ಆಂಬುಲೆನ್ಸ್ ಅಪಘಾತದಲ್ಲಿ ಮೃತರಾದವರ ಮನೆಗೆ ಶ್ರೀನಿವಾಸ ಪೂಜಾರಿ ಭೇಟಿ: ಪರಿಹಾರದ ಭರವಸೆ
ಕಾರವಾರ, ಜುಲೈ 26: ಚಿಕಿತ್ಸೆಗಾಗಿ ಉಡುಗೆ ತೆರಳುವ ವೇಳೆ ಆಂಬುಲೆನ್ಸ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ ನಂತರ, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಒದಗಿಸುವ ಬಗ್ಗೆ ಅಭಿಯಾನ ಆರಂಭವಾಗಿದೆ. ಈ ಕುರಿತು ಆಸ್ಪತ್ರೆ ಸ್ಥಾಪಿಸುವ ಬಗ್ಗೆ ತಿಂಗಳ ಅಂತ್ಯದೊಳಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ತಿರ್ಮಾನ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ಇತ್ತೀಚೆಗೆ ಶಿರೂರು ಟೊಲ್ ಗೇಟ್ ಬಳಿ ಆಂಬುಲೆನ್ಸ್ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮಕ್ಕಳೊಂದಿಗೆ ಚರ್ಚೆ ನಡೆಸಿ ಧೈರ್ಯ ತುಂಬಿದರು. ಅಪಘಾತದಲ್ಲಿ ಸಾವನ್ನಪ್ಪಿದವರ ಮರಣದ ದಾಖಲೆ, ವಿವಿಧ ದಾಖಲಾತಿ ಸಮಸ್ಯೆಯ ಬಗ್ಗೆ ಸ್ಥಳೀಯರು ಸಚಿವರ ಬಳಿ ಹೇಳಿಕೊಂಡಿದ್ದು, ಶಾಸಕ ಸುನಿಲ ನಾಯ್ಕ ಅಧಿಕಾರಿಗಳೊಂದಿಗೆ ಮಾತನಾಡಿ ಸಂಬಂಧಿಸಿದ ಎಲ್ಲಾ ದಾಖಲೆ ಒದಗಿಸುವ ಭರವಸೆ ನೀಡಿದರು.
ಉತ್ತರ ಕನ್ನಡದಲ್ಲಿ ಆಸ್ಪತ್ರೆ ಕೂಗು: ಮತ್ತೊಮ್ಮೆ ಟ್ವಿಟರ್ ಅಭಿಯಾನ!
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ಚೆಕ್ ಪೋಸ್ಟ್ ಬಳಿ ಕಳೆದ ಬುಧವಾರ ಭೀಕರ ಆಂಬುಲೆನ್ಸ್ ದುರಂತ ಸಂಭವಿಸಿತ್ತು. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಗಜಾನನ ನಾಯಕ ಎಂಬುವವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿ, ನಾಲ್ವರು ಸಾವನ್ನಪ್ಪಿ , ಟೋಲ್ ಸಿಬ್ಬಂದಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಅಪಘಾತದಲ್ಲಿ ಸಾವನ್ನಪ್ಪಿದ್ದ ರೋಗಿ ಗಜಾನನ ಗಣಪತಿ ನಾಯ್ಕ, ಅವರ ಪತ್ನಿ ಜ್ಯೋತಿ ನಾಯ್ಕ, ಸಂಬಂಧಿಕರಾದ ಮಂಜುನಾಥ ನಾಯ್ಕ ಹಾಗೂ ಲೋಕೇಶ್ ನಾಯ್ಕ ಮೃತಪಟ್ಟಿದ್ದರು. ಗಜಾನನ ನಾಯ್ಕ ಹಾಗೂ ಜ್ಯೋತಿ ಇಬ್ಬರು ಸಾವನ್ನಪ್ಪಿದ್ದರಿಂದ ಅವರ ಇಬ್ಬರು ಮಕ್ಕಳು ಅನಾಥವಾಗಿದ್ದರು.
ಕುಟುಂಬಕ್ಕೆ ಪರಿಹಾರದ ಭರವಸೆ
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೋಟ ಶ್ರೀನಿವಾಸ್, "ಆಸ್ಪತ್ರೆಗೆ ಕರೆದೊಯ್ಯುವಾಗ ಈ ಘಟನೆ ನಡೆದಿರುವುದು ದುರಂತ ಹಾಗೂ ನೋವಿನ ಸಂಗತಿಯಾಗಿದೆ. ಮೃತರಿಗೆ ಸ್ಥಳೀಯವಾಗಿ ಜೀವವಿಮೆ ಇತ್ಯಾದಿ ಲಭಿಸುವ ಕುರಿತು ಶಾಸಕ ಸುನೀಲ್ ನಾಯ್ಕ ನೋಡಿಕೊಳ್ಳುತ್ತಾರೆ. ಇದರೊಂದಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೃತರು ಹಾಗೂ ಗಾಯಾಳುಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ವಿಶೇಷ ಪರಿಹಾರವನ್ನು ಒದಗಿಸುವ ಕುರಿತು ಪ್ರಯತ್ನಿಸಲಾಗುವುದು. ಇದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಶಾಸಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿಶೇಷ ಪರಿಹಾರಧನ ನೀಡುವಂತೆ ಒತ್ತಾಯಿಸಲಾಗುವುದು" ಎಂದು ಭರವಸೆ ನೀಡಿದರು.
ಶಿರೂರು ಆಂಬುಲೆನ್ಸ್ ಅಪಘಾತ: ಆಧಾರ ಸ್ತಂಭವನ್ನೇ ಕಳೆದುಕೊಂಡ 3 ಕುಟುಂಬ,ತಬ್ಬಲಿಗಳಾದ ಮಕ್ಕಳು
ಸುಸಜ್ಜಿತ ಆಸ್ಪತ್ರೆಗೆ ಜಾಗ ಮೀಸಲು
ಇನ್ನು ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈಗಾಗಲೇ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿದ್ದೇನೆ. ಹೃದಯ ಭಾಗವಾಗಿರುವ ಕುಮಟಾದಲ್ಲಿ 15 ರಿಂದ 20 ಎಕರೆ ಜಾಗ ಕಾಯ್ದಿರಿಸಲಾಗಿದೆ. ತಿಂಗಳಾಂತ್ಯದಲ್ಲಿ ಜಿಲ್ಲೆಯ ಶಾಸಕರು, ಸಚಿವರೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದ ಬಳಿಕ ತೀರ್ಮಾನ ಪ್ರಕಟಿಸಲಾಗುವುದು. ಆಸ್ಪತ್ರೆ ಸರ್ಕಾರಿ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ನಡೆಯಲಿದೆಯೇ ಎನ್ನುವುದು ಆ ಬಳಿಕ ನಿರ್ಧಾರವಾಗಲಿದೆ ಎಂದರು.
ಸುಧಾಕರ್ ರೊಂದಿಗೆ ಕಾಗೇರಿ ಚರ್ಚೆ
ವಿಧಾನಸಭಾಧ್ಯಕ್ಷರೂ ಆಗಿರುವ, ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, " ಉತ್ತರಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತವಾದ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಅತ್ಯಗತ್ಯವಿದ್ದು, ತ್ವರಿತವಾಗಿ ನಿರ್ಮಾಣ ಮಾಡಬೇಕೆಂದು ಆರೋಗ್ಯ ಸಚಿವರಾದ ಸುಧಾಕರ ಅವರೊಂದಿಗೆ ಮಾತನಾಡಿದ್ದೇನೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ವಿಷಯದ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಇಂದೊಂದು ವಿಶೇಷ, ಅತ್ಯಗತ್ಯ ಪ್ರಕರಣವಾಗಿ ಪರಿಗಣಿಸಿ ಶೀಘ್ರದಲ್ಲಿಯೇ ಆಸ್ಪತ್ರೆ ನಿರ್ಮಿಸಲು ಅಗತ್ಯ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ" ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲಾತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ತುರ್ತು ಸೇವಾ ಕೇಂದ್ರಕ್ಕೆ ಪ್ರಸ್ತಾವನೆ
ಜಿಲ್ಲೆಯಲ್ಲಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಹಾಗೂ ತುರ್ತು ಸೇವಾ ಕೇಂದ್ರ ಆರಂಭಿಸುವ ಕುರಿತು ಕಾರವಾರ ವೈದ್ಯಕೀಯ ಮಹಾವಿದ್ಯಾಲದಲ್ಲಿ ಸೋಮವಾರ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ವೈದ್ಯಕೀಯ ತುರ್ತು ಸೇವಾ ಕೇಂದ್ರ ಸ್ಥಾಪಿಸಲು ಅನುಮತಿ ಹಾಗೂ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ಥಾವನೆ ಸಲ್ಲಿಸುತ್ತೇವೆ, ಜಿಲ್ಲಾ ಕೇಂದ್ರದಲ್ಲಿರುವ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ತುರ್ತು ಸೇವಾ ಕೇಂದ್ರ ಸ್ಥಾಪಿಸಲು ಸ್ಥಳದ ಕೊರತೆ ಇದೆ. ಹೀಗಾಗಿ ತಾತ್ಕಾಲಿಕವಾಗಿ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಪಕ್ಕದಲ್ಲಿ ಸ್ಥಳ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.
Recommended Video