12 ವಾರಗಳ ನಂತರ ಜಿ.ಪಂ, ತಾ.ಪಂ ಚುನಾವಣೆ: ಸರ್ಕಾರಕ್ಕೆ ಹೈಕೋರ್ಟ್ ಗಡುವು
ಬೆಂಗಳೂರು ಮೇ 24. ಕೊನೆಗೂ ಸುಮಾರು ಒಂದೂವರೆ ವರ್ಷದಿಂದ ಖಾಲಿ ಇರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ ಚುನಾವಣೆಗೆ ಕಾಲ ಕೂಡಿ ಬಂದಂತೆ ಕಾಣುತ್ತಿದೆ.
ಸರ್ಕಾರ ಹಿಂದುಳಿದ ವರ್ಗಗಳಿಗೆ ಮೀಸಲು ಕಲ್ಪಿಸಿ ಚುನಾವಣೆ ನಡೆಸಲು ಮುಂದಾಗಿದೆ. ಈ ಮಧ್ಯೆ, ಹೈಕೋರ್ಟ್ ಮಂಗಳವಾರ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಸರ್ಕಾರಕ್ಕೆ 12 ವಾರಗಳ ಗಡುವು ನೀಡಿದ್ದು, ಅಷ್ಟರಲ್ಲಿ ಕ್ಷೇತ್ರ ಪುನರ್ವಿಂಗಡಣೆ, ಮೀಸಲು ನೀಡಲು 12 ವಾರ ಸಮಯಾವಕಾಶ ನೀಡಿದೆ.
ಅಲ್ಲದೆ, ಯಾವುದೇ ಕಾರಣಕ್ಕೂ ಮತ್ತೆ ಹೆಚ್ಚಿನ ಕಾಲಾವಕಾಶ ಕೇಳದಂತೆ ತಾಕೀತು ಮಾಡಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ಈ ಆದೇಶ ನೀಡಿತು. ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೆಮೋ ಸಲ್ಲಿಸಿ, ಕ್ಷೇತ್ರ ಪುನರ್ವಿಂಗಡಣೆ, ಮೀಸಲಾತಿಗೆ 12 ವಾರ ಸಮಯಾವಕಾಶ ನೀಡಬೇಕು. ನಿವೃತ್ತ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಮೀಸಲು ನಿಗದಿಗೆ ಆಯೋಗ ರಚಿಸಲಾಗಿದೆ ಅದರ ವರದಿಗಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದೆ.
ಸರ್ಕಾರದ ವಾದ ಮಂಡಿಸಿದ ಎಜಿ ಪ್ರಭುಲಿಂಗ್ ನಾವದಗಿ ಮನವಿ ಮಾಡಿ ಸಮಯಾವಕಾಶ ಕೋರಿದರು. ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿ 12 ವಾರಕ್ಕಿಂತ ಹೆಚ್ಚಿನ ಕಾಲಾವಕಾಶ ನೀಡದಂತೆ ಮನವಿ ಮಾಡಿದರು. ಕೊನೆಗೆ ಸರ್ಕಾರದ ಮನವಿಗೆ ರಾಜ್ಯ ಚುನಾವಣಾ ಆಯೋಗ ಒಪ್ಪಿಗೆ ನೀಡಿತು. ಹಾಗಾಗಿ ನ್ಯಾಯಾಲಯ ಅಂತಿಮವಾಗಿ 12 ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು.
ಆಯೋಗದ ಮನವಿ ಏನು?
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿಲ್ಲಾ ಹಾಗೂ ತಾಲ್ಲೂ ಪಂಚಾಯ್ತಿ ಚುನಾವಣೆ ನಡೆಸಬೇಕಾಗಿದೆ. ಈಗಾಗಲೇ ಚುನಾವಣೆ ಸಾಕಷ್ಟು ವಿಳಂಬವಾಗಿದೆ. ಈ ಕುರಿತ ಚುನಾವಣಾ ಆಯೋಗದ ಅರ್ಜಿ ವಿಚಾರಣಾ ಹಂತದಲ್ಲಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದ್ದು, ಅದಕ್ಕಾಗಿ ಮೆಮೋ ಸಲ್ಲಿಸಲಾಗಿದೆ ಎಂದು ಹೇಳಿತ್ತು.
ರಾಜ್ಯ ಚುನಾವಣಾ ಆಯೋಗ ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿತ್ತಯ. ಅದಕ್ಕಾಗಿ ಚುನಾವಣಾ ಆಯೋಗ ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿಯನ್ನೂ ಸಹ ಪ್ರಕಟ ಮಾಡಿತ್ತು ಹಾಗೂ ಮೀಸಲು ನಿಗದಿಯ ಕರಡು ಸಹ ಪ್ರಕಟಿಸಲಾಗಿತ್ತು.
Recommended Video
ಇನ್ನೇನು ದಿನಾಂಕ ಘೋಷಣೆ ಮಾಡಬೇಕೆನ್ನುವಷ್ಟರಲ್ಲಿ ಸರಕಾರ, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲು ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ಇನ್ನೂ ವಿಚಾರಣಾ ಹಂತದಲ್ಲಿದೆ.