ಎನ್ಒಸಿ ವಿಚಾರ; ಕಾರವಾರ ಡಿಎಚ್ಒ ಕಚೇರಿ ಎದುರು ರಾತ್ರಿ ಧರಣಿ
ಕಾರವಾರ, ಅಕ್ಟೋಬರ್ 17; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ (ಸಿಎಚ್ಒ) ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ಪರೀಕ್ಷೆಗೆ ಹಾಜರಾಗಲು ನಿರಪೇಕ್ಷಣಾ ಪತ್ರ (ಎನ್ಒಸಿ) ನೀಡಲು ಜಿಲ್ಲಾಡಳಿತ ಸತಾಯಿಸುತ್ತಿದೆ. ಎನ್ಒಸಿಗಾಗಿ ಬೆಳಿಗ್ಗೆಯಿಂದ ಕಾದು ಸುಸ್ತಾದ 20ಕ್ಕೂ ಹೆಚ್ಚು ಮಂದಿ ಸಿಎಚ್ಒಗಳು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಶನಿವಾರ ರಾತ್ರಿ ಧರಣಿ ನಡೆಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಒಳಗುತ್ತಿಗೆಯಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಯಿಂದಲೂ ಅನೇಕರು ಸಿಎಚ್ಒ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಮೂರು ವರ್ಷಗಳ ಒಪ್ಪಂದದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ರಾಜ್ಯದಾದ್ಯಂತ 3,006 ಸಿಎಚ್ಒ ಹುದ್ದೆಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಆನ್ಲೈನ್ ಪರೀಕ್ಷೆ ತೆಗೆದುಕೊಳ್ಳಬೇಕಿದೆ.
ಕಾರವಾರ: ಬಾಗಿಲು ಮುಚ್ಚಿದ ಗೋವಾ ಗಡಿಯ ಮದ್ಯದಂಗಡಿಗಳು!
ಈಗಾಗಲೇ ಕಾರ್ಯನಿರತ ಸಿಎಚ್ಒಗಳು ಈ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕ ಎನ್ಒಸಿ ಪಡೆಯಬೇಕಿರುತ್ತದೆ. ಒಂದುವೇಳೆ ಎನ್ಒಸಿ ಪಡೆದು ಬೇರೆ ಜಿಲ್ಲೆಗಳಲ್ಲಿ ನೇಮಕಾತಿಯಾದರೆ ಕಾರ್ಯನಿರತ ಜಿಲ್ಲೆಯಿಂದ ಬಿಡುಗಡೆಗೊಳ್ಳುವ ಪೂರ್ವ ಮೊದಲೇ ಮಾಡಿಕೊಂಡಿದ್ದ ಕರಾರು ಪತ್ರದಂತೆ ಮೊತ್ತವನ್ನು ಜಿಲ್ಲಾ ಆರೋಗ್ಯ ಸಂಘಕ್ಕೆ ಪಾವತಿಸಬೇಕಿರುತ್ತದೆ.
ಕಾರವಾರ: ನಿರ್ವಹಣೆಯಿಲ್ಲದೆ ಸೊರಗಿದ ರಾಕ್ ಗಾರ್ಡನ್!
ಪರೀಕ್ಷೆಯಲ್ಲಿ ಆಯ್ಕೆಯಾಗದಿದ್ದರೆ ಪುನಃ ಮೊದಲಿನ ಜಿಲ್ಲೆಯಲ್ಲೇ ಸಿಎಚ್ಒಗಳಾಗಿ ಮುಂದುವರಿಯಬೇಕಿದೆ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದಲೇ ಹೊರಡಿಸಿರುವ ಅಧಿಕೃತ ಜ್ಞಾಪನ ಪತ್ರವೂ ಇದೆ. ಆದರೆ ಈ ಪರೀಕ್ಷೆ ತೆಗೆದುಕೊಳ್ಳಲು ಉತ್ತರ ಕನ್ನಡದ ಜಿಲ್ಲಾಡಳಿತದ ಅಧಿಕಾರಿಗಳು ಜಿಲ್ಲೆಯಲ್ಲಿನ ಕಾರ್ಯನಿರತ ಸಿಎಚ್ಒಗಳಿಗೆ ಅವಕಾಶ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಕಾರವಾರ- ಅಂಕೋಲಾ ಕ್ಷೇತ್ರ: ಸ್ವತಂತ್ರವಾಗಿ ಕಣಕ್ಕಿಳಿಯಲು ಸಿದ್ಧತೆ; ಆನಂದ್ ಅಸ್ನೋಟಿಕರ್
Recommended Video
ಯಾಕೆ ಅವಕಾಶ ನೀಡುತ್ತಿಲ್ಲ?; ಸಿಎಚ್ಒಗಳೇ ಹೇಳುವ ಪ್ರಕಾರ, ಬೇರೆ ಜಿಲ್ಲೆಗಳಿಂದ ಉತ್ತರ ಕನ್ನಡಕ್ಕೆ ಬಂದು ಕೆಲಸ ಮಾಡುವವರು ಅತಿ ಕಡಿಮೆ. ಅದರಲ್ಲೂ ಈಗಾಗಲೇ ನೇಮಕಾತಿಯಾದವರು ಎನ್ಒಸಿ ಪಡೆದು ಬೇರೆ ಜಿಲ್ಲೆಗಳಿಗೆ ನೇಮಕಾತಿಯಾದರೆ ಉತ್ತರ ಕನ್ನಡದ ಕಥೆಯೇನು? ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಿದ್ದಾರಂತೆ. ಹೀಗಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಇರುವ ಸಿಎಚ್ಒಗಳಿಗೆ ಎನ್ಒಸಿ ನೀಡದಂತೆ ಸೂಚಿಸಿದ್ದಾರಂತೆ. ಹೀಗಾಗಿ ಆರೋಗ್ಯಾಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಎನ್ಒಸಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದೇವೆ. ಆದರೆ ಎನ್ಒಸಿ ನೀಡುತ್ತಿಲ್ಲ. ಕೇಳಿದರೆ ಬೇರೆ ಬೇರೆ ಕಾರಣಗಳನ್ನು ಹೇಳುತ್ತಿದ್ದಾರೆ. ನಮಗೆ ನಮ್ಮ ಜಿಲ್ಲೆಗಳಲ್ಲಿ ಕೆಲಸ ಮಾಡಲು ಸಿಕ್ಕಿರುವ ಅವಕಾಶವಿದು. ನೇಮಕಾತಿಯಾಗುತ್ತದೆಯೋ, ಇಲ್ಲವೋ ಬೇರೆ ವಿಚಾರ. ಆದರೆ ಪರೀಕ್ಷೆ ಬರೆಯಲು ಎನ್ಒಸಿ ನೀಡಲು ಹೀಗೆ ಸತಾಯಿಸುತ್ತಿರುವುದು ಸರಿಯಲ್ಲ. ಬೆಳಿಗ್ಗೆಯಿಂದ ರಾತ್ರಿಯವರೆಗೆ ಕಾದರೂ ಆರೋಗ್ಯಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ.
ಒಂದು ವೇಳೆ ನಾವು ನೇಮಕಾತಿಯಾದರೆ ಕರಾರು ಪತ್ರದಲ್ಲಿ ನಮೂದಾಗಿರುವ ಮೊತ್ತವನ್ನು ನೀಡಲು ಬದ್ಧರಿದ್ದೇವೆಂದು ಹೇಳಿದರೂ ಕೇಳುತ್ತಿಲ್ಲ. ಬೆಳಗ್ಗಿನಿಂದ ಕಾಯಿಸಿ, ಸಂಜೆಯ ಬಳಿಕ ಮದುವೆಯಾದವರಿಗೆ ಮಾತ್ರ ಎನ್ಒಸಿ ಕೊಡುತ್ತೇವೆ. ತಂದೆ- ತಾಯಿ ಇಲ್ಲದವರಿಗೆ ಅವರ ಮರಣದ ಕಾರಣವಿರುವ ಮರಣ ದಾಖಲೆ ನೀಡಿದರೆ ಎನ್ಒಸಿ ಕೊಡುತ್ತೇವೆಂದೆಲ್ಲ ಪೀಡಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
ಜೀಪು ಬಿಟ್ಟು ತೆರಳಿದ ಡಿಎಚ್ಒ; ಆರು ಜಿಲ್ಲೆಗಳಲ್ಲಿ 1,307 ಸಿಎಚ್ಒ ಹುದ್ದೆಗಳಿಗಾಗಿ ನಡೆಯಲಿರುವ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಸೋಮವಾರವೇ ಕಡೆಯ ದಿನವಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಇಂದು (ಶನಿವಾರ) ಎನ್ಒಸಿ ಪಡೆಯಲೇಬೇಕೆಂದು ಸಿಎಚ್ಒಗಳು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆಯಿಂದ ರಾತ್ರಿಯವರಗೂ ಕಾಯುತ್ತಿದ್ದರು.
ಆದರೆ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸರ್ಕಾರಿ ಜೀಪಿನಲ್ಲಿ ಮನೆಗೆ ಹೊರಡಲು ಮುಂದಾದಾಗ ಮತ್ತೆ ಮತ್ತೆ ಸಿಎಚ್ಒಗಳು ಎನ್ಒಸಿ ಕೊಡಲು ಮನವಿ ಮಾಡಿ ಜೀಪಿಗೆ ಅಡ್ಡ ಬಂದಿದ್ದಾರೆ. ಇದರಿಂದಾಗಿ ಆರೋಗ್ಯಾಧಿಕಾರಿಗಳು ಜೀಪು ಬಿಟ್ಟು ಬೇರೆ ವಾಹನದಲ್ಲಿ ಮನೆಗೆ ತೆರಳಿದ್ದಾರೆ.