ಹೊಸ ಕೋವಿಡ್ ಪ್ರಕರಣ ಏರಿಕೆ: ಉತ್ತರ ಕನ್ನಡದ ಮೇಲೆ ಕೇಂದ್ರದ ಕಣ್ಗಾವಲು
ಕಾರವಾರ, ಆಗಸ್ಟ್ 12; ಕಳೆದ ಎರಡು ವಾರಗಳಿಂದ ದೈನಂದಿನ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಸೇರಿದಂತೆ ಕರ್ನಾಟಕದ 5 ಜಿಲ್ಲೆಗಳ ಮೇಲೆ ಕೇಂದ್ರ ಸರ್ಕಾರ ಕಣ್ಗಾವಲಿಟ್ಟಿದೆ.
ಉತ್ತರ ಕನ್ನಡದ ಜೊತೆಗೆ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಮತ್ತು ಉಡುಪಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು 'ಎಚ್ಚರಿಕೆಯಿಂದಿರಬೇಕಾದ ಜಿಲ್ಲೆಗಳು' ಎಂದು ಗುರುತಿಸಿದೆ. ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಸತತವಾಗಿ ಕುಸಿಯುತ್ತಿದ್ದರೂ ಕೆಲವು ರಾಜ್ಯಗಳ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.
ಹೀಗಾಗಿ ಇಂಥ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದು, ಆ ಜಿಲ್ಲೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಇತ್ತೀಚೆಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿದ್ದು, ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯದ ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ವಿಧಿಸಿದೆ.
ಆದರೆ ಪ್ರಸ್ತುತ ಉತ್ತರಕನ್ನಡದಲ್ಲಿ ಕರ್ಫ್ಯೂ ನಿಯಮಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರವೂ ಸೂಚಿಸಿಲ್ಲ. ಜಿಲ್ಲಾಡಳಿತ ಕೂಡ ಮುಂದಾಗಿಲ್ಲ. ಆದರೆ ಕಾರವಾರ ತಾಲೂಕಿನ ಕರ್ನಾಟಕ- ಗೋವಾ ಗಡಿಯ ಮಾಜಾಳಿ ಚೆಕ್ಪೋಸ್ಟ್ನಲ್ಲಿ ಜಿಲ್ಲಾಡಳಿತ ಹದ್ದಿನ ಕಣ್ಣಿಟ್ಟು, ತಪಾಸಣೆಗೊಳಪಡಿಸುವ ಕಾರ್ಯ ಮಾಡಲಾಗುತ್ತಿದೆ.
ಸದ್ಯದವರೆಗೆ ಹೊರ ರಾಜ್ಯದಿಂದ ಆಗಮಿಸುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಸೀಲ್ಗಳನ್ನು ಹಾಕಲಾಗುತ್ತಿದ್ದು, 72 ಗಂಟೆಗಳ ಅವಧಿಯಲ್ಲಿ ಅವರ ಗಂಟಲುದ್ರವಗಳನ್ನು ಪಡೆದು ಕೋವಿಡ್ ಪರೀಕ್ಷೆ ಸಹ ಮಾಡಲಾಗುತ್ತಿದೆ. ಅಲ್ಲದೇ ಅಗತ್ಯ ಇರುವೆಡೆ ಕನಿಷ್ಠ ಒಂದು ಐಸೋಲೇಷನ್ ಸೆಂಟರ್ ತೆರೆಯಲು ಸೂಚನೆ ನೀಡಲಾಗಿದೆ. ಕೇವಲ ಗಡಿಗಳಲ್ಲಿ ಮಾತ್ರವಲ್ಲದೇ ಬಸ್ ಹಾಗೂ ರೈಲು ನಿಲ್ದಾಣಗಳಲ್ಲೂ ಸಹ ಪ್ರಯಾಣಿಕರ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನ ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಲಾಗುತ್ತಿದೆ. ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಎಲ್ಲ ರೀತಿಯ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಮದುವೆ ಕಾರ್ಯಗಳಿಗೆ ನಿಗದಿತ 50 ಮಂದಿಗೆ ಮಾತ್ರ ಅವಕಾಶವಿದ್ದು, ಕೊರೋನಾ ಮುಂಜಾಗ್ರತೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಕೋವಿಡ್ ಸೋಂಕಿತರ ಸಂಖ್ಯೆ ಸ್ಥಿರವಾಗಿದೆ. ಬುಧವಾರ (ಆಗಸ್ಟ್11) ಜಿಲ್ಲೆಯಲ್ಲಿ 1.08 ಪಾಸಿಟಿವಿಟಿ ದರ ವರದಿಯಾಗಿದೆ. ಆದರೂ ಕೇಂದ್ರ ಸರಕಾರ ಹೆಚ್ಚಿನ ಕಾಳಜಿ ವಹಿಸಲು ಸೂಚಿಸಿದ್ದು, ಜಿಲ್ಲಾಡಳಿತ ಕೂಡ ಇನ್ನಷ್ಟು ಕ್ರಮಕ್ಕೆ ಮುಂದಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, "ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಹೊರ ರಾಜ್ಯವಷ್ಟೇ ಅಲ್ಲ, ಹೊರ ಜಿಲ್ಲೆಗಳಿಂದ ಬರುವವರ ಮಾಹಿತಿಯನ್ನೂ ಸಂಗ್ರಹಿಸಿ ಅವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ" ಎಂದು ತಿಳಿಸಿದ್ದಾರೆ.
ಗ್ರಾಮ ಮಟ್ಟದಲ್ಲಿ ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ. ಗೋವಾದಿಂದ ರಾಜ್ಯಕ್ಕೆ ಬರುವವರಿಗೂ ನಿರ್ಬಂಧ ಹೇರಲಾಗಿದೆ. ಜಿಲ್ಲೆಗೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬರುವವರನ್ನೂ ಕ್ವಾರಂಟೈನ್ನಲ್ಲಿಟ್ಟು ಆರ್ಟಿಪಿಸಿಆರ್ ತಪಾಸಣೆಗೊಳಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಜನರು ಕೂಡ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ಎಂದು ಕೂಡ ಅವರು ಮನವಿ ಮಾಡಿಕೊಂಡಿದ್ದಾರೆ.
ಬುಧವಾರದ ವರದಿಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ 79 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 541 ಆಗಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 54051. ಇದುವರೆಗೂ 727 ಜನರು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ.












Click it and Unblock the Notifications