ಭಟ್ಕಳ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಕ್ಷೇತ್ರ: ಯಡಿಯೂರಪ್ಪ
ಕಾರವಾರ, ನವೆಂಬರ್ 13: "ಭಟ್ಕಳ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಕ್ಷೇತ್ರ. ಇಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸ ಆಗುತ್ತಿದೆ," ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಶಾಸಕರನ್ನು ಜನತೆ ಆಯ್ಕೆ ಮಾಡಬೇಕು. ಈ ಮೂಲಕ ಹೋರಾಟಗಾರರಾಗಿ, ಶಾಸಕರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಗುಂಡಿಗೆ ಬಲಿಯಾದ ಡಾ. ಚಿತ್ತರಂಜನ್ ಅವರ ಆತ್ಮಕ್ಕೆ ಶಾಂತಿ ದೊರಕಿಸಿಕೊಡಲು ಜನತೆ ಮುಂದಾಗಬೇಕು ಎಂದು ಯಡಿಯೂರಪ್ಪ ಹೇಳಿದರು.

ಆತ್ಮಹತ್ಯೆಗೆ ನ್ಯಾಯ ದೊರಕಿಸಿ
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಗುರು ಸುಧೀಂದ್ರ ಕಾಲೇಜು ಮೈದಾನದಲ್ಲಿ ಸೋಮವಾರ ರಾತ್ರಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, "ಕೆಲವೇ ದಿನಗಳ ಹಿಂದೆ ಪುರಸಭೆ ಪ್ರಕರಣದಲ್ಲಿ ಅಂಗಡಿಕಾರ ರಾಮಚಂದ್ರ ನಾಯ್ಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಪ್ರಾಣ ತ್ಯಾಗಕ್ಕೆ ನ್ಯಾಯ ದೊರಕಿಸಿಕೊಡುವ ಕೆಲಸ ಆಗಬೇಕು," ಎಂದರು.

ವಿಷ ಬೀಜ ಬಿತ್ತುತ್ತಿದ್ದಾರೆ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ನ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಜಾತಿಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ರಾಜ್ಯ ಕಂಡು ಕೇಳರಿಯದ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಸರ್ಕಾರ ಸಿದ್ದರಾಮಯ್ಯನವರದ್ದು ಎಂದು ವಾಗ್ದಾಳಿ ನಡೆಸಿದರು.

ಮೊಂಡ ಮುಖ್ಯಮಂತ್ರಿ
ಬಳ್ಳಾರಿ ಸಂಸದ ಶ್ರೀರಾಮುಲು ಮಾತನಾಡಿ, ಮಾಂಸ, ಮೀನು ತಿಂದು ಧರ್ಮಸ್ಥಳಕ್ಕೆ ತೆರಳುವ ಸಿದ್ದರಾಮಯ್ಯ ಮೊಂಡ ಮುಖ್ಯಮಂತ್ರಿ ಎಂದರು.

ಗೊರ್ಟೆಯಲ್ಲಿ ಅದ್ಧೂರಿ ಸ್ವಾಗತ
ಬಿಜೆಪಿಯ ಪರಿವರ್ತನಾ ರಥಕ್ಕೆ ಭಟ್ಕಳದ ಗಡಿಭಾಗ ಗೊರ್ಟೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ವೇಳೆ ಹತ್ತು ಸಾವಿರಕ್ಕೂ ಅಧಿಕ ಮಂದಿ ಸೇರಿದ್ದರು.

ನಾಯಕರು ಭಾಗಿ
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ, ಕುಮಾರ ಬಂಗಾರಪ್ಪ, ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಶೆಟ್ಟಿ, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಶಿವಾನಂದ ನಾಯ್ಕ, ಹಾಲಪ್ಪ, ಮಾಜಿ ಶಾಸಕರಾದ ಜೆ. ಡಿ. ನಾಯ್ಕ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications