ಕಾರವಾರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ: ದಶಕದ ಕನಸು ನನಸು?
ಕಾರವಾರ, ಜನವರಿ 7: ನಗರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ. ಈ ಮೂಲಕ ಜಿಲ್ಲೆಯ ಜನತೆ ಬಹುಕಾಲದಿಂದ ಕಾಯುತ್ತಿದ್ದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ಕನಸು ನನಸಾಗುವ ನಿರೀಕ್ಷೆ ಮೂಡಿದೆ.
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕ್ರಿಮ್ಸ್) ಮೂಲಭೂತ ಸೌಲಭ್ಯ ಕಲ್ಪಿಸಿ, ಈ ಸಂಸ್ಥೆಯನ್ನು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು 120 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಇಲ್ಲಿನ ಶಾಸಕಿ ರೂಪಾಲಿ ಎಸ್.ನಾಯ್ಕ್ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರದು ವಿನಂತಿಸಿದ್ದರು.
ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಕೊರೊನಾ ಪಾಸಿಟಿವ್
ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಹಾಗೂ ಉತ್ತರ ಕನ್ನಡ ಜಿಲ್ಲೆ ಶೈಕ್ಷಣಿಕವಾಗಿ ಸಾಧನೆ ಮಾಡಿದ್ದರೂ, ಆರೋಗ್ಯ ಕ್ಷೇತ್ರದಲ್ಲಿ ತುಂಬ ಹಿಂದುಳಿದಿದೆ. ಹೃದಯಾಘಾತ, ಬ್ರೈನ್ ಹ್ಯಾಮರೇಜ್, ಕಿಡ್ನಿ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆಯಂತಹ ತುರ್ತು ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಇಲ್ಲದೇ ಜನರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದು ಅವರು ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.
ಮಧ್ಯದಲ್ಲಿಯೇ ಮೃತಪಟ್ಟ ಉದಾಹರಣೆಗಳಿವೆ
ಗಂಭೀರ ಕಾಯಿಲೆ, ಅಪಘಾತದಲ್ಲಿ ತೀವ್ರ ಗಾಯಗೊಂಡಾಗ ಅಥವಾ ಅವಘಡ, ದುರಂತದಲ್ಲಿ ಗಂಭೀರ ಪರಿಸ್ಥಿತಿಯಲ್ಲಿ ಇದ್ದವರನ್ನು ದೂರದ ಗೋವಾ, ಮಣಿಪಾಲ, ಮಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಮತ್ತಿತರ ಕಡೆ ಸುಸಜ್ಜಿತ ಆಸ್ಪತ್ರೆಗೆ ಕರೆದೊಯ್ಯಬೇಕು. ಗಂಭೀರ ಪರಿಸ್ಥಿತಿಯಲ್ಲಿ ಇರುವವರು ದೂರದ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟ ಉದಾಹರಣೆಗಳು ನಮ್ಮ ಮುಂದಿವೆ ಎಂದು ಶಾಸಕಿ ರೂಪಾಲಿ ನಾಯ್ಕ ಅವರು ಮುಖ್ಯಮಂತ್ರಿಗೆ ವಿವರಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.
ಈ ಹಿಂದೆಯೂ ಮನವಿ ಮಾಡಿದ್ದರು
ಶಾಸಕಿ ರೂಪಾಲಿ ಎಸ್.ನಾಯ್ಕ ಅವರು ಈ ಹಿಂದೆ ಮನವಿ ನೀಡಿದ್ದ ವೇಳೆ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು 2019ರ ಫೆ.8ರಂದು ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದು ಕ್ರಿಮ್ಸ್ ಕಟ್ಟಡ ಸ್ಥಿತಿಗತಿ, ಮೂಲಭೂತ ಸೌಲಭ್ಯ, ಹೊಸದಾಗಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವ ಬಗ್ಗೆ ವರದಿ ನೀಡುವಂತೆ ಕೋರಿದ್ದರು. ಜಿಲ್ಲಾಧಿಕಾರಿ ಅವರು ಎರಡು ತಿಂಗಳ ಬಳಿಕ, ಅಂದರೆ 2019ರ ಏ.29ರಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಶಾಸಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರಲ್ಲಿ ವಿಚಾರಿಸಿದಾಗ, ಸಮಿತಿ ರಚನೆ ಮಾಡಿ ವರದಿ ನೀಡುವುದಾಗಿ ತಿಳಿಸಿದ್ದು, ನಂತರ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಅಗತ್ಯ ಇದೆ ಎಂದು ವರದಿ ಸಲ್ಲಿಸಿದ್ದರು.
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಶಾಸಕಿ ಮನವಿ
2019ರ ಜು.31ರಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಮಂಜೂರು ಮಾಡುವಂತೆ ಮತ್ತೊಮ್ಮೆ ಶಾಸಕಿಯು ಸಿಎಂಗೆ ಮನವಿ ಮಾಡಿದ್ದರು. ಆಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಕಡತ ಮಂಡಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದರು. ಅಲ್ಲದೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೂ ಶಾಸಕಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಮನವಿ ಮಾಡಿದ್ದರು. ಸಚಿವರು ಸಮ್ಮತಿ ಸೂಚಿಸಿದ್ದರು. ನಂತರ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಕ್ರಿಮ್ಸ್ ನಿರ್ದೇಶಕರಿಗೆ ಪತ್ರ ಬರೆದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಅವಶ್ಯಕತೆ ಹಾಗೂ ಬೇಕಾಗಿರುವ ಸೌಲಭ್ಯಗಳ ಕುರಿತು ಅಭಿಪ್ರಾಯ ನೀಡಲು ಕೇಳಿದ್ದರು. ನಿರ್ದೇಶಕರು ಸಹ ಆಸ್ಪತ್ರೆಯ ಅಗತ್ಯವಿದೆ ಎಂದು ತಿಳಿಸಿದ್ದರು ಎನ್ನಲಾಗಿದೆ.
ಕನಸು ನನಸಾಗುವ ಸಂದರ್ಭ ಕೂಡಿಬಂದಿದೆ
ಕಾರವಾರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಆಗಲೇಬೇಕು ಎನ್ನುವುದು ನನ್ನ ಬಹುಕಾಲದ ಕನಸಾಗಿತ್ತು. ಇದಕ್ಕಾಗಿ ನಿರಂತರವಾಗಿ ಮುಖ್ಯಮಂತ್ರಿ, ಸಂಬಂಧಪಟ್ಟ ಸಚಿವರುಗಳನ್ನು ಆಗ್ರಹಿಸುತ್ತಲೇ ಇದ್ದೆ. ಈಗ ಕನಸು ನನಸಾಗುವ ಸಂದರ್ಭ ಕೂಡಿಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಲು ಸಮ್ಮತಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಎಲ್ಲ ಸಚಿವರುಗಳಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.