ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಚಂದ್ರಶೇಖರ್ ಮಾದರಿ ಕೆಲಸ!
ಕಾರವಾರ, ಜನವರಿ 20: ಸಂಸದ ಅನಂತಕುಮಾರ್ ಹೆಗಡೆ ಹಾಗೂ ಶಾಸಕ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕ್ಷೇತ್ರದ ಸಿದ್ದಾಪುರ ತಾಲೂಕಿನ ಕಾವಂಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸರಿಮನೆ ಹೊಳೆಗೆ ಸೇತುವೆ ಅಂತೂ ನಿರ್ಮಾಣಗೊಂಡಿದೆ. ಆದರೆ, ಅದು ಇಬ್ಬರೂ ನಾಯಕರ ಶ್ರಮದಿಂದಲ್ಲ!
ಈ ಗ್ರಾಮದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತುಂಬಿ ಹರಿಯುತ್ತಿದ್ದ ಹೊಳೆಗೆ ಮರದ ದಿಮ್ಮಿಗಳಿಂದ ನಿರ್ಮಿಸಿದ ತಾತ್ಕಾಲಿಕ ಸೇತುವೆ ದಾಟಿ ಹೋಗುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮಳೆಗಾಲದ ಸಂದರ್ಭದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ರಾಜ್ಯಸಭಾ ಸದಸ್ಯ ಜಿ. ಸಿ. ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ಚಂದ್ರಶೇಖರ್, ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂ. ಮಂಜೂರು ಮಾಡಿ, ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು.

ಅದರಂತೆ ಜಿ. ಸಿ. ಚಂದ್ರಶೇಖರ್ ಅವರ ಮುತುವರ್ಜಿಯಿಂದಾಗಿ ಈಗ ಇಲ್ಲಿ ಸೇತುವೆ ನಿರ್ಮಾಣಗೊಂಡಿದೆ. ಈ ಬಗ್ಗೆ ಸ್ವತಃ ಚಂದ್ರಶೇಖರ್ ಅವರು ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದು, 'ಉತ್ತರ ಕನ್ನಡ ಜಿಲ್ಲೆಯ ಪುಟ್ಟ ಮಕ್ಕಳ ಪರಿಸ್ಥಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿ ಶಾಶ್ವತ ಕಾಲಿಸೇತುವೆ ನಿರ್ಮಾಣಕ್ಕಾಗಿ ಅಂದು ಪಣ ತೊಟ್ಟಿದ್ದ ಕಾರ್ಯ ಇಂದು ಪೂರ್ಣಗೊಂಡಿದೆ' ಎಂದು ತಿಳಿಸಿದ್ದಾರೆ.
10 ವರ್ಷಗಳ ಹಿಂದೆ ಇಲ್ಲಿ ಸೇತುವೆ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯತಿಯಿಂದ ಅನುದಾನ ಬಿಡುಗಡೆಯಾಗಿದ್ದು, ಕೇವಲ ಪಿಲ್ಲರ್ ನಿರ್ಮಿಸಿ ಬಿಡಲಾಗಿತ್ತು. ಬಳಿಕ ಈವರೆಗೆ ಐದಾರು ಬಾರಿ ಶಾಸಕ ಕಾಗೇರಿಗೆ ಜನರು ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿರಲಿಲ್ಲ.

ಹೀಗಾಗಿ ಗ್ರಾಮಸ್ಥರು ನಿವೇದಿತ್ ಆಳ್ವಾ ಅವರ ಗಮನಕ್ಕೆ ತಂದಿದ್ದರು. ಆಳ್ವಾ ಅವರು ಕಾಮಗಾರಿ ಪ್ರಗತಿಯಲ್ಲಿರುವಾಗ ಪದೇ ಪದೇ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಕೂಡ ಅವರು ಭೇಟಿ ನೀಡಿ, ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಚಂದ್ರಶೇಖರ್ ಅವರಿಗೆ ಮಾಹಿತಿ ನೀಡಿರಬಹುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಹೊರ ಜಿಲ್ಲೆಯ ಜನಪ್ರತಿನಿಧಿಗಳು ಗಮನಿಸಿ, ಪರಿಹಾರಕ್ಕೆ ಸಹಾಯಹಸ್ತ ಚಾಚಿದ್ದಾರೆ. ಆದರೆ, ಸ್ಥಳೀಯ ಜನಪ್ರತಿನಿಧಿಗಳೇ ಜಿಲ್ಲೆಯ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಚಂದ್ರಶೇಖರ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.












Click it and Unblock the Notifications