ಪ್ರಚೋದನಕಾರಿ ಟ್ವೀಟ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್
ಕಾರವಾರ, ಡಿಸೆಂಬರ್ 22: ಹೊನ್ನಾವರದ ಮಾಗೋಡಿನ ಶಾಲಾ ಬಾಲಕಿ ಕಾವ್ಯಾ ಶೇಖರ್ ನಾಯ್ಕಳ ಮೇಲೆ ಚಾಕುವಿನಿಂದ ನಡೆದಿದ್ದ ಎನ್ನಲಾದ ಹಲ್ಲೆ ಪ್ರಕರಣದಲ್ಲಿ ಪ್ರಚೋದನಕಾರಿ ಟ್ವೀಟ್ ಮಾಡಿದ್ದ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಜಿಹಾದಿಗಳು 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೊನ್ನಾವರ ಪೊಲೀಸರು ಸ್ವಯಂಪ್ರೇರಿತವಾಗಿ ಶೋಭಾ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಡಿಸೆಂಬರ್ 14ರಂದು ಮಾಗೋಡಿನ ಶಾಲಾ ಬಾಲಕಿ ಕಾವ್ಯಾ ನೀಡಿದ ದೂರಿನಲ್ಲಿ ಯಾವುದೇ ಧರ್ಮದ ಮೇಲೆ ಆರೋಪ ಮಾಡಿಲ್ಲ. ಆದರೆ, ಶೋಭಾ ಕರಂದ್ಲಾಜೆ ಅವರು ಹೊನ್ನಾವರ ಹಾಗೂ ಇತರೆ ಕಡೆಗಳಲ್ಲಿ ಸೌಹಾರ್ದತೆ ಕದಡುವ ಉದ್ದೇಶದಿಂಧ ಅಂತಹ ಟ್ವೀಟ್ ಮಾಡಿದ್ದಾರೆ. ಇದರಿಂದ ಹೊನ್ನಾವರದಲ್ಲಿ ಕೋಮು ಸೌಹಾರ್ದತೆ ಹದಗೆಟ್ಟಿದೆ ಎಂದು ಪೊಲೀಸರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಧರ್ಮ, ಧರ್ಮಗಳ ನಡುವೆ ದ್ವೇಷವನ್ನುಂಟು ಮಾಡುವ ಉದ್ದೇಶದಿಂದ ಹಾಗೂ ದೊಂಬಿ ಪ್ರಕರಣದಡಿಯಲ್ಲಿ ಸಂಸದೆ ಶೋಭಾ ಕರಂದಾಜ್ಲೆ ವಿರುದ್ಧ ಐಪಿಸಿ ಸೆಕ್ಷನ್ 153, 153(ಎ) ಮತ್ತು 505(2) ಅಡಿಯಲ್ಲಿ ಹೊನ್ನಾವರ ಪಿಎಸ್ ಐ ರಾಮಮೂರ್ತಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
"ಹೊನ್ನಾವರದ ಹತ್ತಿರ ಜಿಹಾದಿಗಳು 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ್ದಾರೆ. ಎಲ್ಲಿದ್ದಾರೆ ಸಿಎಂ ಸಿದ್ದರಾಮಯ್ಯ" ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದರು.