ರಾಜಕೀಯ ಮುಖಂಡರ ಫೇಸ್ ಬುಕ್, ಟ್ವಿಟ್ಟರ್ ಮೇಲೆ ಹದ್ದಿನ ಕಣ್ಣು
ಕಾರವಾರ, ನವೆಂಬರ್ 25: ಯಲ್ಲಾಪುರ ಉಪ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರ ಫೇಸ್ಬುಕ್, ಟ್ವಿಟ್ಟರ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳೂ ಚುನಾವಣಾ ಆಯೋಗದ ಕಣ್ಗಾವಲಿನಲ್ಲಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಹರೀಶ್ಕುಮಾರ್ ಕೆ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ ಆದಾಗಿನಿಂದಲೂ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಮಾಧ್ಯಮ ದೃಢೀಕರಣ ಮತ್ತು ಕಣ್ಗಾವಲು ಸಮಿತಿ (ಎಂಸಿಎಸಿ) ಕಾರ್ಯ ನಿರ್ವಹಿಸುತ್ತಿದ್ದು, ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ಕ್ಷೇತ್ರಗಳಲ್ಲಿ ಇವಿಎಂ ಬದಲು ಮತಪತ್ರ ಬಳಸಿ ಕಾಂಗ್ರೆಸ್ ಆಗ್ರಹ
ಜಿಲ್ಲಾ ಮಟ್ಟದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ (ಎಂಸಿಎಸಿ) ಕಾರ್ಯನಿರ್ವಹಿಸುತ್ತಿದೆ. ಪತ್ರಿಕೆಗಳಲ್ಲಿ ಬರುವ ರಾಜಕೀಯ ಸುದ್ದಿಗಳು, ಜಾಹೀರಾತುಗಳು ಹಾಗೂ ಕಾಸಿಗಾಗಿ ಸುದ್ದಿ ಸಂಬಂಧಿಸಿದಂತೆ ಪ್ರತಿದಿನವೂ ಪರಿಶೀಲಿಸಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಕಳಿಸಲಾಗುತ್ತಿದೆ ಮತ್ತು ವಿದ್ಯುನ್ಮಾನ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿ ಎಲ್ಲವನ್ನೂ ದಾಖಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ರಾಜಕೀಯ ಪಕ್ಷಗಳ ಜಾಹೀರಾತು ಅಥವಾ ಕಾಸಿಗಾಗಿ ಸುದ್ದಿ ಸಂಬಂಧಿಸಿದಂತೆ ಯಾವುದೇ ಮಾಧ್ಯಮಗಳಲ್ಲಿ ಪ್ರಚಾರದ ವಿಷಯಗಳು ಪ್ರಕಟವಾಗಿದ್ದರೂ ಅದನ್ನು ಚುನಾವಣಾ ಲೆಕ್ಕ ಸಮಿತಿಗೆ ದಿನವೂ ನಿಗದಿತ ನಮೂನೆಯಲ್ಲಿ ಸಮಿತಿಯಿಂದ ಕಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಕಣ್ತಪ್ಪಿಸಿ ಅಥವಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಲು ಸಾಧ್ಯವಿಲ್ಲ. ಒಂದೊಮ್ಮೆ ಉಲ್ಲಂಘಿಸಿದ ಪ್ರಕರಣಗಳು ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ನಾಮಪತ್ರ ಸಲ್ಲಿಕೆ ಮುಕ್ತಾಯ: ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ
ನೀತಿ ಸಂಹಿತೆ ಉಲ್ಲಂಘಿಸಿದ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಅಥವಾ ಚುನಾವಣಾಧಿಕಾರಿಗಳಿಗೆ ದೂರು ನೀಡಬಹುದು ಅಥವಾ ಆಯೋಗದ ದೂರು ನೀಡುವ ಆಪ್ ಸಿವಿಜಿಲ್ ನಲ್ಲೂ ದೂರು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.