Get Updates
Get notified of breaking news, exclusive insights, and must-see stories!

ಉದ್ಯಮಿ ಕೊಲೆ ಪ್ರಕರಣ; ಬನ್ನಂಜೆ ರಾಜಾ ಸೇರಿ 9 ಮಂದಿ ದೋಷಿಗಳು ಎಂದ ಕೋರ್ಟ್

ಕಾರವಾರ, ಮಾರ್ಚ್ 31: ಉತ್ತರ ಕನ್ನಡ ಜಿಲ್ಲೆಯ ಅದಿರು ಉದ್ಯಮಿ ಆರ್‌.ಎನ್‌. ನಾಯಕ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ಆರೋಪಿಗಳು "ಅಪರಾಧಿಗಳು'' ಎಂದು ಬೆಳಗಾವಿಯ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆಯಡಿ ಸ್ಥಾಪನೆಯಾಗಿರುವ (ಸಿಒಸಿಎ- ಕೋಕಾ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನ್ಯಾಯಾಧೀಶ ಸಿ.ಎಂ‌. ಜೋಶಿ ಅವರು ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದ್ದು, ಏಪ್ರಿಲ್ 4ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಹದಿನಾರು ಮಂದಿ ವಿರುದ್ಧ ಆರೋಪ ಹೊರಿಸಲಾಗಿತ್ತು. ಅವರಲ್ಲಿ ಮೂವರು ತಲೆಮರಿಸಿಕೊಂಡಿದ್ದರು. ಇನ್ನು ಮೂವರನ್ನು ನಿರ್ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಉತ್ತರ ಪ್ರದೇಶದ ಜಗದೀಶ್ ಪಟೇಲ್‌, ಬೆಂಗಳೂರಿನ ಅಭಿ ಭಂಡಗಾರ, ಉಡುಪಿಯ ಗಣೇಶ್‌ ಭಜಂತ್ರಿ, ಕೇರಳದ ಕೆ.ಎಂ. ಇಸ್ಮಾಯಿಲ್‌, ಹಾಸನದ ಮಹೇಶ್‌ ಅಚ್ಚಂಗಿ, ಕೇರಳದ ಎಂ.ಬಿ. ಸಂತೋಷ, ಉಡುಪಿಯ ಬನ್ನಂಜೆ ರಾಜ, ಬೆಂಗಳೂರಿನ ಜಗದೀಶ್ ಚಂದ್ರರಾಜ್, ಉತ್ತರ ಪ್ರದೇಶದ ಅಂಕಿತ್ ಕುಮಾರ್‌ ಕಶ್ಯಪ್ ದೋಷಿಗಳೆಂದು ಕೋರ್ಟ್ ತೀರ್ಪು ನೀಡಿದೆ.

Businessman RN Nayak Murder Case; 9 People Guilty Along With Bannanje Raja

ಇದೇ ವೇಳೆ ನ್ಯಾಯಾಲಯ ಮೂವರು ಆರೋಪಿಗಳನ್ನು ನಿರ್ದೋಷಿಗಳು ಎಂದು ಘೋಷಿಸಿದ್ದು, ಕೇರಳದ ರಬ್ದಿನ್ ಫಿಚೈ, ಬೆಂಗಳೂರಿನ ಮಹಮದ್‌ ಶಾಬಂದರಿ ಹಾಗೂ ಉತ್ತರ ಕನ್ನಡದ ಆನಂದ್ ರಮೇಶ್‌ ನಾಯಕ್‌ ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ.

2013ರ ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್. ನಾಯಕ್​ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬುಧವಾರ ತೀರ್ಪು ಹೊರಬಿದ್ದಿದೆ.

ಹತ್ಯೆ ಮಾಡಿದ್ದ ಶಾರ್ಪ್ ಶೂಟರ್
3 ಕೋಟಿ ರೂ. ಹಫ್ತಾ ನೀಡದಿದ್ದರೆ ಉದ್ಯಮಿ ನಾಯಕ್‌ ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಲಾಗಿತ್ತು. ಈ ಸಂಬಂಧ ನಾಯಕ್‌ ಅಂಕೋಲಾ ಠಾಣೆಯಲ್ಲಿ ದೂರು ನೀಡಿದ್ದರು. 2013ರ ಡಿಸೆಂಬರ್ 21ರಂದು ನಾಯಕ್‌ ಅವರನ್ನು ಉತ್ತರಪ್ರದೇಶದ ಶಾರ್ಪ್ ಶೂಟರ್ ವಿವೇಕ್‌ ಉಪಾಧ್ಯಾಯ ಗುಂಡಿಕ್ಕಿ ಹತ್ಯೆ ಮಾಡಿದ್ದ. ತಕ್ಷಣವೇ ಆರ್‌.ಎನ್‌. ನಾಯಕ್‌ ಅವರ ಗನ್‌ಮ್ಯಾನ್‌ ವಿವೇಕ್‌ನನ್ನು ಬೆನ್ನತ್ತಿ ಗುಂಡಿಟ್ಟು ಕೊಂದಿದ್ದರು. ಘಟನೆ ನಡೆದ ಮರುದಿನ ಕೆಲ ಮಾಧ್ಯಮಗಳಿಗೆ ಫೋನ್‌ ಮಾಡಿದ್ದ ಬನ್ನಂಜೆ ರಾಜ ತಾನೇ ಹತ್ಯೆ ಮಾಡಿದ್ದಾಗಿ ಹೇಳಿಕೊಂಡಿದ್ದ.

Businessman RN Nayak Murder Case; 9 People Guilty Along With Bannanje Raja

ಕೋಕಾದಡಿಯ ಮೊದಲ ಪ್ರಕರಣ
2000ನೇ ಇಸವಿಯಲ್ಲಿ ರೂಪುಗೊಂಡ ಕೋಕಾ ಕಾಯಿದೆ ರೂಪುಗೊಂಡಿತ್ತು. ಕಾಯಿದೆ ರೂಪುಗೊಂಡ ಬಳಿಕ ಬನ್ನಂಜೆ ರಾಜ ವಿರುದ್ಧವೇ ಮೊದಲ ಪ್ರಕರಣ ದಾಖಲಾಗಿತ್ತು. ಮೊರಕ್ಕೊದಲ್ಲಿ 2015ರ ಫೆಬ್ರವರಿ 12ರಂದು ಬಂಧಿತನಾಗಿದ್ದ ಬನ್ನಂಜೆ ರಾಜನನ್ನು ಭಾರತಕ್ಕೆ ಕರೆತರಲಾಗಿತ್ತು. 2015ರ ಆಗಸ್ಟ್ 14ರಂದು ಬನ್ನಂಜೆ ರಾಜಾನನ್ನು ಕರೆತಂದು ಬೆಳಗಾವಿ ಕೋಕಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಸಾಕ್ಷ್ಯ ನುಡಿದಿದ್ದ ಅಣ್ಣಾಮಲೈ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ 2021ರ ಡಿಸೆಂಬರ್‌ 21ರಂದು ಸಾಕ್ಷ್ಯ ನುಡಿದಿದ್ದರು. ಪೊಲೀಸ್‌ ಇಲಾಖೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಅವರು ಅದಕ್ಕೂ ಮುನ್ನ ನಾಯಕ್‌ ಕೊಲೆ ಪ್ರಕರಣದ ತನಿಖಾಧಿಕಾರಿ ಆಗಿದ್ದರು.

ಅವರೊಂದಿಗೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರತಾಪ್ ರೆಡ್ಡಿ, ಅಲೋಕ್ ಕುಮಾರ್, ಮಾಜಿ ಪೊಲೀಸ್ ‌ಅಧಿಕಾರಿಗಳಾದ ಭಾಸ್ಕರ್ ರಾವ್ ಸೇರಿದಂತೆ ಒಟ್ಟು 210 ಮಂದಿ ಸಾಕ್ಷ್ಯ ನುಡಿದಿದ್ದಾರೆ. 1,027 ದಾಖಲೆ ಪತ್ರಗಳು ಹಾಗೂ 138 ಪುರಾವೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ ಹಾಗೂ ವಿಶೇಷ ಅಭಿಯೋಜಕ ಶಿವಪ್ರಸಾದ್ ಆಳ್ವ ವಾದಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+