ಐ ಯಾಮ್ ಸಾರಿ ಎಂದ ಜಮೀರ್ ಅಹಮದ್ ಖಾನ್!
ಬೆಂಗಳೂರು, ನವೆಂಬರ್ 28 : ವಿಧಾನಪರಿಷತ್ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ. ಮೈತ್ರಿ ಮುರಿದುಬಿದ್ದ ಬಳಿಕ ಶಾಸಕ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಕೂತೂಹಲಕ್ಕೆ ಕಾರಣವಾಗಿದೆ.
ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಮತ್ತು ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಅವರು, ಮೈತ್ರಿ ಬಗ್ಗೆ ಮಾತುಕತೆ ನಡೆಸಿ ಸಮಯ ವ್ಯರ್ಥ ಮಾಡಿದ್ದಕ್ಕೆ ಮುಖ್ಯಮಂತ್ರಿಗಳ ಕ್ಷಮೆ ಯಾಚಿಸಿದ್ದಾರೆ ಎಂದು ತಿಳಿದುಬಂದಿದೆ. [ಕುಮಾರಸ್ವಾಮಿಯನ್ನು ಚರ್ಚೆಗೆ ಆಹ್ವಾನಿಸಿದ ಜಮೀರ್!]

ಸೋಮವಾರ ಜಮೀರ್ ಅಹಮದ್ ಖಾನ್ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದರು. [ಮೈತ್ರಿ ಬಗ್ಗೆ ಮಾತಾಡಿದ್ದಕ್ಕೆ ಮುನಿಸು, ಎಚ್ಚರಿಕೆ ಕೊಟ್ಟ ಎಚ್ಡಿಕೆ]
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಸೂಚನೆಯಂತೆ ಸಿಂಗ್ ಭೇಟಿ ಮಾಡಲಾಗಿತ್ತು. ಆದರೆ, ಎಚ್.ಡಿ.ಕುಮಾರಸ್ವಾಮಿ ಅವರು ಈ ಭೇಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ನಾಯಕರ ಸೂಚನೆ ಇಲ್ಲದೇ ಭೇಟಿ ಮಾಡಿದ್ದಾರೆ ಎಂದು ದೂರಿದ್ದರು. [ಪರಿಷತ್ ಚುನಾವಣೆ ವೇಳಾಪಟ್ಟಿ ಪ್ರಕಟ]
ಜಮೀರ್ ಅಹಮದ್ ಖಾನ್, ಚೆಲುವರಾಯಸ್ವಾಮಿ, ಕುಮಾರಸ್ವಾಮಿ ನಡುವಿನ ಅಸಮಾಧಾನದ ಹೇಳಿಕೆಗಳ ನಡುವೆ ಶುಕ್ರವಾರ ಮೈತ್ರಿ ಮುರಿದು ಬಿದ್ದಿತ್ತು. ಯಾವ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಮತ್ತು ದೇವೇಗೌಡರು ಶುಕ್ರವಾರ ಘೋಷಿಸಿದ್ದರು.
ಇದರಿಂದಾಗಿ ಮೈತ್ರಿ ಮಾತುಕತೆಯ ಮುಂಚೂಣಿಯಲ್ಲಿದ್ದ ಜಮೀರ್ ಅಹಮದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅವರ ಸಮಯ ಹಾಳು ಮಾಡಿದ್ದಕ್ಕೆ ಕ್ಷಮೆ ಕೋರಿದ್ದಾರೆ ಎಂದು ತಿಳಿದುಬಂದಿದೆ.
ಮೈತ್ರಿ ಬಗ್ಗೆ ಮಾತನಾಡಿಲ್ಲ : ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್ ಅಹಮದ್ 'ಕ್ಷೇತ್ರದ ವಿಚಾರವಾಗಿ ಚರ್ಚೆ ನಡೆಸಲು ಆಗಮಿಸಿದ್ದೆವು. ಮೈತ್ರಿ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಮೈತ್ರಿ ಮಾತುಕತೆ ನಿನ್ನೆ (ಶುಕ್ರವಾರವೇ) ಮುಗಿದು ಹೋಗಿದೆ' ಎಂದು ಹೇಳಿದರು.
ಅಂದಹಾಗೆ ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.












Click it and Unblock the Notifications