ಟಿಪ್ಪು ಜಯಂತಿಯಲ್ಲಿ ನನ್ನ ಹೆಸರು ಹಾಕಬೇಡಿ, ಡಿಸಿಗೆ ಪತ್ರ ಬರೆದ ಅನಂತಕುಮಾರ್ ಹೆಗಡೆ
ಕಾರವಾರ, ನವೆಂಬರ್.04:ಇದೇ ತಿಂಗಳ 10ರಂದು ಸರ್ಕಾರದಿಂದ ನಡೆಯಲಿರುವ ಟಿಪ್ಪು ಜಯಂತಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಈ ಬಾರಿಯೂ ವಿರೋಧ ವ್ಯಕ್ತಪಡಿಸಿದ್ದಾರೆ.
ಜಯಂತಿ ಕಾರ್ಯಕ್ರಮದಲ್ಲಿ ತಮ್ಮ ಹೆಸರನ್ನು ಹಾಕದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಬೆಳಗಾವಿ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಅವರು ಈ ಬಾರಿಯೂ ಪತ್ರ ಬರೆದಿದ್ದಾರೆ.
ತಮ್ಮ ವಿಶೇಷ ಕರ್ತವ್ಯಾಧಿಕಾರಿ ವಿಜಯಕುಮಾರ್ ತೋರಗಲ್ ಮೂಲಕ ಪತ್ರ ರವಾನಿಸಿರುವ ಸಚಿವರು, ಈ ರೀತಿ ಉಲ್ಲೇಖಿಸಿದ್ದಾರೆ.

"ಕರ್ನಾಟಕ ಸಮ್ಮಿಶ್ರ ಸರ್ಕಾರವು ಜನತೆಯ ತೀವ್ರ ವಿರೋಧದ ನಡುವೆಯೂ ನ.10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ನಿರ್ಧರಿಸಿದೆ. ಇದನ್ನು ನಾನು ನಿಷ್ಠುರವಾಗಿ ಖಂಡಿಸುತ್ತಿದ್ದೇನೆ. ಟಿಪ್ಪು ಜಯಂತಿಗೆ ಪ್ರಾರಂಭದಿಂದಲೂ ಸಾರ್ವಜನಿಕರು ಹಾಗೂ ನಾಡಿನ ವಿಚಾರವಾದಿಗಳು ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.
ಟಿಪ್ಪು ಕನ್ನಡ ವಿರೋಧಿ. ಮತ್ತು ಹಿಂದೂ ವಿರೋಧಿಯಾಗಿರುವುದು ಇತಿಹಾಸದಿಂದ ತಿಳಿಯುತ್ತದೆ. ಇದಲ್ಲದೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿರೋಧ ಹಾಗೂ ಪ್ರತಿಭಟನೆಗಳು ನಡೆದು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿದೆ. ಈ ರೀತಿಯ ಒಬ್ಬ ಸಮಾಜ ಘಾತುಕ ವ್ಯಕ್ತಿಯನ್ನು ವೈಭವೀಕರಿಸಿ ಆತನ ಜಯಂತಿಯನ್ನು ಆಚರಿಸಲು ಹೊರಟಿರುವುದು ನಿಜಕ್ಕೂ ಖಂಡನೀಯ.
ಹೀಗಾಗಿ ಶಿಷ್ಠಾಚಾರದ ಪ್ರಕಾರ ನನ್ನ ಹೆಸರನ್ನು ನಮೂದಿಸಬೇಡಿ" ಎಂದು ತಿಳಿಸಿದ್ದಾರೆ.












Click it and Unblock the Notifications