ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿದವರಿಗೆ ಮಾತ್ರ ಉತ್ತರ ಕನ್ನಡ ಜಿಲ್ಲೆಗೆ ಪ್ರವೇಶ
ಕಾರವಾರ, ಮಾರ್ಚ್ 17: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಉತ್ತರ ಕನ್ನಡ ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ ನೀಡಲಾಗಿದ್ದು, ಗುರುವಾರದಿಂದ (ಮಾ.18) ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾ.15ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಮೂಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ. ಕೋವಿಡ್ ಎರಡನೇ ಅಲೆಗೆ ಏನೇನು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ಸಂವಾದದಲ್ಲಿ ಸೂಚಿಸಿದ್ದಾರೆ ಎಂದರು.
ಸರ್ಕಾರ ಇತ್ತೀಚಿಗೆ ಹೊರಡಿಸಿದ್ದ ಸುತ್ತೋಲೆಯ ಪ್ರಕಾರ ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರಿಗೆ ಆರ್ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ತರಬೇಕಿದೆ. ಅದನ್ನು ಅನುಷ್ಠಾನಕ್ಕೆ ತರಲು ನಿರ್ಣಯಿಸಲಾಗಿದೆ ಎಂದು ಸಿಇಒ ಪ್ರಿಯಾಂಗಾ ಎಂ. ಹೇಳಿದರು.
ಅದರಂತೆ ಗೋವಾಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಹಾಗೂ ಜೊಯಿಡಾದ ಅನಮೋಡ ಚೆಕ್ಪೋಸ್ಟ್, ಪ್ರಸಿದ್ಧ ಧಾರ್ಮಿಕ, ಪ್ರವಾಸಿ ಕ್ಷೇತ್ರವಾದ ಮುರ್ಡೇಶ್ವರ ಹಾಗೂ ಗೋಕರ್ಣಗಳಲ್ಲಿ ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರನ್ನು ಪರಿಶೀಲನೆ ನಡೆಸಲಾಗುತ್ತದೆ. ಪ್ರಯಾಣಿಕರು ಅಥವಾ ಪ್ರವಾಸಿಗರಿಗೆ ಯಾವುದೇ ಜಿಲ್ಲೆಗೆ ಬರಲು ಯಾವುದೇ ಅಡ್ಡಿ ಉಂಟು ಮಾಡುವುದಿಲ್ಲ. ಆದರೆ ಆರ್ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಅವರು ಹೊಂದಿರಬೇಕು ಎಂದು ತಿಳಿಸಿದ್ದಾರೆ.
ಗೋಕರ್ಣ, ಮುರ್ಡೇಶ್ವರಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಉತ್ತರ ಕನ್ನಡ ಜಿಲ್ಲೆಗೆ ಬರುವ ಆ ಎರಡು ರಾಜ್ಯಗಳ ಜನತೆ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಕೊಳ್ಳದಿದ್ದಲ್ಲಿ, ಅವರಿಗೆ ಜಿಲ್ಲೆಯಲ್ಲೇ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಹೀಗಾಗಿ ಜಿಲ್ಲೆಗೆ ಬರುವ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳ ಜನತೆ 72 ಗಂಟೆಗಳ ಒಳಗಿನ ಆರ್ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯವಾಗಿ ತರಬೇಕು. ಆ ಮೂಲಕ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಸಹಕಾರ ನೀಡಬೇಕು ಎಂದು ಸಿಇಒ ಕೋರಿದ್ದಾರೆ.
Recommended Video
ಉತ್ತರ ಕನ್ನಡ ಜಿಲ್ಲೆಯ ಗಡಿಗಳ ಚೆಕ್ಪೋಸ್ಟ್ ಗಳಲ್ಲಿ ಓರ್ವ ಪೊಲೀಸ್ ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಅವರು ಜಿಲ್ಲೆಗೆ ಹೊರಗಿನಿಂದ ಬರುವವರ ಮಾಹಿತಿಗಳನ್ನು ಕಲೆಹಾಕಲಿದ್ದಾರೆ. ಆ ಎರಡು ರಾಜ್ಯದ ಜನತೆಯನ್ನು ಹೆಚ್ಚಿನ ತಪಾಸಣೆ ನಡೆಸಿ ಜಿಲ್ಲೆಯೊಳಗೆ ಬಿಡಲಿದ್ದಾರೆ ಎಂದು ಅವರು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ತಿಳಿಸಿದ್ದಾರೆ.