ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಜಮೀರ್ ಅಹಮದ್ ಖಾನ್ ಸೂಚನೆ
ಮದರಸಾಗಳಲ್ಲಿ ವಿಜ್ಞಾನ, ಗಣಿತ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಎಲ್ಲಾ ವಿಷಯಗಳನ್ನು ಬೋಧಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಸೋಮವಾರ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸಬೇಕು ಎಂದು ಸೂಚನೆ ನೀಡಿದರು.
ವಕ್ಫ್ ಬೋರ್ಡ್ನಲ್ಲಿ 1,265 ಮದರಸಾಗಳು ನೋಂದಣಿಯಾಗಿದ್ದು, ಅಧಿಕಾರಿಗಳು 100 ಮದರಸಾಗಳಲ್ಲಿ 5,000 ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ ಆ ವಿಷಯಗಳನ್ನು ಬೋಧನೆ ಮಾಡಬೇಕು ಎಂದು ಸಚಿವರ ಕಚೇರಿಯ ಹೇಳಿಕೆ ತಿಳಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಾದ್ಯಂತ ಎಲ್ಲಾ ಮದರಸಾಗಳಿಗೆ ವಿಸ್ತರಿಸಲು ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಯೋಜನೆಯಡಿ ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 20 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು 30 ಲಕ್ಷ ರೂ.ಗೆ ಹೆಚ್ಚಿಸಲು ಮತ್ತು ಐಐಟಿ, ಎನ್ಐಟಿ ಸೇರಿದಂತೆ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಲು ಸಚಿವರು ಸೂಚನೆ ನೀಡಿದರು. ಪ್ರಸ್ತುತ 2 ಲಕ್ಷ ರೂಪಾಯಿಗಳಿಂದ 4 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಕನ್ನಡ ಕಲಿಸುವ ನಿರ್ಧಾರಕ್ಕೆ ಮೆಚ್ಚುಗೆ
ಜಮೀರ್ ಅಹ್ಮದ್ ಅವರ ಈ ಆದೇಶವನ್ನು ಕನ್ನಡಿಗರು ಸ್ವಾಗತಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಲು ಇಷ್ಟು ವರ್ಷಗಳು ಬೇಕಾಯ್ತು ಎಂದು ಹಲವರು ಹೇಳಿದ್ದರೆ. ಮತ್ತೆ ಕೆಲವರು ಜಮೀರ್ ಅಹ್ಮದ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಮದರಸಾಗಳಲ್ಲಿ ಕನ್ನಡ ಕಲಿಸುವ ಕೆಲಸ ಶುರುವಾಗಲಿ ಎಂದು ಹಲವರು ಹೇಳಿದ್ದಾರೆ. ಇನ್ನೂ ಕೆಲವರು ಇದು ಆದೇಶವಾಗಿ ಮಾತ್ರ ಉಳಿಯಬಾರದು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು, ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲಾ ಮದರಸಾಗಳಲ್ಲಿ ಕನ್ನಡ ಕಲಿಸುವ ಕೆಲಸ ಶುರುವಾಗಬೇಕು ಎಂದು ಹೇಳಿದ್ದಾರೆ.
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದೆ ಟೀಕೆಗೆ ಒಳಗಾಗಿದ್ದ ಜಮೀರ್ ಅಹಮದ್ ಈಗ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವುದಕ್ಕೆ ಕನ್ನಡ ಪರ ಹೋರಾಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.












Click it and Unblock the Notifications