ಉತ್ತರ ಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ: ಮುಲ್ಲೈ ಈಗ ನೂತನ ಜಿಲ್ಲಾಧಿಕಾರಿ
ಕಾರವಾರ, ಫೆಬ್ರವರಿ 13: ಇಲ್ಲಿಯವರೆಗೂ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಕೆ.ಹರೀಶಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಎಂ.ಪಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಕಳೆದ ಎರಡು ವರ್ಷಗಳಿಂದ ಉತ್ತರ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಉತ್ತಮವಾಗಿ ಆಡಳಿತ ನಡೆಸಿರುವ ಡಾ.ಕೆ.ಹರೀಶಕುಮಾರ್ ಜನಸ್ನೇಹಿಯಾಗಿದ್ದರು. ಅಲ್ಲದೇ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೂ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದರು.
ಯುಪಿಎಸ್ಸಿ ನಡೆಸಿದ ಎಂಇಎಸ್ ಪರೀಕ್ಷೆಯಲ್ಲಿ ವಿಜಯಶ್ರೀ ದೇಶಕ್ಕೆ ಪ್ರಥಮ ಸ್ಥಾನ!
2013ನೇ ಐಎಎಸ್ ಬ್ಯಾಚ್ ನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್)ಯಲ್ಲಿ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಲ್ಲೈ ಇನ್ನು ಮುಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಐಎಎಸ್ ಅಧಿಕಾರಿ ಡಾ.ಕೆ.ಹರೀಶಕುಮಾರ್ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಶನಿವಾರ ಕರ್ನಾಟಕದ 42 ಐಎಎಸ್ ಅಧಿಕಾರಿಗಳನ್ನು ಏಕಕಾಲದಲ್ಲಿ ಆಡಳಿತಾತ್ಮಕ ಕಾರಣದಿಂದ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.