ಸುಪ್ರೀಂ ತೀರ್ಪು; ಶಿವರಾಮ್ ಹೆಬ್ಬಾರ್ ಪತ್ನಿ ಹೇಳಿದ್ದೇನು?
ಉತ್ತರ ಕನ್ನಡ, ನವೆಂಬರ್ 13: ರಾಜ್ಯಾದ್ಯಂತ ಕುತೂಹಲ ಕೆರಳಿಸಿದ್ದ ಕರ್ನಾಟಕದ 17 ಶಾಸಕರ ಅನರ್ಹತೆಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದ್ದು, ಅನರ್ಹ ಶಾಸಕರಿಗೆ ಚುನಾವಣೆಗೆ ಸ್ಪರ್ಧಿಸಲು ಯಾವುದೇ ಅಡ್ಡಿಯಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ಕೊಡುವ ಮೂಲಕ ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೊಟ್ಟಿದೆ.
ಸುಪ್ರೀಂ ಕೋರ್ಟ್ ನ ಈ ತೀರ್ಪಿನ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿರುವ ಶಿವರಾಮ್ ಹೆಬ್ಬಾರ್ ಮನೆಯಲ್ಲಿ ಸಂತಸದ ವಾತಾವರಣ ಕಂಡುಬಂದಿತ್ತು. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಿವರಾಮ್ ಹೆಬ್ಬಾರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕೋರ್ಟ್ ತೀರ್ಪು ಬರುತ್ತಿದ್ದಂತೆ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಈ ನಡುವೆ, "ನಾನು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿರ್ಧಾರ ಮಾಡಿದ್ದೇನೆ. ಆದರೆ ಎಲ್ಲಿಂದ ನಿಲ್ಲಬೇಕು ಎನ್ನುವ ಕುರಿತು ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ" ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

"ಸುಪ್ರೀಂ ಕೋರ್ಟ್ ತೀರ್ಪು ನಮಗೆ ಖುಷಿ ನೀಡಿದೆ. ನಮಗೆ ನ್ಯಾಯ ಸಿಗುತ್ತದೆ ಎನ್ನುವ ನಂಬಿಕೆ ಇತ್ತು. ಆತಂಕದಲ್ಲಿದ್ದ ನಮಗೆ ಈ ತೀರ್ಪಿನಿಂದ ನೆಮ್ಮದಿ ಸಿಕ್ಕಂತಾಗಿದೆ" ಎಂದು ಶಿವರಾಮ್ ಹೆಬ್ಬಾರ್ ಪತ್ನಿ ವನಜಾಕ್ಷಿ ಹೆಬ್ಬಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಯಲ್ಲಾಪುರ ಪಟ್ಟಣದಲ್ಲಿ ಹೆಬ್ಬಾರ್ ಬೆಂಬಲಿಗರಿಂದ ಸಂಭ್ರಮಾಚರಣೆಯೂ ನಡೆಯಿತು.












Click it and Unblock the Notifications