ಹವಾಮಾನ ವರದಿ; ಅಕ್ಟೋಬರ್ 2ರ ತನಕ ಗಾಳಿ, ಮಳೆ
ಕಾರವಾರ, ಅಕ್ಟೋಬರ್ 01; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನೈಋತ್ಯ ಮುಂಗಾರು ಅವಧಿ ಸೆಪ್ಟೆಂಬರ್ 30ಕ್ಕೆ ಅಧಿಕೃತವಾಗಿ ಅಂತ್ಯಗೊಂಡರೂ ಸಹ ಮಳೆ ಮುಂದುವರೆದಿದೆ. ರಾಜ್ಯದಲ್ಲಿ ಅಕ್ಟೋಬರ್ 2ರ ತನಕ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲಾಡಳಿತ ಎಲ್ಲಾ ಮೀನುಗಾರಿಗೆ ಎಚ್ಚರಿಕೆಯೊಂದನ್ನು ನೀಡಿದೆ. ದಿನಾಂಕ 30/09/2023ರಿಂದ 2/10/2023ರ ತನ ಅರಬ್ಬಿ ಸಮುದ್ರ ತೀರ ಪ್ರಕ್ಷುಬ್ಧ ವಾಗಿರುವುದರಿಂದ ಹಾಗೂ ಸಮುದ್ರದ ಗಾಳಿಯ ವೇಗ 45 ರಿಂದ 55 Kmph ತನಕ ಇರಲಿದೆ ಎಂದುದ ಮುನ್ಸೂಚನೆ ನೀಡಿದೆ.

ಆದ್ಧರಿಂದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಮೀನುಗಾರಿಕೆಗೆ ಇಳಿಯದಂತೆ ಜಿಲ್ಲಾಡಳಿತ ಹಾಗೂ ಮೀನುಗಾರಿಕೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸಾಂಪ್ರದಾಯಿಕ, ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವಂತಹ ತಮ್ಮ ದೋಣಿ ಹಾಗೂ ಬಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ತಿಳಿಸಲಾಗಿದೆ.
ಪ್ರಕಟಣೆಯಲ್ಲಿ ಮಾಹಿತಿ; ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿರುವುದರಿಂದ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡುವ ಕುರಿತು. ಜಿಲ್ಲಾಧಿಕಾರಿಗಳ ಸಭೆಯ ನಿರ್ಣಯದಂತೆ 30/09/2023ರಂದು ಪ್ರಕಟಣೆ ಹೊರಡಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವುದರಿಂದ ಹವಮಾನ ಇಲಾಖೆ ಮಾಹಿತಿ ನೀಡಿ ಅಕ್ಟೋಬರ್ 2ರ ತನಕ ಆರೆಂಜ್ ಆಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸಭೆಯ ನಿರ್ಣಯದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತಿದಿನ ಮಳೆಯಾಗುತ್ತಿದೆ. ಶನಿವಾರ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ.
ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಪರಿಣಾಮ ಬಟ್ಟಪ್ಪಾಡಿಯಲ್ಲಿ ಕಡಲ ಕೊರೆತ ತೀವ್ರವಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಅಕ್ಟೋಬರ್ 2ರ ತನಕ ಮಳೆ ಮುಂದುವರೆಯಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹೇಳಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟ್, ಕಳಸ, ಶೃಂಗೇರಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಚಾರ್ಮಾಡಿ ಘಾಟ್ನಲ್ಲಿ ಮರ ರಸ್ತೆಗೆ ಉರುಳಿದ ಪರಿಣಾಮ ಹಲವು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಶನಿವಾರ ಮಳೆಯಾಗಿದೆ. ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ಪೊನ್ನಂಪೇಟೆಯಲ್ಲಿ ಇಡೀ ದಿನ ಮಳೆ ಸುರಿದಿದೆ. ಹಾರಂಗಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಮಳೆಯ ಮುನ್ಸೂಚನೆ; ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಶನಿವಾರದಿಂದ 4 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಅಕ್ಟೋಬರ್ 2ರ ತನಕ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳ ಪೈಕಿ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವ ರಾತ್ರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ನೈಋತ್ಯ ಮುಂಗಾರು ಸರ್ಕಾರಿ ದಾಖಲೆಗಳ ಪ್ರಕಾರ ಸೆಪ್ಟೆಂಬರ್ 30ಕ್ಕೆ ಅಂತ್ಯಗೊಂಡಿದೆ (ಜೂನ್ 1ರಿಂದ ಸೆಪ್ಟೆಂಬರ್ 30). ಈ ಬಾರಿಯ ಮುಂಗಾರು ಋತುವಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. 868.6 ಮಿ. ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ ಈ ಬಾರಿ 820 ಮಿ. ಮೀ. ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications