್ಮ ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ. ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುವ ವಿಶ್ವಾಸ, ಭರವಸೆ ನಮಗಿದೆ. ಐದು ಗ್ಯಾರಂಟಿಗಳನ್ನು ನಾವು ಜನರ ಮುಂದಿಟ್ಟಿದ್ದೆವು. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ನಾಲ್ಕನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಇಂದು ಜಾರಿಮಾಡಲಾಗಿದೆ ಎಂದರು.
ಈ ತಿಂಗಳ 27 ನೇ ತಾರೀಖೆಗೆ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಜನತೆಯ ಮುಂದೆ ಸರ್ಕಾರದ ಸಾಧನೆಗಳನ್ನು ತಿಳಿಸಲು ಸಣ್ಣ ಕೈಪಿಡಿ ಹೊರತರಲಾಗಿದೆ. ಈ ಕಿರುಹೊತ್ತಿಗೆ ಕಳೆದ ಮೂರು ತಿಂಗಳು, 10 ದಿನಗಳಲ್ಲಿ ಮಾಡಿರುವ ಸಾಧನೆಗಳನ್ನು ಒಳಗೊಂಡಿದೆ. ಈ ರಾಜ್ಯದ ಜನತೆಗೆ ನಮ್ಮ ಕರ್ತವ್ಯ ಜವಾಬ್ದಾರಿ ಹಾಗೂ ಸಾಧನೆಗಳನ್ನು ಮುಂದಿಡುವ ಪ್ರಯತ್ನ ಮಾಡಿದೆ ಎಂದರು.

ಕರ್ನಾಟಕದಲ್ಲಿ 1.26 ಕೋಟಿ ಕುಟುಂಬಗಳಿವೆ. ಆ ಕುಟುಂಬಗಳ ಯಜಮಾನಿಯಾರಿಗೆ 2000 ರೂ.ಗಳನ್ನು ಅವರ ಖಾತೆಗೆ ಇಂದು ಜಮಾ ಮಾಡಲಾಗಿದೆ. ಈ ಯೋಜನೆಗೆ 1.10 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ಇಡೀ ಭಾರತದಲ್ಲಿ ಯಾವ ರಾಜ್ಯವೂ ತೊಂದರೆಯಲ್ಲಿರುವ ಜನರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಂದರೆ ವರ್ಷಕ್ಕೆ 24 ಸಾವಿರ ಹಣವನ್ನು ಬಡವರಿಗೆ ವರ್ಗಾಯಿಸಿಲ್ಲ ಎನ್ನುವುದು ಕಟುಸತ್ಯ. ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, 48,500 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.
ಅನ್ನಭಾಗ್ಯ ಕಾರ್ಯಕ್ರಮವನ್ನು ಜುಲೈ 10 ರಂದು ಜಾರಿಗೆ ತಂದೆವು. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೇ ಹೋದರೂ ನಾವು 170 ರೂ.ಗಳನ್ನು ಅಕ್ಕಿ ಸಿಗುವವರೆಗೂ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡುದಾರರ ಖಾತೆಗೆ ಜಮಾ ಮಾಡಿದ್ದೇವೆ. ಜುಲೈ ತಿಂಗಳಿಂದ ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್ವರೆಗೆ ವಿದ್ಯುತ್ ಬಳಸುವವರಿಗೆಲ್ಲಾ ಉಚಿತ ವಿದ್ಯುತ್ ಒದಗಿಸಿ ಶೂನ್ಯ ಬಿಲ್ ನೀಡುತ್ತಿದ್ದೇವೆ. ಈ ಯೋಜನೆಗೆ 1.56 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ.
ಪ್ರಧಾನಿಗಳೇ ಈ 5 ಗ್ಯಾರಂಟಿಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳನ್ನು ಜಾರಿ ಮಾಡಿ, ನೀರಾವರಿ, ಲೋಕೋಪಯೋಗಿ, ವಸತಿ, ಗ್ರಾಮಿಣಾಭಿವೃದ್ಧಿಗೆ ಅನುದಾನವಿಟ್ಟು 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. 56 ಸಾವಿರ ಕೋಟಿ ರೂ.ಗಳು ಒಂದು ವರ್ಷಕ್ಕೆ ತಗಲುತ್ತದೆ. ನಮ್ಮದು ಬಡವರ , ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ರೈತರ, ಕಾರ್ಮಿಕರ, ಯುವಕರ ಪರವಾದ ಸರ್ಕಾರ ಎಂದು ಸಾಬೀತು ಮಾಡಲಾಗಿದೆ. ಯಾರು ಏನೇ ಹೇಳಿದರೂ ನಾನು ನುಡಿದಂತೆ ನಡೆದಿದ್ದೇವೆ. ವಿರೋಧ ಪಕ್ಷದವರು ಹೇಳಿರುವುದು ಸುಳ್ಳು ಎಂದರು. ರಾಜ್ಯದಲ್ಲಿ ಐತಿಹಾಸಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.












Click it and Unblock the Notifications