ಉತ್ತರ ಕನ್ನಡಕ್ಕೆ ಐನೂರು ಕೋಟಿ ಘೋಷಿಸಿದರೂ, ಸುಸಜ್ಜಿತ ಆಸ್ಪತ್ರೆ ಬಗ್ಗೆ ಸೊಲ್ಲೆತ್ತದ ಸಿಎಂ!
ಕಾರವಾರ, ಮಾರ್ಚ್ 9: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಉತ್ತರ ಕನ್ನಡಿಗರ ಬಹು ಬೇಡಿಕೆಯ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಬಗ್ಗೆ ಸೊಲ್ಲೆತ್ತದ ಸಿಎಂ, ಜಿಲ್ಲೆಗೆಂದೇ ನಾಲ್ಕೈದು ಹೊಸ ಯೋಜನೆಗಳಿಗೆ ಸುಮಾರು 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವುದೇ ಸುಸಜ್ಜಿತ ಆಸ್ಪತ್ರೆ ಇಲ್ಲ. ಕರಾವಳಿ ಹಾಗೂ ಘಟ್ಟದ ಮೇಲಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವು-ನೋವುಗಳ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಿರುವಾಗ ಅಗತ್ಯ ಹಾಗೂ ತುರ್ತು ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆಗಳಿಲ್ಲ. ಹೆಚ್ಚಿನ ಪ್ರಕರಣಗಳಲ್ಲಿ ಗಾಯಗೊಂಡವರನ್ನು ಅಥವಾ ರೋಗಿಗಳನ್ನು ನೆರೆ ರಾಜ್ಯ ಗೋವಾ, ನೆರೆ ಜಿಲ್ಲೆಗಳಾದ ಮಂಗಳೂರು, ಹುಬ್ಬಳ್ಳಿಗೆ ಕೊಂಡೊಯ್ಯಬೇಕಾದ ಅನಿವಾರ್ಯತೆ ಇದೆ. ಈ ನಡುವೆ ಅಸುನೀಗುವವರೇ ಹೆಚ್ಚು.
ಹೀಗಾಗಿ ಮೂರು ವರ್ಷಗಳಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಬೇಡಿಕೆ ಹೆಚ್ಚಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರೂ, ಈವರೆಗೂ ಯಾವುದೇ ಕ್ರಮವಾಗಿಲ್ಲ.

ಇತ್ತೀಚೆಗೆ ಕೇಂದ್ರ ಸಚಿವ ಶ್ರೀಪಾದ ನಾಯಕ ಅವರ ಕಾರು ಜಿಲ್ಲೆಯ ಅಂಕೋಲಾ ಬಳಿ ಅಪಘಾತಗೊಂಡು ಅವರ ಪತ್ನಿ ಸೇರಿದಂತೆ ಮೂವರು ಮೃತಪಟ್ಟಿದ್ದರು. ಈ ವೇಳೆ ಸಚಿವ ಶ್ರೀಪಾದರಿಗೆ ಚಿಕಿತ್ಸೆಗೆ ಜಿಲ್ಲೆಯಲ್ಲಿ ವ್ಯವಸ್ಥೆ ಇಲ್ಲದೆ ಗೋವಾಕ್ಕೆ ರವಾನಿಸಿದ್ದರು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು.
ಹೀಗಾಗಿ ಈ ಘಟನೆಯಿಂದಾಗಿಯಾದರೂ ಬಜೆಟ್ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅಥವಾ ಟ್ರಾಮಾ ಸೆಂಟರ್ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಜಿಲ್ಲೆಯ ಜನರಲ್ಲಿತ್ತು. ಆದರೆ ಅದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಸಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ
ಸುಸಜ್ಜಿತ ಆಸ್ಪತ್ರೆ ಕುರಿತು ಬಜೆಟ್ನಲ್ಲಿ ಘೋಷಣೆ ಮಾಡದ್ದಕ್ಕೆ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಫೇಸ್ ಬುಕ್ ಗಳಲ್ಲಿ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವ ಉಳಿಸಲು ಒಂದು ಆಸ್ಪತ್ರೆ ಇರದ ಮೇಲೆ ಕೋಟ್ಯಂತರ ರೂಪಾಯಿ ಅನುದಾನ ನೀಡಿಯೂ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications