ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರೆಂದು ಘೋಷಿಸಿ
ಕಾರವಾರ, ಜೂನ್ 24: ಸೀಬರ್ಡ್ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಿ, ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಶಿಪ್ಯಾರ್ಡ್ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ಗೆ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ವಿನಂತಿಸಿದ್ದಾರೆ.
ತಮ್ಮ ಕ್ಷೇತ್ರದ ಕಾರವಾರ ಹಾಗೂ ಅಂಕೋಲಾ ಈ ಎರಡೂ ತಾಲೂಕಿನ 4604 ಕುಟುಂಬಗಳು ನೌಕಾನೆಲೆಯಲ್ಲಿ ನಿರಾಶ್ರಿತವಾಗಿವೆ. ಈ ಕುಟುಂಬಗಳು ನಿರಾಶ್ರಿತವಾಗಿ 3 ದಶಕಗಳಾದರೂ ಸಮಾಜದಲ್ಲಿ ಗೌರವಯುತ ಬದುಕು ಕಂಡುಕೊಳ್ಳುವಲ್ಲಿ ಇದುವರೆಗೂ ಸಾಧ್ಯವಾಗಿಲ್ಲ. ಸದ್ಯ ಕೇವಲ 968 ಕುಟುಂಬಗಳಿಗೆ ಮಾತ್ರ ಉದ್ಯೋಗ ನೀಡಲಾಗಿದೆ.
ಕಾರವಾರ: ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ನೌಕಾನೆಲೆ ನಿರಾಶ್ರಿತರು ದೇಶಕ್ಕಾಗಿ, ದೇಶದ ರಕ್ಷಣೆಗಾಗಿ ತಮ್ಮ ಮನೆ, ಭೂಮಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಈ ಕಾರಣದಿಂದ ನಿರಾಶ್ರಿತರು ಉದ್ಯೋಗ, ಗೌರವಯುತ ಬದುಕಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಯಾಗುವಂತಾಗಬೇಕು. ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು. ಎಲ್ಲ 4 ಸಾವಿರಕ್ಕೂ ಹೆಚ್ಚು ನಿರಾಶ್ರಿತ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಕೊಡಬೇಕು. ಅವರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ದೊರಕಿಸಿಕೊಡುವ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರ ಬದುಕು ಹಸನಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರು ಮನವಿ ಮಾಡಿದರು.
ನನ್ನ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ನೌಕಾನೆಲೆ, ಕೈಗಾ ಅಣು ವಿದ್ಯುತ್ ಸ್ಥಾವರ, ಕೊಂಕಣ ರೇಲ್ವೆ, ಚತುಷ್ಪಥ ಹೆದ್ದಾರಿ, ಕದ್ರಾ, ಕೊಡಸಳ್ಳಿ ಜಲ ವಿದ್ಯುತ್ ಯೋಜನೆಗಳು ಹೀಗೆ ವಿವಿಧ ಕಾರಣಗಳಿಂದ ನಿರಾಶ್ರಿತರಾದ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ನಿರಾಶ್ರಿತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೇಶದ ರಕ್ಷಣೆಗಾಗಿ ತ್ಯಾಗ ಮಾಡಿದವರು ಹೆಮ್ಮೆಯಿಂದ ಬದುಕುವಂತಾಗಬೇಕು.
ಮೂರು ದಶಕಗಳಿಂದ ಪರಿಹಾರಕ್ಕಾಗಿ ಪರದಾಡುತ್ತಿದ್ದ ನಿರಾಶ್ರಿತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವರ ಕಳಕಳಿಯಿಂದ, ಅಂದಿನ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾಗಿದ್ದ, ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಪರಿಹಾರ ವಿತರಿಸಿದ್ದಾರೆ. ಅದಕ್ಕಾಗಿ ಕೇಂದ್ರ ಸರ್ಕಾರವನ್ನು ನಿರಾಶ್ರಿತರ ಪರವಾಗಿ ಅಭಿನಂದಿಸುವುದಾಗಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಶಿಪ್ಯಾರ್ಡ್ ನಿರ್ಮಾಣ
ಸೀಬರ್ಡ್ ನೌಕಾನೆಲೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನೌಕಾನೆಲೆಗೆ ಅಗತ್ಯ ಸಾಮಗ್ರಿಗಳ ತಯಾರಿಕೆಗೆ ಇಲ್ಲಿ ಯಾವುದೇ ಕೈಗಾರಿಕೆಗಳಿಲ್ಲ. ಸ್ಥಳೀಯ ಜನತೆಗೆ ಉದ್ಯೋಗ ಕೊಡುವ ಕೈಗಾರಿಕೆಗಳೂ ಇಲ್ಲಿಲ್ಲ. ಈ ಕಾರಣಕ್ಕಾಗಿ ಸರ್ಕಾರಿ ಸ್ವಾಮ್ಯದಲ್ಲಿ ರಕ್ಷಣಾ ಇಲಾಖೆ ನೌಕಾನೆಲೆಯಲ್ಲಿ ಶಿಪ್ಯಾರ್ಡ್ ಹಾಗೂ ಪೂರಕ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕರು ರಕ್ಷಣಾ ಸಚಿವರನ್ನು ವಿನಂತಿಸಿದ್ದಾರೆ.
ನೌಕಾನೆಲೆಗೆ ಅಗತ್ಯ ಇರುವ ವಸ್ತುಗಳನ್ನು ಸ್ಥಳೀಯವಾಗಿಯೇ ಉತ್ಪಾದಿಸಬಹುದು. ಕೈಗಾರಿಕೆಗಳು ಇಲ್ಲಿ ಬೆಳೆಯುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆತು ಈ ಪ್ರದೇಶದ ಆರ್ಥಿಕ ಚಟುವಟಿಕೆಗಳು ಹೆಚ್ಚಲಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.
ಶಾಸಕರು ಈಗಾಗಲೇ ಈ ಬಗ್ಗೆ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿದ್ದರು. ಮುಖ್ಯಮಂತ್ರಿಗಳು ಸಹ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ನೌಕಾನೆಲೆಯಲ್ಲಿ ಶಿಪ್ಯಾರ್ಡ್ ನಿರ್ಮಿಸುವಂತೆ ವಿನಂತಿಸಿದ್ದರು.
Recommended Video