ದೆಹಲಿ ತಲುಪಿದ ಜೆಡಿಎಸ್ ಬಂಡಾಯ ಶಾಸಕರು, ಕಾಂಗ್ರೆಸ್ ನಾಯಕರ ಭೇಟಿ
ಬೆಂಗಳೂರು, ಅ.16 : ಜಮೀರ್ ಅಹಮದ್ ಖಾನ್ ಸೇರಿದಂತೆ ಜೆಡಿಎಸ್ನ ಬಂಡಾಯ ಶಾಸಕರು ದೆಹಲಿ ತಲುಪಿದ್ದಾರೆ. ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲು ಶಾಸಕರು ದೆಹಲಿಗೆ ತೆರಳಿದ್ದು, ಕಾಂಗ್ರೆಸ್ ಸೇರುವ ಕುರಿತು ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.
ಡಿಸೆಂಬರ್ನಲ್ಲಿ ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ
'ಎಲ್ಲಾ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತೇವೆ' ಎಂದು ಜಮೀರ್ ಅಹಮದ್ ಖಾನ್ ಕಳೆದ ವಾರ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಲು ಶಾಸಕರು ದೆಹಲಿ ತಲುಪಿದ್ದು, ಸಂಜೆ ದಿಗ್ವಿಜಯ್ ಸಿಂಗ್ ಭೇಟಿ ಮಾಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮುಂತಾದ ನಾಯಕರು ಸಂಜೆ ದೆಹಲಿಗೆ ತೆರಳಲಿದ್ದು, ಗುರುವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಂಪುಟದಲ್ಲಿ ಗೃಹ ಖಾತೆ ಸೇರಿದಂತೆ ಮೂರು ಸ್ಥಾನಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಡಿಕೆಶಿ ಅಕ್ಕ-ಪಕ್ಕ ಕಾಣಿಸಿಕೊಳ್ಳುತ್ತಿರುವ ಜೆಡಿಎಸ್ ರೆಬೆಲ್ ಶಾಸಕರು
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಬಂಡಾಯ ಶಾಸಕರ ಪಕ್ಷ ಸೇರ್ಪಡೆ ವಿಚಾರದ ಕುರಿತು ಮಾತುಕತೆ ನಡೆಯಲಿದೆ. ಆದ್ದರಿಂದ, ಶಾಸಕರು ಮುಖ್ಯಮಂತ್ರಿಗಳಿಗಿಂತ ಮೊದಲು ದೆಹಲಿ ತಲುಪಿದ್ದಾರೆ. ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಆ.31ರಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿ ಆಯ್ಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಯಾವ-ಯಾವ ಶಾಸಕರು : ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ಶಾಸಕರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿತ್ತು. ಈ ಶಾಸಕರು ಈಗ ಕಾಂಗ್ರೆಸ್ ಸೇರುವ ಪ್ರಯತ್ನ ನಡೆಸಿದ್ದಾರೆ.
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ) ಜೆಡಿಎಸ್ ನಿಂದ ಅಮಾನತುಗೊಂಡವರು.